Share this news

ಬೆಂಗಳೂರು: ನಿರ್ದಿಷ್ಟ ಧಾಟಿಯಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಲು ಹೊಂದಿರುವ ಶಾಸನಾತ್ಮಕ ಅಧಿಕಾರದ ಬಗ್ಗೆ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಚ್ ಶುಕ್ರವಾರ ನಿರ್ದೇಶಿಸಿದೆ.
ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿಯೇ ನಾಡಗೀತೆಯನ್ನು 2 ನಿಮಿಷ 30 ಸೆಕೆಂಡ್‌ಗಳಲ್ಲಿ ಹಾಡಬೇಕು ಎಂಬುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ 2022ರ ಸೆ.25ರಂದು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸುಗಮ ಸಂಗೀತ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ ಈ ಸೂಚನೆ ನೀಡಿದೆ.

ನಾಡಗೀತೆ ವಿಚಾರವು ಅತ್ಯಂತ ಸೂಕ್ಷ್ಮ ಹಾಗೂ ಭಾವನಾತ್ಮಕ ವಿಚಾರವಾಗಿದೆ. ನಾಡಗೀತೆಗೆ ಒಂದು ತೂಕ ಹಾಗೂ ಮೌಲ್ಯವಿದೆ. ಈ ಪ್ರಕರಣದಲ್ಲಿ ಅರ್ಜಿದಾರರು ಎತ್ತಿರುವ ಪ್ರಶ್ನೆಯಂತೆ ನಾಡಗೀತೆಯನ್ನು ಜನರು ತಮ್ಮ ಮನಸ್ಸಿಗೆ ಬಂದ ರಾಗದಲ್ಲಿ ಹಾಡಲು ಸರ್ಕಾರ ಏಕೆ ನಿರ್ಬಂಧ ಹೇರಿದೆ? ನಿರ್ದಿಷ್ಟ ರಾಗದಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಲು ರಾಜ್ಯ ಸರ್ಕಾರಕ್ಕೆ ಯಾವ ರೀತಿಯ ಶಾಸನಾತ್ಮಕ ಅಧಿಕಾರವಿದೆ ಎಂಬುದನ್ನು ನ್ಯಾಯಾಲಯ ಪರಿಶೀಲನೆ ನಡೆಸಬೇಕಿದೆ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟರು.

ಅಲ್ಲದೆ, ನಾಡಗೀತೆಯನ್ನು ನಿರ್ದಿಷ್ಟಧಾಟಿಯಲ್ಲಿ ಹಾಡುವುದನ್ನು ಕಡ್ಡಾಯಗೊಳಿಸಲು ಸರ್ಕಾರಕ್ಕೆ ಇರುವ ಶಾಸನಾತ್ಮಕ ಅಧಿಕಾರವೇನು? ಯಾವ ರಾಜ್ಯದಲ್ಲಿ ನಾಡಗೀತೆಯನ್ನು ಇಂತಹದ್ದೇ ಧಾಟಿಯಲ್ಲಿ ಹಾಡಬೇಕು ಎಂಬ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಸಮಗ್ರವಾದ ವಿವರಣೆ ನೀಡಬೇಕು ಎಂದು ಸರ್ಕಾರಿ ವಕೀಲರಿಗೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ.

Leave a Reply

Your email address will not be published. Required fields are marked *