ಬೆಂಗಳೂರು : ಜನರಿಗೆ ಕೊಟ್ಟ ಗ್ಯಾರಂಟಿಗಳನ್ನು ಈಡೇರಿಸಲು ಸಿದ್ದರಾಮಯ್ಯ ಅವರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ದ ರಾಜ್ಯ ಬಿಜೆಪಿ ಘಟಕ ಕಿಡಿಕಾರಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ನೀಡಿರುವ ಗ್ಯಾರಂಟಿಗಳನ್ನು ಮೊದಲ ಸಂಪುಟ ಸಭೆಯಲ್ಲೇ ಈಡೇರಿಸುತ್ತೇವೆ ಎಂದು ಕಾಂಗ್ರೆಸ್ ಹೇಳಿತ್ತು. ಆದರೆ ಜನರಿಗೆ ನೀಡಿದ ಆಶ್ವಾಸನೆಯನ್ನು ಈಡೇರಿಸಲು ಸಿದ್ದರಾಮಯ್ಯ ಅವರ ಸರಕಾರ ಸಂಪೂರ್ಣ ವಿಫಲವಾಗಿದೆ. ಇದರಿಂದ ಬಿಟ್ಟಿ ಭಾಗ್ಯಗಳಿಗಾಗಿ ಕಾದಿದ್ದ ಜನರಿಗೆ ನಿರಾಶೆಯಾಗಿದೆ. ಪರಿಣಾಮವಾಗಿ ರಾಜ್ಯದ ವಿವಿಧೆಡೆಗಳಲ್ಲಿ ಸಾರ್ವಜನಿಕರು ಬೀದಿಗಿಳಿಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಸರ್ಕಾರದ ವಿಫಲತೆಯನ್ನು ಮರೆಮಾಚಲು ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಅನೇಕ ಜನಪರ ಕಾನೂನುಗಳನ್ನು ರದ್ದುಗೊಳಿಸುತ್ತೇವೆ ಎಂದು ಕಾಂಗ್ರೆಸ್ನ ವಿವಿಧ ಸಚಿವರುಗಳು ಹೇಳುತ್ತಾ ವಿಷಯಾಂತರಕ್ಕೆ ಯತ್ನಿಸುತ್ತಿದ್ದಾರೆ. ವಿಷಯಾಂತರದಿAದ ಯಾವುದೇ ಪ್ರಯೋಜನವಾಗದು, ಕೊಟ್ಟ ಗ್ಯಾರಂಟಿಗಳನ್ನು ಅನುಷ್ಟಾನಗೊಳಿಸದೆ ಕಾಲಹರಣ ಮಾಡಿದಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಆಕ್ರೋಶ ಮತ್ತಷ್ಟು ತೀವ್ರವಾಗಲಿದೆ ಎಂದು ವಾಗ್ದಾಳಿ ನಡೆಸಿದೆ.