ಬೆಂಗಳೂರು: ಕರ್ನಾಟಕ ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನದ ಕುರಿತು ಆಗಸ್ಟ್ 15 ರ ನಂತರ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಪಕ್ಷದ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸಂಸತ್ ಅಧಿವೇಶನ ಸಂದರ್ಭದಲ್ಲಿ ಸಂಸದರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ. ಅದೇ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ, ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ಮಾಡಿದ್ದೇನೆ ಎಂದರು. ಲೋಕಸಭೆ ಚುನಾವಣೆ ಸಿದ್ದತೆ, ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ, ಸರ್ಕಾರದ ಬಗ್ಗೆ ಜನರ ಅಭಿಪ್ರಾಯ, ಸರ್ಕಾರದ ವಿರುದ್ದ ಮುಂದಿನ ಹೋರಾಟದ ಕುರಿತು ಚರ್ಚೆ ಮಾಡಿದ್ದೇವೆ. ಶೀಘ್ರವೇ ರಾಜ್ಯ ಸರ್ಕಾರದ ಎಲ್ಲ ವೈಫಲ್ಯಗಳ ವಿರುದ್ಧ ಬೃಹತ್ ಹೋರಾಟ ರೂಪಿಸಲಾಗುವುದು ಎಂದು ಅವರು ಹೇಳಿದರು.
ಕರ್ನಾಟಕದಲ್ಲಿ ಮೇ 13ರಂದು ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ 135 ಸ್ಥಾನ ಗಳಿಸಿ ಸರ್ಕಾರ ರಚನೆ ಮಾಡಿದೆ. ಅದಾಗಿ ಸುಮಾರು ಮೂರೂವರೆ ತಿಂಗಳಾದರೂ ಬಿಜೆಪಿಯು ಪ್ರತಿಪಕ್ಷ ನಾಯಕನ ನೇಮಕ ಮಾಡಿಲ್ಲ. ವಿಪಕ್ಷ ನಾಯಕನಿಲ್ಲದೇ ಬಜೆಟ್ ಅಧಿವೇಶನವೂ ನಡೆದಿದ್ದು ಬಿಜೆಪಿಯನ್ನು ಮುಜುಗರಕ್ಕೀಡುಮಾಡಿತ್ತು.