ದೇವದುರ್ಗ: ಸಮುದಾಯಗಳು ಸಮಾವೇಶಗಳ ಮೂಲಕ ಸಂಘಟಿಸಿ ಸಂವಿಧಾನದ ಹಕ್ಕುಗಳನ್ನು ಪಡೆಯಲು ಹೋರಾಡಬೇಕು.ಕುರುಬರು ಎಲ್ಲಾ ರಂಗಗಳಲ್ಲಿಯೂ ಮುಂದೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ವತಿಯಿಂದ ಆಯೋಜಿಸಿದ್ದ ಹಾಲುಮತ ಸಂಸ್ಕೃತಿ ವೈಭವ 2024 ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ಸಮಾಜದಲ್ಲಿ ಅವಕಾಶ ದೊರೆತವರು ಮುಂದುವರೆದರು ಮೇಲ್ಜಾತಿಯವರಾದರು, ಅವಕಾಶ ವಂಚಿತರು ಹಿಂದುಳಿದು ಕೆಳಜಾತಿಯವರಾದರು, ಚಾತುರ್ವಣ ವ್ಯವಸ್ಥೆಯನ್ನು ದೇವರು ಮಾಡಲಿಲ್ಲ. ಮನುಷ್ಯನ ಸ್ವಾರ್ಥದಿಂದಾಗಿ ನಾವು ಮಾಡಿಕೊಂಡಿದ್ದೇವೆ. ಮಹಿಳೆಯರೂ ಅವಕಾಶ ವಂಚಿತರಾಗಿದ್ದರು. ಅಂಬೇಡ್ಕರ್ ಅವರು ಎಲ್ಲರಿಗೂ ಶಿಕ್ಷಣ ಕಡ್ಡಾಯ ಎಂದು ಸಂವಿಧಾನದಲ್ಲಿ ಹೇಳಿದ್ದಾರೆ. ಅಕ್ಷರ ಸಂಸ್ಕೃತಿ ಯಿಂದ ವಂಚಿತರಾದವರು ಶೂದ್ರರಾದರು. ಸಮಾಜವನ್ನು ವಿಂಗಡಿಸಿ ಸ್ವಾರ್ಥಕ್ಕಾಗಿ ಲಾಭ ಗಳಿಸುವ ಪ್ರಯತ್ನವನ್ನು ಒಂದು ವರ್ಗ ಮಾಡಿತ್ತು ಎಂದು ಮರೆಯಬಾರದು. ಇದರ ಲಾಭ ಪಡೆದವರು ಈಗಲೂ ಆ ಪ್ರಯತ್ನ ವನ್ನು ಮಾಡುತ್ತಿದ್ದಾರೆ. ಶೋಷಣೆಗೆ ಒಳಪಟ್ಟವರು ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಕುರುಬರೂ ಇದರಲ್ಲಿ ಸೇರಿದ್ದಾರೆ ಎಂದರು. ಮೇಲು , ಕೀಳೆಂದು ಜಾತಿಬೇಧ ಮಾಡುವುದು ನಿರರ್ಥಕ ಎಂದು ಬಸವಾದಿ ಶರಣರು, ಕನಕದಾಸರು ತಿಳಿಸಿದ್ದರು. ಕಾಯಕ ಮತ್ತು ದಾಸೋಹ ದಂತಹ ಮೌಲ್ಯಗಳನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು.
ಕೇವಲ ರಾಜಕೀಯ ಪ್ರಜಾಪ್ರಭುತ್ವ ಅಲ್ಲದೇ ಆರ್ಥಿಕ ಹಾಗೂ ಸಾಮಾಜಿಕ ಪ್ರಜಾಪ್ರಭುತ್ವ ಸ್ಥಾಪಿತವಾಗಬೇಕು ಎಂದು ಡಾ. ಅಂಬೇಡ್ಕರ್ ಪ್ರತಿಪಾದಿಸಿದ್ದರು. ಹಿಂದುಳಿದವರು ಕೈಗಾರಿಕೆ, ಶಿಕ್ಷಣ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲಿಯೂ ಅಭಿವೃದ್ಧಿ ಹೊಂದಿ ಮುಖ್ಯವಾಹಿನಿಗೆ ಬರಬೇಕು. ಶಿಕ್ಷಣ ಪಡೆದಾಗ ಮಾತ್ರ ದೌರ್ಜನ್ಯಗಳನ್ನು ಎದುರಿಸಿ ಸ್ವಾವಲಂಬಿಗಳಾಗಲು ಸಾಧ್ಯ ಎಂದರು ಜನರಿಗೆ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ತುಂಬಲು ಸರ್ಕಾರ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಶಕ್ತಿ ಯೋಜನೆಯಡಿ 130.28 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. 1.17 ಕೋಟಿ ಕುಟುಂಬದ ಯಜಮಾನಿಗೆ ತಲಾ 2000 ರೂ. ಗೃಹಲಕ್ಷ್ಮಿ ಯೋಜನೆ, 200 ಯೂನಿಟ್ ಉಚಿತ ವಿದ್ಯುತ್ , 5 ಕೆಜಿ ಅಕ್ಕಿ ಹಾಗೂ ಯುವನಿಧಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಬೆಲೆ ಏರಿಕೆಯ ಕಾಲಮಾನದಲ್ಲಿ ಜನರಲ್ಲಿ ಕೊಂಡುಕೊಳ್ಳುವ ಶಕ್ತಿ ಹೆಚ್ಚಾಗಬೇಕು. ಆದ್ದರಿಂದ ಸಾರ್ವತ್ರಿಕ ಮೂಲ ಆದಾಯ ತತ್ವವನ್ನಾಧರಿಸಿ ಗ್ಯಾರಂಟಿ ಯೋಜನೆಗಳನ್ನು ನೀಡಲಾಗಿದೆ. ಇಂತಹ ಜನಪರ ಯೋಜನೆಗಳಿಗೆ ಟೀಕೆಗಳು ಬಂದರೂ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಶೋಷಿತರು, ಬಡವರು, ದೀನದಲಿತರು, ಅಲ್ಪಸಂಖ್ಯಾತರು, ದುರ್ಬಲವರ್ಗದವರ ಪರ ನಾನು ಸದಾ ನಿಂತಿರುತ್ತೇನೆ ಎಂದರು.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ