ಬೆಂಗಳೂರು : ಚುನಾವಣೆಯಲ್ಲಿ ಐದು ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ತಾನು ನುಡಿದಂತೆ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್ದಾರರಿಗೆ ಅಕ್ಕಿ ಕೊಡಲಾಗದೇ ತಲಾ 5 ಕೆ.ಜಿ. ಅಕ್ಕಿ ಹಾಗೂ ಉಳಿದ 5 ಕೆ.ಜಿ. ಬದಲಾಗಿ ಹಣವನ್ನು ನೀಡುತ್ತಿತ್ತು. ಆದರೆ, ಮುಂದಿನ ತಿಂಗಳಿಂದ ಎಲ್ಲರಿಗೂ ತಲಾ 10 ಕೆ.ಜಿ. ಅಕ್ಕಿಯನ್ನು ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಎಲ್ಲ ಅರ್ಹ ಪಡಿತರ ಫಲಾನುಭವಿಗಳಿಗೆ ಮುಂದಿನ ತಿಂಗಳಿನಿಂದ (ಅಕ್ಟೋಬರ್) ಎಲ್ಲ ಸದಸ್ಯರಿಗೂ ತಲಾ 10 ಕೆ.ಜಿ. ಅಕ್ಕಿ ನೀಡುತ್ತೇವೆ. ಈಗಾಗಲೇ ಅಕ್ಕಿ ಸರಬರಾಜು ಮಾಡುವ ಬಗ್ಗೆ ಟೆಂಡರ್ ಪ್ರಕ್ರಿಯೆ ನಡೆದಿದೆ. ಇನ್ನು ಮೊದಲನೆಯದಾಗಿ ಆರಂಭದಲ್ಲಿ ಬರಪೀಡಿತವೆಂದು ಘೋಷಣೆ ಮಾಡಲಾದ ತಾಲೂಕಿನಲ್ಲಿ ಹಣದ ಬದಲು ಅಕ್ಕಿ ಕೊಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
