ನವಹೆಹಲಿ: ನಾಳೆಯಿಂದ (ಜು.20) ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಆರಂಭವಾಗಲಿದೆ, ಅದಕ್ಕೂ ಮುನ್ನ ಇಂದು ಸರ್ವಪಕ್ಷ ಸಭೆಯನ್ನು ಕರೆಯಲಾಗಿತ್ತು.
ಇದು ಲೋಕಸಭೆಯ ವಾಡಿಕೆಯಾಗಿದ್ದು, ಎಲ್ಲಾ ಪಕ್ಷಗಳನ್ನು ಒಟ್ಟುಗೂಡಿಸಿ ಅವರ ಸಮಸ್ಯೆಗಳನ್ನು ಪರಿಹರಿಸುವುದು ಇದರ ಉದ್ದೇಶವಾಗಿದೆ. ಇದರ ಜತೆಗೆ ಸದನದಲ್ಲಿ ಯಾವುದಾದರೂ ಪ್ರಮುಖ ವಿಚಾರದ ಬಗ್ಗೆ ಚರ್ಚೆಯಾಗಬೇಕಾ ಎಂಬ ಅಭಿಪ್ರಾಯವನ್ನು ಕೂಡ ಪಡೆಯುತ್ತಾರೆ. ಈ ಹಿಂದೆ ಸಂಸತ್ತಿನಲ್ಲಿ ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚೆಯಾಗಬೇಕು ಎಂದು ವಿಕ್ಷಪಗಳು ಒತ್ತಾಯಿಸಿತ್ತು, ಇದೀಗ ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ಈ ಬಗ್ಗೆ ಸಭೆಯಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು, ಮಣಿಪುರದಲ್ಲಿ 80 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 2 ತಿಂಗಳ ಹಿಂಸಾಚಾರ ಸೇರಿದಂತೆ ಸಂಸತ್ತಿನಲ್ಲಿ ಎಲ್ಲಾ ವಿಷಯಗಳನ್ನು ಚರ್ಚಿಸಲು ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದರು.
ಬೆಲೆ ಏರಿಕೆ ಮತ್ತು ಮಣಿಪುರದಂತಹ ವಿಷಯಗಳ ಬಗ್ಗೆ ಚರ್ಚೆ ಮಾಡಲೇಬೇಕು, ಇದರಲ್ಲಿ ಯಾವುದೇ ಸಂಧಾನ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಈ ಹಿಂದೆ ಹೇಳಿತ್ತು. ಮೇ 3 ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಪ್ರಾರಂಭವಾದಾಗಿನಿAದ ವಿಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರತಿಕ್ರಿಯೆಯನ್ನು ಕೇಳುತ್ತಿದೆ. ಇದೀಗ ಈ ಬಗ್ಗೆ ಚರ್ಚೆ ನಡೆಸಲು ಕೇಂದ್ರ ಒಪ್ಪಿಗೆ ನೀಡಿದೆ.