ಬೆಂಗಳೂರು: ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ರಾಜ್ಯ ಸರ್ಕಾರ ಸಿದ್ಧವಿದ್ದು, ಅದಕ್ಕೂ ಮುನ್ನ ಸೌಜನ್ಯ ಪೋಷಕರು ಮರುತನಿಖೆಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸಿಎಂ ಸಿದ್ಧರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಸಾಹಿತಿಗಳೊಂದಿಗೆ ಸಭೆ ನಡೆಸಿದ್ದ ವೇಳೆ ಸಾಹಿತಿಗಳು ಸೌಜನ್ಯ ಪ್ರಕರಣ ಮರು ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು.
ಅದಕ್ಕೆ ಉತ್ತರಿಸಿದ ಸಿದ್ದರಾಮಯ್ಯ ಅವರು, ಸೌಜನ್ಯ ಕೊಲೆ ಪ್ರಕರಣ ಮರುತನಿಖೆ ನಡೆಸುವಂತೆ ಆಕೆಯ ಪೋಷಕರು ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು. ಅದರ ಬೆನ್ನಲ್ಲೇ ರಾಜ್ಯ ಸರ್ಕಾರವೂ ಮರುತನಿಖೆ ನಡೆಸಲು ಪತ್ರ ಬರೆಯಲಿದೆ. ಅಲ್ಲದೆ, ಪ್ರಕರಣ ಕುರಿತಂತೆ ಹಾಗೂ ಮರುತನಿಖೆ ನಡೆಸಲು ಕೇಂದ್ರದ ಮೇಲೆ ಒತ್ತಡ ತರುವ ಬಗ್ಗೆ ಅಡ್ವೋಕೇಟ್ ಜನರಲ್ ಅವರೊಂದಿಗೆ ಚರ್ಚಿಸುತ್ತೇನೆ ಎಂದು ಹೇಳಿದರು.