ಗದಗ : ಮುಂದಿನ 5 ವರ್ಷ ರಾಜ್ಯದಲ್ಲಿ ನಮ್ಮದೇ ಸರ್ಕಾರ ಇರುತ್ತದೆ, ನಾನೇ ಮುಖ್ಯಮಂತ್ರಿ, ಮುಂದೆಯೂ ಮುಂದುವರಿಯುತ್ತೇನೆ ಎಂದಿದ್ದ ಸಿದ್ದರಾಮಯ್ಯ ಇದೀಗ,ನಮ್ಮದು ಹೈಕಮಾಂಡ್ ಪಕ್ಷ, ಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ ಹೈಕಮಾಂಡ್ ಏನು ಹೇಳುತ್ತೋ ನಾನು ಅದನ್ನು ಕೇಳುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಮುಖ್ಯಮಂತ್ರಿಯಾಗಿ ನಾನೇ ಮುಂದುವರಿಯುವೆ ಎಂದು ಹಂಪಿಯಲ್ಲಿ ನೀಡಿದ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗುತ್ತಿದ್ದಂತೆ ಇದೀಗ ಸ್ಪಷ್ಟೀಕರಣ ನೀಡಿದ್ದಾರೆ. ಐದು ವರ್ಷ ರಾಜ್ಯದಲ್ಲಿ ನಮ್ಮದೇ ಸರ್ಕಾರ ಇರಲಿದೆ. ಈಗ ರಾಜ್ಯದಲ್ಲಿ ನಾನೇ ಮುಖ್ಯಮಂತ್ರಿ, ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸರ್ಕಾರ ಪತನ ಆಗಲಿದೆ, ಮುಖ್ಯಮಂತ್ರಿ ಬದಲಾವಣೆ ಆಗಲಿದ್ದಾರೆ ಎಂಬ ಹೇಳಿಕೆಗಳಿಂದ ಸೃಷ್ಟಿಯಾಗಿರುವ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

ನಮ್ಮದು ರಾಷ್ಟ್ರೀಯ ಪಕ್ಷ. ಏನೇ ತೀರ್ಮಾನ ಮಾಡಿದರೂ ಅದು ಹೈಕಮಾಂಡ್ ಮಟ್ಟದಲ್ಲೇ ಆಗಬೇಕು. ಹೊಸದಾಗಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಕುರಿತೂ ಹೈಕಮಾಂಡ್ ತೀರ್ಮಾನಿಸಲಿದೆ ಎಂದರು. ಈ ಮಧ್ಯೆ ಮುಖ್ಯಮಂತ್ರಿ ಬದಲಾವಣೆ ಕುರಿತು ಕಾಂಗ್ರೆಸ್ ಶಾಸಕರೇ ಹೇಳಿಕೆ ನೀಡುತ್ತಿರುವ ಕುರಿತು ಆಕ್ರೋಶ ವ್ಯಕ್ತಪಡಿಸಿದ ಅವರು, ನಮ್ಮ ಸರ್ಕಾರದಲ್ಲಿ ಯಾವುದೇ ಗೊಂದಲ ಇಲ್ಲ. ಯಾರೋ ಕೆಲಸಕ್ಕೆ ಬಾರದವರು, ಆ ರೀತಿ ಹೇಳುತ್ತಾರೆ. ಇಂಥ ಹೇಳಿಕೆ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಎಂದರು.

ಇದೇ ವೇಳೆ ಸರ್ಕಾರ ಪತನ ಆಗಲಿದೆ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ಕುರಿತ ಪ್ರಶ್ನೆಗೆ, ರಮೇಶ್ ಜಾರಕಿಹೊಳಿ (ಬಿಜೆಪಿಯವರು) ಸೋತಿದ್ದಾರೆ. ಅವರಿಗೆ ಬೇರೆ ಕೆಲಸ ಇಲ್ಲ. ಹೀಗಾಗಿ ಬಾಯಿಗೆ ಬಂದAತೆ ಮಾತನಾಡುತ್ತಾರೆ. ಬಿಜೆಪಿಯವರು ಅಧಿಕಾರ ಇಲ್ಲದೆ ಭ್ರಮನಿರಸನ ಆಗಿದ್ದಾರೆ. ಆಪರೇಷನ್ ಕಮಲ ಮಾಡಿ, ಒಮ್ಮೆ ಸಕ್ಸಸ್ ಆಗಿದ್ದಾರೆ. ಇದೀಗ ಮತ್ತೆ ಆಪರೇಷನ್ ಕಮಲ ಮಾಡಲು ಹೊರಟಿದ್ದಾರೆ. ಆದರೆ ಈ ಬಾರಿ ಅವರು ಯಶಸ್ವಿಯಾಗಲ್ಲ. ರಾಜ್ಯದ ಜನ 136 ಸೀಟು ಕೊಟ್ಟು ನಮ್ಮನ್ನು ಗೆಲ್ಲಿಸಿದ್ದಾರೆ. ನಮ್ಮ ಸರ್ಕಾರ ಐದು ವರ್ಷ ಸುಭದ್ರವಾಗಿರಲಿದೆ ಎಂದರು.





