ಉಡುಪಿ: ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳು ಮತಗಳಿಕೆ ಹಾಗೂ ರಾಜಕೀಯ ಅಸ್ತ್ರವಾಗಬಾರದು. ಸಾಮಾಜಿಕ ಜಾಲತಾಣಗಳ ಮೇಲೆ 24 ಗಂಟೆಗಳ ಕಾಲ ನಿಗಾ ಇರಿಸಲಾಗುತ್ತದೆ. ಪಕ್ಷ, ಅಭ್ಯರ್ಥಿ ಮತ್ತು ಚುನಾವಣೆಯ ಮೇಲೆ ಪರಿಣಾಮ ಬೀರುವ ಅಂಶಗಳನ್ನು ಕುರಿತು ಪರಿಶೀಲನೆ ಮಾಡಲಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.
ಅವರು ಉಡುಪಿ ಜಿಲ್ಲಾಡಳಿತದ ಮಾಧ್ಯಮ ಪ್ರಾಮಾಣೀಕರಣ ಹಾಗೂ ಕಣ್ಗಾವಲು ಸಮಿತಿ(ಎಂಸಿಎAಸಿ) ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬAಧಿಸಿ ಉಡುಪಿ ಜಿಲ್ಲೆಯ ಮಾಧ್ಯಮದವರಿಗೆ ಗುರುವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾದ ಕಾರ್ಯಾಗಾರದಲ್ಲಿ ಮಾತನಾಡಿದರು.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಮಚ್ಚೀಂದ್ರ ಮಾತನಾಡಿ, ಚುನಾವಣೆಯಲ್ಲಿ ಅಕ್ರಮ ತಡೆಯುವ ನಿಟ್ಟಿನಲ್ಲಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದೆ. ಕೆಲವು ಕಡೆ ದಿಢೀರ್ ಕಾರ್ಯಾಚರಣೆಗಳನ್ನು ಮಾಡಲಾಗುತ್ತಿದೆ. ಏಕಕಾಲದಲ್ಲಿ ಜಿಲ್ಲೆಯಾದ್ಯಂತ ಇರುವ ಗೋಡಾನ್, ಕಟ್ಟಡಗಳಿಗೆ ದಾಳಿ ನಡೆಸಿ ದೊಡ್ಡ ಪ್ರಮಾಣದಲ್ಲಿ ವಸ್ತುಗಳನ್ನು ಸಂಗ್ರಹಿಸಲಾಗಿದೆಯೇ ಎಂಬುದನ್ನು ಪರಿಶೀಲನೆ ಮಾಡಲಾಗಿದೆ ಎಂದರು.
ಜಿಲ್ಲೆಯಲ್ಲಿ ಈವರೆಗೆ ದಾಖಲಾತಿ ಇಲ್ಲದ 48.50ಲಕ್ಷ ರೂ. ನಗದು ವಶಪಡಿಸಲಾಗಿದೆ. ಅಬಕಾರಿ ಇಲಾಖೆಯೊಂದಿಗೆ ಸೇರಿ 6000 ಲೀಟರ್ ಮದ್ಯ ಹಾಗೂ ಅಕ್ರಮ ಸಾಗಾಟ ಮಾಡುತ್ತಿದ್ದ ಅಕ್ಕಿಯನ್ನು ವಶಪಡಿಸಿಕೊಂಡಿದ್ದೇವೆ. ಇನ್ನು ಮುಂದೆಯೂ ಈ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಅವರು ತಿಳಿಸಿದರು.
ಪೊಲೀಸ್ ಇಲಾಖೆ ಮೂಲಕ ಎಸ್ಪಿ ಕಚೇರಿಯಲ್ಲಿ ಸ್ಥಾಪಿಸಿರುವ ಸೆಲ್ ನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬರುವ ವಿಚಾರಗಳ ಬಗ್ಗೆ ನಿಗಾ ಇರಿಸಲಾಗಿದೆ. ಅನುಮತಿ ಪಡೆದರೂ ಸಾಮಾಜಿಕ ಜಾಲತಾಣಗಳಲ್ಲಿ ಏನು ಬೇಕಾದರೂ ಬರೆಯುವಂತಿಲ್ಲ. ಅದಕ್ಕೆ ಅದರದ್ದೆ ಆದ ಕಾನೂನು ಚೌಕಟ್ಟುಗಳಿವೆ ಮತ್ತು ಚುನಾವಣಾ ಆಯೋಗದ ನಿಯಮಗಳಿವೆ. ಜಾತಿ, ಧರ್ಮ, ಸಮುದಾಯ, ಭಾಷೆ ಆಧಾರದಲ್ಲಿ ಮತಗಳನ್ನು ಕೇಳಲು ಅವಕಾಶ ಇಲ್ಲ ಎಂದು ಅವರು ಹೇಳಿದರು.
ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್. ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಅಶೋಕ್ ಕಾಮತ್ ಮಾದರಿ ನೀತಿ ಸಂಹಿತೆ ಕುರಿತು ಮಾಹಿತಿ ನೀಡಿದರು. ವೇದಿಕೆಯಲ್ಲಿ ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ವಂದಿಸಿದರು