Share this news

ಮಂಗಳೂರು: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ರಾಜಕೀಯ ಪಕ್ಷದ ನಾಯಕರು ಸಾಕಷ್ಟು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದರಲ್ಲಿ ಕೆಲವು ವಿವಾದಾತ್ಮ ಹೇಳಿಕೆಗಳನ್ನು ನೀಡುವ ಮೂಲಕ ಸಕಷ್ಟು ಸುದ್ದಿಯಲ್ಲಿರುತ್ತಾರೆ.

ಈಗ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಟಿಕೆಟ್​ ಆಕಾಂಕ್ಷಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್   ಆಪ್ತ ಮಿಥುನ್ ರೈ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುತ್ತಿಗೆಯಲ್ಲಿ ನಡೆದ ನಮ್ಮೂರ ಮಸೀದಿ ನೋಡ ಬನ್ನಿ’ ಕಾರ್ಯಕ್ರಮದಲ್ಲಿ ಉಡುಪಿ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರು ಎಂದು ಹೇಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಸದ್ಯ ಸಾಮಾಜಿಕ ತಾಣಗಳಲ್ಲಿ ಮಿಥುನ್ ರೈ ವಿರುದ್ದ ಆಕ್ರೋಶ ವ್ಯಕ್ತವಾಗುತ್ತಿದೆ.

ಕಾಂಗ್ರೆಸ್ ನಾಯಕ ಮಿಥುನ್​ ರೈ ತಮ್ಮ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ. ಪತ್ರಿಕೆಗಳಲ್ಲಿ ಬಂದಿದ್ದ ವರದಿ ನೋಡಿ ನಾನು ಹೇಳಿಕೆ ನೀಡಿದ್ದೇನೆ. ನಾನು ಸೌಹಾರ್ದಯುತ ಹೇಳಿಕೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ಮಿಥುನ್ ರೈ ನೀಡಿರುವ ಹೇಳಿಕೆ ಸತ್ಯಕ್ಕೆ ದೂರವಾದದು. ಶ್ರೀಕೃಷ್ಣ ಮಠಕ್ಕೆ 800 ವರ್ಷಗಳ ಇತಿಹಾಸ ಇದೆ. ಹಿಂದೂಗಳಿಗೆ ಅವಮಾನ ಆಗುವಂತಹ ಹೇಳಿಕೆ ನೀಡಿದ್ದಾರೆ. ಮಿಥುನ್ ರೈ ಕೂಡಲೇ ಹಿಂದೂಗಳ ಕ್ಷಮೆ ಕೇಳಬೇಕು ಎಂದು ಮಿಥುನ್ ರೈ ಹೇಳಿಕೆಗೆ ಪ್ರಮೋದ್ ಮುತಾಲಿಕ್ ಖಂಡನೆ ವ್ಯಕ್ತಪಡಿಸಿದ್ದಾರೆ.

ಮುಸಲ್ಮಾನ ಅರಸರು ಯಾವುದೇ ಜಾಗವನ್ನು ಕೃಷ್ಣಮಠಕ್ಕಾಗಲಿ ಅನಂತೇಶ್ವರಕ್ಕಾಗಲಿ ನೀಡಿಲ್ಲ. ಅನಂತೇಶ್ವರ ದೇಗುಲಕ್ಕೆ ರಾಮಭೋಜನು ಭೂಮಿ ಕೊಟ್ಟ ಬಗ್ಗೆ ಉಲ್ಲೇಖ ಇದೆ. ಮುಂದೆ ಆ ಭೂಮಿಯೆ ಕೃಷ್ಣ ಮಠಕ್ಕೆ ಬಳಕೆಯಾಗಿದೆ. ಅನಂತೇಶ್ವರ ದೇಗುಲ ನಂತರ ಕೃಷ್ಣ ಮಠ ನಿರ್ಮಾಣಗೊಂಡಿದೆ ಎಂದು ಉಡುಪಿ ಶಾಸಕ ಕೆ ರಘುಪತಿ ಭಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯ ಇರುವ ಜಾಮಿಯಾ ಮಸೀದಿ ಕೂಡ ಜಂಗಮರ ಮಠದ ಜಾಗದಲ್ಲಿತ್ತು ಎಂದು ಹೇಳಲಾಗುತ್ತೆ. ಶೋಕಮಾತಾ ಚರ್ಚ್ ಕೃಷ್ಣ ಮಠದವರು ಕೊಟ್ಟ ಲೀಸ್ ಭೂಮಿಯಲ್ಲಿದೆ. ಉಡುಪಿ ಸೌಹಾರ್ದತೆಗೆ ಹೆಸರಾದ ಕ್ಷೇತ್ರ. ಮುಸಲ್ಮಾನರಿಗೂ ಮಸೀದಿ ಕಟ್ಟಲು ಜಂಗಮರ ಮಠ ಜಾಗ ಕೊಟ್ಟಿದೆ. ಕ್ರಿಶ್ಚಿಯನ್ ಸಮುದಾಯಕ್ಕೆ ಚರ್ಚ್ ಕಟ್ಟಲು ಕೃಷ್ಣಾಪುರ ಮಠ ಭೂಮಿ ಕೊಟ್ಟಿದೆ. ಹಾಜಿ ಅಬ್ದುಲ್ಲಾ ಸಾಹೇಬರು ಭಕ್ತರಾಗಿ ಕೃಷ್ಣ ಮಠಕ್ಕೆ ಸಹಾಯ ಮಾಡಿದ ಉಲ್ಲೇಖವಿದೆ. ಮಿಥುನ್ ರೈಗಳು ಯಾವ ಮುಸಲ್ಮಾನ ರಾಜನ ಬಗ್ಗೆ ಮಾತನಾಡುತ್ತಾರೋ ಗೊತ್ತಿಲ್ಲ. ಮಧ್ವಾಚಾರ್ಯರು 850 ವರ್ಷಗಳ ಹಿಂದೆ ಕೃಷ್ಣಮಠ ಸ್ಥಾಪಿಸಿದರು. ಮಿಥುನ್ ರೈ ಅಯೋಧ್ಯೆಯ ಪರಿಸ್ಥಿತಿ ಬಗ್ಗೆ ಚಿಂತನೆ ಮಾಡಲಿ. ಮಥುರದಲ್ಲಿ ಕೃಷ್ಣ ಮಂದಿರ, ಕಾಶಿ ಬಗ್ಗೆ ದೇಶದ ಜನತೆಗೆ ಗೊತ್ತಿದೆ. ಈಗ ಒಂದೊಂದೇ ಕ್ಷೇತ್ರಗಳು ಮುಕ್ತವಾಗುತ್ತಿದೆ ಎಂದು ರಘುಪತಿ ಭಟ್ ತಿರುಗೇಟು ನೀಡಿದರು.

Leave a Reply

Your email address will not be published. Required fields are marked *