ಉಡುಪಿ: ಒಳ್ಳೆಯ ಬರಹಗಾರರು, ಪತ್ರಕರ್ತರು, ಕಲಾವಿದರಿಂದ ಸಮಾಜದ ಗೌರವ ಉಳಿಯಲು ಸಾಧ್ಯ. ಈ ಬಿಕ್ಕಟ್ಟಿನ ಸಂದರ್ಭದಲ್ಲೂ ಪತ್ರಕರ್ತರು ಘನತೆಯನ್ನು ಕಾಪಾಡಿಕೊಳ್ಳುವುದು ಪತ್ರಕರ್ತರಿಗೆ ದೊಡ್ಡ ಸವಾಲಾಗಿದೆ ಎಂದು ಹಿರಿಯ ಸಾಹಿತಿ ವೈದೇಹಿ ಹೇಳಿದರು.
ಅವರು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಜತ ಮಹೋತ್ಸವ ಸಮಿತಿಯ ಆಶ್ರಯದಲ್ಲಿ ರಜತ ಮಹೋತ್ಸವದ ಪ್ರಯುಕ್ತ ಉಡುಪಿ ಗಾಂಧಿ ಆಸ್ಪತ್ರೆ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಉಡುಪಿ ಪತ್ರಿಕಾ ಭವನದಲ್ಲಿ ಬುಧವಾರ ಆಯೋಜಿಸಲಾದ ಸಂಘದ ಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಅಧ್ಯಕ್ಷತೆ ವಹಿಸಿದ್ದರು. ಸಂಘದ ಫೇಸ್ಬುಕ್ ಪೇಜ್ ಅನಾವರಣಗೊಳಿಸಿದ ಸಂಘದ ಸ್ಥಾಪಕಾ ಕೋಶಾಧಿಕಾರಿ ಹಾಗೂ ಮಂಗಳೂರು ವಿಜಯ ಕರ್ನಾಟಕ ಪತ್ರಿಕೆಯ ಪ್ರಧಾನ ವರದಿಗಾರ ಆರೀಫ್ ಪಡುಬಿದ್ರಿ, ಸ್ಥಾಪನಾ ದಿನಾಚರಣೆ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷರುಗಳಾದ ದಿನೇಶ್ ಕಿಣಿ ಅಲೆವೂರು, ಕಿರಣ್ ಮಂಜನಬೈಲು, ಜಯಕರ ಸುವರ್ಣ, ಗಣೇಶ್ ಪ್ರಸಾದ್ ಪಾಂಡೇಲು ಅವರನ್ನು ಸನ್ಮಾನಿಸಲಾಯಿತು.
ಇಂಡಿಯನ್ ಫೆಡರೇಶನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಆರಾಡಿ ಉಪಸ್ಥಿತರಿದ್ದರು.
ರಜತ ಮಹೋತ್ಸವ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್ ಕಾರ್ಕಳ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ವಂದಿಸಿದರು. ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಸನ್ಮಾನ ಪತ್ರವನ್ನು ವಾಚಿಸಿದರು. ಸ್ಥಾಪಕ ಸದಸ್ಯ ದಿನಕರ ಬೆಂಗ್ರೆ ಕಾರ್ಯಕ್ರಮ ನಿರೂಪಿಸಿದರು.