ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತಿದ್ದಂತೆಯೇ ಬಿಜೆಪಿ ಹಾಗೂ ಜೆಡಿಎಸ್ ನಿಂದ ಸಾಕಷ್ಟು ನಾಯಕರು ಕಾಂಗ್ರೆಸ್ ಗೆ ಹಾರಲು ಸಿದ್ದತೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಆಪರೇಷನ್ ಹಸ್ತದ ವಿಚಾರ ಭಾರೀ ಸಂಚಲನಕ್ಕೆ ಕಾರಣವಾಗಿದ್ದು ಇದಕ್ಕೆ ಇಂಬು ನೀಡುವ ನಿಟ್ಟಿನಲ್ಲಿ ಸಚಿವ ಪ್ರಿಯಾಂಕ ಖರ್ಗೆ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಈ ಕುರಿತಂತೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ವಲಸಿಗರು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರುವ ವಿಚಾರವಾಗಿ ಚರ್ಚೆ ನಡೆಯುತ್ತಿದೆ,ಹೈದರಾಬಾದ್ ಕರ್ನಾಟಕ ಭಾಗದ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಕೆಲ ಶಾಸಕರು ಸಚಿವ ಸಲುವರಾಯಸ್ವಾಮಿ ಅವರ ಸಂಪರ್ಕದಲ್ಲಿದ್ದಾರೆ ಎನ್ನುವ ಸ್ಪೋಟಕ ಮಾಹಿತಿ ನೀಡಿದ್ದಾರೆ.ನಾವು ಆಪರೇಷನ್ ಹಸ್ತ ಮಾಡಲು ಹೊರಟಿಲ್ಲ. ಬಿಜೆಪಿ ಜೆಡಿಎಸ್ ಪಕ್ಷವನ್ನು ಒಡೆಯುವ ಉದ್ದೇಶ ನಮಗಿಲ್ಲ, ಯಾರ ಅಸ್ತಿತ್ವ ಏನು ಎಂಬುವುದನ್ನು ಜನರೇ ತೋರಿಸಿಕೊಟ್ಟಿದ್ದಾರೆ. ಬಿಜೆಪಿ ಜೆಡಿಎಸ್ ತನ್ನ ಅಸ್ತಿತ್ವ ಕಾಪಾಡಿಕೊಂಡು ಹೋಗಲಿ ನಾವು ಘರ್ ವಾಪ್ಸಿ ಮಾಡಿದರೆ ಬಿಜೆಪಿ-ಜೆಡಿಎಸ್ ನ ಅರ್ಧದಷ್ಟು ಸದಸ್ಯರು ಖಾಲಿಯಾಗುತ್ತಾರೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.