ಬೆಂಗಳೂರು : ಕಾಂಗ್ರೆಸ್ ನ ನಾಲ್ಕನೇ ಪಟ್ಟಿ ರಿಲೀಸ್ ಆಗಿದ್ದು, ಒಟ್ಟು 7 ಕ್ಷೇತ್ರದ ಟಿಕೆಟ್ ಘೋಷಣೆ ಮಾಡಲಾಗಿದೆ. ಬಿಜೆಪಿಯಿಂದ ಕಾಂಗ್ರೆಸ್ಗೆ ಬಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿ ಒಟ್ಟು 7 ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ. ಪುಲಿಕೇಶಿನಗರ ಸೇರಿದಂತೆ ಒಟ್ಟು 8 ಕ್ಷೇತ್ರಗಳ ಪಟ್ಟಿಯನ್ನು ಬಾಕಿ ಉಳಿಸಿಕೊಂಡಿದೆ.

ಒಟ್ಟು 15 ಕ್ಷೇತ್ರಗಳಲ್ಲಿ ಟಿಕೆಟ್ ಘೋಷಣೆ ಬಾಕಿ ಉಳಿಸಿಕೊಂಡಿದ್ದ ಕೈ ಪಾಳಯ ಅಳೆದು ತೂಗಿ 7 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮೊದಲೇ ನಿರ್ಧರಿಸಿದಂತೆ ಹುಬ್ಬಳ್ಳಿ -ಧಾರವಾಡ ಕೇಂದ್ರಕ್ಕೆ ಬಿಜೆಪಿಯಿಂದ ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಇನ್ನು ಮುಖ್ಯವಾಗಿ ಅಖಂಡ ಶ್ರೀನಿವಾಸ್ ಶಾಸಕರಾಗಿದ್ದ ಪುಲಕೇಶಿ ನಗರ ಕ್ಷೇತ್ರದಲ್ಲಿ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗುತ್ತದೆ ಎಂದು ನಿರೀಕ್ಷೆ ಇಟ್ಟುಕೊಂಡಿದ್ದರೂ, ಇನ್ನೂ ಬಾಕಿ ಉಳಿಸಿಕೊಂಡಿದೆ.

- ಲಿಂಗಸೂರು : ದುರ್ಗಪ್ಪ ಎಸ್. ಹೊಲಗೇರಿ
- ಹುಬ್ಬಳ್ಳಿ ಧಾರವಾಡ ಸೆಂಟ್ರಲ್ : ಜಗದೀಶ್ ಶೆಟ್ಟರ್
- ಹುಬ್ಬಳ್ಳಿ ಧಾರವಾಡ ಪಶ್ಚಿಮ : ದೀಪಕ್ ಚಿಂಚೋಳಿ
- ಶಿಗ್ಗಾಂವಿ : ಮಹಮ್ಮದ್ ಯೂಸುಫ್ ಸವಣೂರು
- ಹರಿಹರ : ನಂದಗಾವಿ ಶ್ರೀನಿವಾಸ್
- ಚಿಕ್ಕಮಗಳೂರು : ಎಚ್.ಡಿ. ತಮ್ಮಯ್ಯ
- ಶ್ರವಣಬೆಳಗೊಳ: ಎಂಎ. ಗೋಪಾಲಸ್ವಾಮಿ
ಬಾಕಿ ಉಳಿಸಿಕೊಂಡಿರುವ ಕ್ಷೇತ್ರಗಳು ಇಲ್ಲಿವೆ:
ಪುಲಕೇಶಿ ನಗರ
ಸಿವಿ ರಾಮನ್ ನಗರ
ಮುಳಬಾಗಿಲು
ರಾಯಚೂರು ನಗರ
ಅರಕಲಗೂಡು
ಮಂಗಳೂರು ಉತ್ತರ
ಶಿಡ್ಲಘಟ್ಟ
ಕೆ ಆರ್ ಪುರಂ

ಪಟ್ಟಿ ಬಿಡುಗಡೆಗೂ ಮುನ್ನವೇ ನಾಮಪತ್ರ ಸಲ್ಲಿಕೆ ಸಿದ್ಧತೆ: ಕಾಂಗ್ರೆಸ್ನ ನಾಲ್ಕನೇ ಪಟ್ಟಿ ಬಿಡುಗಡೆ ಮುನ್ನವೇ ಲಿಂಗಸಗೂರಿನ ಹಾಲಿ ಶಾಸಕ ದುರ್ಗಪ್ಪ.ಎಸ್. ಹೂಲಗೇರಿ ಅವರು ತಮ್ಮ ಬೆಂಬಲಿಗರಿಗೆ ಕರೆ ಮಾಡಿ ನಾನು 20 ನೇ ತಾರೀಖು ನಾಮಪತ್ರ ಸಲ್ಲಿಸುತ್ತೇನೆ, ಹಾಗಾಗಿ ಕಾರ್ಯಕರ್ತರು, ಬೆಂಬಲಿಗರು ಬರಬೇಕು ಎಂದು ಮನವಿ ಮಾಡಿದ್ದರು. ಇವರಿಗೆ ಕಾಂಗ್ರೆಸ್ ಹೈಕಮಾಂಡ್ನಿಂದ ಪಟ್ಟಿ ಬಿಡುಗಡೆಗೂ ಮುನ್ನವೇ ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ, ರಾಜ್ಯ ನಾಯಕರು ನನ್ನನ್ನು ಕಾಂಗ್ರೆಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ. ಹಾಗಾಗಿ ನಾಮಪತ್ರ ಸಲ್ಲಿಕೆ ಮಾಡುವ ದಿನ ಬಂದು ನನ್ನ ಬೆಂಬಲಿಸಬೇಕು ಎಂದು ಮನವಿ ಮಾಡಿದ್ದರು.

ಶೆಟ್ಟರ್ ಬೇಡ- ಸಿಎಂ ಬೊಮ್ಮಾಯಿ ವಿರುದ್ಧ ಸ್ಪರ್ಧಿಸಿ: ಹುಬ್ಬಳ್ಳಿಯ ಸೆಂಟ್ರಲ್ ಕ್ಷೇತ್ರದಿಂದ ಜಗದೀಶ್ ಶೆಟ್ಟರ್ ವಿರುದ್ದ ಸ್ಪರ್ಧಿಸಲು ಸಿದ್ಧಗೊಂಡಿದ್ದ ಕಾಂಗ್ರೆಸ್ ಮುಖಂಡ ಮಹಮ್ಮದ್ ಸವಣೂರ ಅವರಿಗೆ ಈಗ ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಮಹಮ್ಮದ್ ಸವಣೂರು ಸ್ಪರ್ಧೆ ಮಾಡಲಿದ್ದಾರೆ. ಇವರು ಹುಬ್ಬಳ್ಳಿ ಅಂಜುಮನ್ ಸಂಸ್ಥೆ ಅಧ್ಯಕ್ಷರಾಗಿದ್ದು, ಸ್ಥಳೀಯವಾಗಿ ಪ್ರಭಾವಿ ವ್ಯಕ್ತಿಯಾಗಿದ್ದರು.

ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದ್ದು, ಏಪ್ರಿಲ್ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಾಗೆ, ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್ 24 ಆಗಿದೆ. ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.


