ದಾವಣಗೆರೆ : ಪ್ರಜಾಪ್ರಭುತ್ವದಲ್ಲಿ ಜನರೇ ಮಾಲಿಕರಾಗಿದ್ದು ಜನರ ಆಶೋತ್ತರಗಳಿಗೆ ಸ್ಪಂಧಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಸೋಮವಾರ ದಾವಣಗೆರೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದರು. ಜನ ಬದಲಾವಣೆ ಬಯಸಿದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸದೇ ಉಡಾಫೆ, ಅಸಡ್ಡೆ ಮಾಡುವ ಅಧಿಕಾರಿಗಳಿಗೆ ಜಾಗವಿಲ್ಲ, ಅವರ ಮೇಲೆ ಯಾರದೂ ಮುಲಾಜಿಲ್ಲದೇ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಅಧಿಕಾರಿಗಳು ಜನಪ್ರತಿನಿಧಿಗಳ ಜೊತೆ ಉತ್ತಮವಾದ ಸಂಬಂಧ ಇಟ್ಟುಕೊಳ್ಳಬೇಕು. ಅವರು ಪ್ರತಿನಿಧಿ, ಅಧಿಕಾರಿಗಳು ಜನ ಸೇವಕರು, ಜನರ ಕಷ್ಟ, ಸುಖಕ್ಕೆ ಸ್ಪಂದಿಸುವ ಕೆಲಸ ಮಾಡಬೇಕು. ಆದರೆ ವಿಳಂಬ ಮಾಡಬಾರದು. ವಿಳಂಬ ಮಾಡುವುದು ಸಹ ಒಂದು ರೀತಿಯ ಭ್ರಷ್ಟಾಚಾರ ಮಾಡಿದಂತೆ. ಜಿಲ್ಲಾ ಮಟ್ಟದಲ್ಲಿ ಜನಸ್ನೇಹಿ ಆಡಳಿತ ಇರಬೇಕು. ಜನರು ಕಚೇರಿಗಳಿಗೆ ಬಂದಾಗ ಗೌರವಯುತವಾಗಿ ನಡೆದುಕೊಂಡು, ಕಷ್ಟಗಳಿಗೆ ಪರಿಹಾರ ಮಾಡುವುದಲ್ಲದೇ ಜನರ ಜೊತೆ ಸೌಜನ್ಯಯುತವಾಗಿ ನಡೆದುಕೊಳ್ಳಬೇಕು ಎಂದರು. ದಾವಣಗೆರೆ ಜಿಲ್ಲೆ ಬಹಳ ಪ್ರಗತಿ ಪರವಾದ ಜಿಲ್ಲೆಯಾಗಿದ್ದು ಇನ್ನಷ್ಟು ಪ್ರಗತಿ ಕಾಣಬೇಕಾಗಿದೆ. ಜಿಲ್ಲೆಯ ಅಭಿವೃದ್ದಿಯಲ್ಲಿ ವಿವಿಧ ಇಲಾಖೆಗಳ ಪಾತ್ರ ಬಹಳ ಪ್ರಮುಖವಾಗಿದೆ. ತಹಶೀಲ್ದಾರರ ಕಚೇರಿ ಜನರಿಗೆ ಹೆಚ್ಚು ಸೇವೆ ಕೊಡುವ ಕಚೇರಿಯಾಗಿದ್ದು ಇಲ್ಲಿ ಲಂಚಗುಳಿತನ, ಅಲೆದಾಡಿಸುವುದು ಹೆಚ್ಚಿದೆ ಎಂಬ ದೂರುಗಳಿವೆ, ಇದಕ್ಕೆ ಅವಕಾಶ ನೀಡುವುದಿಲ್ಲ. ತಹಶೀಲ್ದಾರ್ ಕಚೇರಿ, ಪೊಲೀಸ್ ಸ್ಟೇಷನ್, ತಾಲ್ಲೂಕು ಪಂಚಾಯತ್, ಕೃಷಿ, ರೇಷ್ಮೆ, ತೋಟಗಾರಿಕೆ, ಸಮಾಜ ಕಲ್ಯಾಣ ಸೇರಿದಂತೆ ಇಲಾಖೆಗಳು ಸಮಾಜಮುಖಿಯಾಗಿ ಕೆಲಸ ಮಾಡಬೇಕು ಎಂದರು.
ಜಿಲ್ಲಾಧಿಕಾರಿ ತಹಶೀಲ್ದಾರರ ಕಚೇರಿಗೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿಗಳಿಗೆ, ಆಸ್ಪತ್ರೆಗಳಿಗೆ ಭೇಟಿ ನೀಡಬೇಕು. ಇದರಿಂದ ಕೆಳಗಿನ ಅಧಿಕಾರಿಗಳು ಜಾಗೃತರಾಗುವರು. ಅಧಿಕಾರಿಗಳು ತಮ್ಮ ಜವಾಬ್ದಾರಿ, ಕರ್ತವ್ಯವನ್ನು ಸಮಾಜದ ಅಭಿವೃದ್ದಿಗಾಗಿ ಮಾಡಬೇಕು. ಮೇಲಾಧಿಕಾರಿಗಳು ಪದೇ ಪದೇ ಭೇಟಿ ನೀಡಿ ಕೆಲಸ ಕಾರ್ಯಗಳ ಪರಿಶೀಲನೆ, ಉಸ್ತುವಾರಿ ಮಾಡಲಿಲ್ಲವೆಂದರೆ ಭ್ರಷ್ಟಾಚಾರ ಕಡಿಮೆಯಾಗುವುದಿಲ್ಲ. ಜಿಲ್ಲಾ ಮಟ್ಟದ ಆಡಳಿತ ಸದಾ ಪಾರದರ್ಶಕವಾಗಿರಬೇಕು ಎಂದರು.
ದೂರುಗಳಿಗೆ ಪ್ರತಿಕ್ರಿಯಿಸಿ; ಪತ್ರಿಕೆಗಳು, ಟಿ.ವಿ.ಗಳಲ್ಲಿ ಮತ್ತು ಸಾರ್ವಜನಿಕರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸುವ ಕೆಲಸ ಮಾಡಬೇಕು. ಅನೇಕ ಅಧಿಕಾರಿಗಳು ಕ್ಷೇತ್ರಗಳಿಗೆ ಹೋಗದೆ ಹವಾನಿಯಂತ್ರಿತ ಕೊಠಡಿಗಳಲ್ಲಿ ಕೂತು ಹೋಗುತ್ತಾರೆ. ಸರ್ಕಾರ ವಾಹನ ಸೇರಿದಂತೆ ಎಲ್ಲಾ ಸೌಲಭ್ಯ ನೀಡಿದ್ದು ಐಷರಾಮಿ ಜೀವನ ಮಾಡಲಿ ಎಂದಲ್ಲ, ಜನರ ಕೆಲಸ ಮಾಡಲಿ ಎಂದು, ತಮ್ಮ ಅಧಿಕಾರ ದುರುಪಯೋಗ ಮಾಡಿಕೊಳ್ಳದೇ ಜನರ ಕೆಲಸ ಮಾಡಬೇಕೆಂಬುದನ್ನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು ಎಂದರು. ಮುಂಗಾರಿನಲ್ಲಿ ಬಿದ್ದ ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ ಸುಮಾರು 20 ಸಾವಿರ ಹೆಕ್ಟೇರ್ ಬೆಳೆಗಳಿಗೆ ಹಾನಿಯಾಗಿದ್ದು ಇದಕ್ಕೆ ಎಸ್.ಡಿ.ಆರ್.ಎಫ್ ಮಾರ್ಗಸೂಚಿಯನ್ವಯ ಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸಲಾಗುತ್ತದೆ ಎಂದರು. 9 ರಿಂದ ರಾಜ್ಯದಲ್ಲಿ ಮುಂಗಾರು ಮಳೆ ಪ್ರವೇಶಿಸುವ ಮುನ್ಸೂಚನೆ ಇದ್ದು ಕೃಷಿ ಚಟುವಟಿಕೆಗಳು ಹೆಚ್ಚಾಗಲಿವೆ. ಈ ವೇಳೆ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕÀಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಜಂಟಿ ಕೃಷಿ ನಿರ್ದೇಶಕರು ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಬಿತ್ತನೆ ಬೀಜ, ರಸಗೊಬ್ಬರ, ರಾಸಾಯಿನಿಕಗಳ ದಾಸ್ತಾನಿನ ಬಗ್ಗೆ ನಿಗಾವಹಿಸಬೇಕು. ಇದೇ ವೇಳೆ ಪ್ರವಾಹ ತಡೆಗೂ ಪೂರ್ವ ಸಿದ್ದತಾ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಬೇಕು ಎಂದರು.
ನೈತಿಕ ಪೊಲೀಸ್ಗಿರಿಗೆ ಅವಕಾಶ ಇಲ್ಲ;
ಕಾನೂನು ಸುವ್ಯವಸ್ಥೆ ಕಾಪಾಡಲು ಆಯಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ಮೇಲೆ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಯಾವುದೇ ದೂರು ಬಾರದಂತೆ ನೋಡಿಕೊಳ್ಳಬೇಕು. ಆದರೆ ಯಾವುದೇ ನೈತಿಕ ಪೊಲೀಸ್ಗಿರಿಗೆ ಅವಕಾಶ ಇರಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.