
ಕಾರ್ಕಳ, ಜ.7: ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಕಳ ಮತ್ತು ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಕಾಲು ಸಂಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ ಮಂಜೂರಾಗಿದ್ದು ಸರ್ಕಾರದ ಆಡಳಿತಾತ್ಮಕ ಅನುಮೋದನೆ ದೊರೆತಿದೆ ಎಂದು ಶಾಸಕ ವಿ ಸುನಿಲ್ ಕುಮಾರ್ ತಿಳಿಸಿದ್ದಾರೆ.
ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಹಲವೆಡೆ ರೈತರಿಗೆ, ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ಹಳ್ಳ ತೋಡುಗಳನ್ನು ದಾಟಿ ಸಂಚರಿಸುವ ಅನಿವಾರ್ಯತೆ ಇದೆ. ಇಂತಹ ಪ್ರದೇಶಗಳಲ್ಲಿ ರೈತರು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಮತ್ತು ರೈತರು ತಮ್ಮ ಕೃಷಿಗೆ ಸಂಬಂದಿಸಿದ ಯಂತ್ರೋಪಕರಣಗಳನ್ನು ಸಾಗಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಕಾಲು ಸಂಕಗಳ ನಿರ್ಮಾಣಕ್ಕೆ ನಮ್ಮ ಕ್ಷೇತ್ರಕ್ಕೆ ವಿಶೇಷ ಅನುದಾನ ನೀಡುವಂತೆ ಸರ್ಕಾರಕ್ಕೆ ಹಾಗೂ ಇಲಾಖಾ ಸಚಿವರಿಗೆ ಪತ್ರ ಮುಖೇನ ಹಾಗೂ ಹಲವು ಬಾರಿ ಮೌಕಿಕವಾಗಿ ಮನವಿ ಮಾಡಲಾಗಿತ್ತು .
ಸತತ ಪ್ರಯತ್ನಗಳ ಫಲವಾಗಿ ಕಾರ್ಕಳ ವಿಧಾನ ಸಭಾ ಕ್ಷೇತ್ರಕ್ಕೆ 1 ಕೋಟಿ ರೂ. ಅನುದಾನ ಮಂಜೂರಾಗಿ ಕಾಲು ಸಂಕಗಳ ನಿರ್ಮಾಣ ಕಾರ್ಯಕ್ಕೆ ದಿನಾಂಕ 31-12-2025 ರಂದು ಸರಕಾರದ ಆಡಳಿತಾತ್ಮಕ ಅನುಮೋದನೆ ದೊರೆತಿದ್ದು ಆದಷ್ಟು ಶೀಘ್ರವಾಗಿ ಇಲಾಖಾ ಪ್ರಕ್ರಿಯೆಗಳನ್ನು ಮುಗಿಸಿ ಕಾಮಗಾರಿಗಳನ್ನು ಆರಂಭಿಸಲಾಗುವುದು ಎಂದು ಶಾಸಕರ ಪ್ರಕಟಣೆ ತಿಳಿಸಿದೆ.

.
.
