ನವದೆಹಲಿ: ಸಂಸತ್ತಿನಲ್ಲಿ ಇಡೀ ದೇಶವೇ ಬೆಚ್ಚಿಬೀಳುವ ಮಟ್ಟಿಗೆ ಬುಧವಾರ ಭಾರೀ ಭದ್ರತಾ ಲೋಪವಾಗಿದ್ದು, ಇಬ್ಬರು ಅಪರಿಚಿತ ವ್ಯಕ್ತಿಗಳು ಪ್ರೇಕ್ಷಕರ ಗ್ಯಾಲರಿಯಿಂದ ನುಗ್ಗಿಬಂದು ಲೋಕಸಭೆ ಕಲಾಪದ ವೇಳೆ ಹೊಗೆ ಬಾಂಬ್ ಸಿಡಿಸಿದ ಘಟನೆಯ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ಆದೇಶಿಸಿದೆ.
ಲೋಕಸಭಾ ಸಚಿವಾಲಯದ ಕಾರ್ಯದರ್ಶಿಯ ಈ ಕುರಿತು ಗೃಹಸಚಿವಾಲಯಕ್ಕೆ ಪತ್ರ ಬರೆದಿದ್ದು ಈ ಹಿನ್ನೆಲೆಯಲ್ಲಿ ಸಂಸತ್ತಿನ ಭದ್ರತಾ ಲೋಪ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ.
ಸಿಆರ್ಪಿಎಫ್ನ ಡಿಜಿ ಅನೀಶ್ ದಯಾಳ್ ಸಿಂಗ್ ನೇತೃತ್ವದಲ್ಲಿ ಇತರ ಭದ್ರತಾ ಸಂಸ್ಥೆಗಳ ಸದಸ್ಯರು ಮತ್ತು ತಜ್ಞರೊಂದಿಗೆ ವಿಚಾರಣಾ ಸಮಿತಿ ರಚಿಸಲಾಗಿದೆ ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಸಮಿತಿಯು ತನಿಖೆ ನಡೆಸಿ, ಲೋಪಗಳನ್ನು ಗುರುತಿಸುತ್ತದೆ ಮತ್ತು ಮುಂದಿನ ಕ್ರಮಗಳ ಬಗ್ಗೆ ಶಿಫಾರಸು ಮಾಡಲಿದೆ. ಅಲ್ಲದೇ ಸಮಿತಿಯು ಸಂಸತ್ತಿನಲ್ಲಿ ಭದ್ರತೆಯನ್ನು ಸುಧಾರಿಸುವ ಸಲಹೆಗಳನ್ನು ಒಳಗೊಂಡಂತೆ ಶಿಫಾರಸುಗಳ ವರದಿಯನ್ನು ಶೀಘ್ರವಾಗಿ ಸಲ್ಲಿಸಲಿದೆ ಎಂದು ಗೃಹಸಚಿವಾಲಯ ಹೇಳಿದೆ.
ಸಂಸತ್ ಭವನಕ್ಕೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಲೋಕಸಭೆ ಕಲಾಪದ ವೇಳೆ ಸಂದರ್ಶಕರ ಗ್ಯಾಲರಿಯಿಂದ ನುಗ್ಗಿಬಂದು ಬಣ್ಣದ ಹೊಗೆ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಅಧಿಕಾರಿಗಳು ಆರು ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಈ ಕೃತ್ಯದಲ್ಲಿ ಭಯೋತ್ಪಾದಕ ಸಂಘಟನೆ ಅಥವಾ ಖಲಿಸ್ತಾನ ಸಂಘಟನೆಯ ಕೈವಾಡದ ಬಗ್ಗೆಯೂ ತನಿಖೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ








