Share this news

ವಿಜಯಪುರ: ಮುಂಬರುವ ಲೋಕಸಭೆ ಚುನಾವಣೆ ಮುಂಚೆ ಅಥವಾ ಅದರ ನಂತರ ರಾಜಕೀಯ ವಲಯದಲ್ಲಿ ಅನಾಹುತವೊಂದು ನಡೆಯಲಿದೆ. ಈ ಅನಾಹುತಕ್ಕೆ ಕಾಂಗ್ರೆಸ್ ಭಯಗೊಂಡಿದೆ. ಅದಕ್ಕಾಗಿಯೇ ಬಿಜೆಪಿಯವರನ್ನು ತಮ್ಮತ್ತ ಸೆಳೆದು ಬರುವ ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಸಂಚು ಹೂಡುತ್ತಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ನಾಯಕರಿಗೆ ತಮ್ಮ ಪಕ್ಷದ 135 ಶಾಸಕರ ಮೇಲೇ ವಿಶ್ವಾಸವಿಲ್ಲ. ಹೀಗಾಗಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಯೋಜಿಸಿ ಬಿಜೆಪಿಯವರಿಗೆ ಗಾಳ ಹಾಕುತ್ತಿದ್ದಾರೆ. ಬಿಜೆಪಿಯವರು ಬಂದರೆ ಮಾತ್ರ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನು ಕಾಂಗ್ರೆಸ್ ಮುಖಂಡರು ಹೊಂದಿದ್ದಾರೆ ಎಂದು ಲೇವಡಿ ಮಾಡಿದರು. ಕರ್ನಾಟಕದಲ್ಲಿ ಬಿಜೆಪಿ ಮುಳುಗುತ್ತಿದೆ ಎಂದು ಕಾಂಗ್ರೆಸಿಗರು ಗುಲ್ಲೆಬ್ಬಿಸಿದ್ದಾರೆ. ಆದರೆ, ಬಿಜೆಪಿ ಸೋಲಿನಿಂದ ಕಂಗೆಡದೆ ಫಿನಿಕ್ಸ್ ಪಕ್ಷಿಯಂತೆ ಮತ್ತೆ ಪುಟಿದೇಳಲಿದೆ ಎಂದರು.

ವಿಜಯಪುರ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ರೋಗಿಗಳ ನೋಂದಣಿ ಕೊಠಡಿ ಕಾಮಗಾರಿ ಉದ್ಘಾಟನೆ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಜೆಪಿಯವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ವಿಚಾರದ ಕುರಿತು ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಮುಳುಗುತ್ತಿದೆ ಎಂದು ಗುಲ್ಲೆಬ್ಬಿಸಿರುವ ಕಾಂಗ್ರೆಸ್‌ನವರು ಜನರಲ್ಲಿ ಗೊಂದಲ ಹುಟ್ಟುಹಾಕಲು ಯತ್ನಿಸುತ್ತಿದ್ದಾರೆ. ಆದರೆ, ಬಿಜೆಪಿ ಫಿನಿಕ್ಸ್ ಪಕ್ಷಿಯಂತೆ ಮತ್ತೆ ಪುಟಿದೇಳಲಿದೆ ಎಂದರು.

Leave a Reply

Your email address will not be published. Required fields are marked *