ಕಲಬುರಗಿ: ಕರ್ನಾಟಕದಲ್ಲಿ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವ ಮಾತು ಏನಿದ್ದರೂ ಕೇವಲ ಊಹಾಪೋಹ ಎಂದು
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಇದೇವೇಳೆ ಮಾಲ್ಡೀವ್ಸ್ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿಯವರನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ಮೋದಿಯ ವಿದೇಶ ನೀತಿ ಸರಿಯಿಲ್ಲ ಎಂದು ಟೀಕಿಸಿದ್ದಾರೆ.
ಒಂದು ದಿನದ ಕಲಬುರಗಿ ಭೇಟಿಗಾಗಿ ಮೆಂಗಳವಾರ ಇಲ್ಲಿನ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷದ ಹೈಕಮಾಂಡ್ ಎದುರು ಇಂತಹ ಯಾವುದೇ ಪ್ರಸ್ತಾವನೆ ಇಲ್ಲ. ಇದಕ್ಕಿಂತಲೂ ಹೆಚ್ಚಿನ ಸ್ಪಷ್ಟನೆ ಬೇಕಿದ್ದರೆ ನೀವು ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನೇ ಕೇಳಿ ಎಂದು ಹೇಳಿದರು. ಎಲೆಕ್ಷನ್ ಸಂದರ್ಭದಲ್ಲಿ ಇಂತಹ ವಿಚಾರ ಬರಬಾರದು. ಸಧ್ಯಕ್ಕೆ ಸರ್ಕಾರ ನಡೆಸುವ ಕಡೆಗೆ, ಸಮಸ್ಯೆಗಳ ಕಡೆಗೆ ಗಮನ ಕೊಡಬೇಕು. ನಮ್ಮ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವ ಕಡೆಗೆ ಗಮನ ಕೊಡಬೇಕು. ಆ ಕೆಲಸ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಪರಮೇಶ್ವರ್ ಎಲ್ಲರೂ ಸೇರಿ ಮಾಡುತ್ತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರಕ್ಕೆ ಬುಧವಾರ ಸಭೆ ಕರೆಯಲಾಗಿದೆ. ಕರ್ನಾಟಕದ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ನಾಳೆ ಸಭೆ ನಡೆಯಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಸಭೆಯಲ್ಲಿ ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿಯನ್ನು ಹಾಕಬೇಕು ಎನ್ನುವುದರ ಬಗ್ಗೆ ಚರ್ಚಿಸಲಾಗುವುದು. ಇನ್ನು ದೇಶದಲ್ಲಿ ಲೋಕಸಭಾ ಚುನಾವಣೆ ಗೆಲ್ಲಲು ಇಂಡಿಯಾ ಒಕ್ಕೂಟ ಒಂದಾಗಿ, ಒಗ್ಗಟ್ಟಾಗಿ ಹೋಗುವ ನಿರ್ಣಯ ಕೈಗೊಂಡಿದೆ. ಅದಕ್ಕೆ ಬದ್ಧರಾಗಿ ಎಲ್ಲರೂ ಒಂದಾಗಿ ಕೆಲಸ ನಿರ್ವಹಿಸುತ್ತೇವೆ. ನಾಳೆ ದೆಹಲಿಯಲ್ಲಿ ಅನೇಕ ಘಟಕಗಳ ಸಭೆ ಕರೆಯಲಾಗಿದೆ. ಎಲ್ಲಾ ಮತಕ್ಷೇತ್ರಗಳಿಗೆ ಈಗಾಗಲೇ ವೀಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ