Share this news

ಮಂಗಳೂರು : ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್‌ ದೌರ್ಜನ್ಯ ವಿಚಾರದ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಉನ್ನತ ಪೊಲೀಸ್‌ ಅಧಿಕಾರಿಗಳು ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಹಿಂದೂ ಯುವಕರ ಮೇಲೆ ಪುತ್ತೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಪೊಲೀಸರ ವರ್ತನೆ ಪೊಲೀಸ್‌ ಇಲಾಖೆಗೆ ಕಪ್ಪುಚುಕ್ಕೆ. ದೂರಿನ ಬಗ್ಗೆ ಪರಿಶೀಲಿಸಿ ಯಥೋಚಿತ ತನಿಖೆ ನಡೆಸುವ ಬದಲು ಚಿತ್ರಹಿಂಸೆ ನೀಡಿರುವುದನ್ನು ಖಂಡಿಸುತ್ತೇನೆ ಎಂದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಹಾಗೂ ಡಿವಿ ಸದಾನಂದ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಬ್ಯಾನರ್‌ ಹಾಕಿದ ಆರೋಪಿಗಳಿಗೆ ಪೊಲೀಸರು ಚಿತ್ರಹಿಂಸೆ ನೀಡಿರುವ ಆರೋಪ ವ್ಯಕ್ತವಾಗಿತ್ತು.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡ ಹಿನ್ನೆಲೆ ಬೇಸರಗೊಂಡು ಹಿಂದು ಕಾರ್ಯಕರ್ತರು ನಳಿನ್ ಕುಮಾರ ಕಟೀಲ್, ಡಿವಿ ಸದಾನಂದಗೌಡ ಬ್ಯಾನರ್ ಗೆ ಚಪ್ಪಲಿಹಾರ ಹಾಕಿ ಆಕ್ರೋಶ ಹೊರಹಾಕಿದ್ದರು. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿ ಎಫ್‌ಐಆರ್ ದಾಖಲಿಸಲಾಗಿತ್ತು. ಬ್ಯಾನರ್ ಕಟ್ಟಿದ್ದ ಹಿಂದು ಕಾರ್ಯಕರ್ತನ್ನು ಬಂಧಿಸಿದ್ದ ಪೊಲಿಸರು ಥರ್ಡ್‌ ಡಿಗ್ರಿ ಶಿಕ್ಷೆ ಕೊಟ್ಟು ಅಮಾನವೀಯವಾಗಿ ವರ್ತಿಸಿದ್ದಾರೆ. ಗಂಭೀರ ಗಾಯಗೊಂಡಿರುವ ಹಿಂದು ಕಾರ್ಯಕರ್ತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈಗಾಗಲೇ ಆಸ್ಪತ್ರೆ ಬೆಳ್ತಂಗಡಿ ಶಾಸಕ ಹರೀಶ್  ಪೂಂಜಾ, ಹಿಂದು ಮುಖಂಡ ಅರುಣ್ ಪುತ್ತಿಲ ಸೇರಿದಂತೆ ಹಲವು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಪುತ್ತೂರಿನಲ್ಲಿ ನಡೆದ ಪೊಲೀಸರ ದೌರ್ಜನ್ಯಕ್ಕೆ ರಾಜ್ಯಾದ್ಯಂತ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದು ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *