ಬೆಂಗಳೂರು: ಮನೆ ಯಜಮಾನಿಗೆ 2000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ (ಜೂನ್.16) ಆನ್ಲೈನ್, ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ ಮಾಡಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಪಿಎಲ್, ಅಂತ್ಯೋದಯ ಕಾರ್ಡ್ದಾರರು ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಸಬಹುದು. ಸೇವಾಸಿಂಧು ಪೋರ್ಟಲ್, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ.

ಮಹಿಳೆ ಆಧಾರ್ ಕಾರ್ಡ್ ಮತ್ತು ಪತಿಯ ಆಧಾರ್ ಕಾರ್ಡ್ ಮಾಹಿತಿ ನೀಡಬೇಕು. ಈ ಬಗ್ಗೆ ಯಾವುದೇ ಗೊಂದಲಗಳಿದ್ದರೆ ಸಹಾಯವಾಣಿ ಸಂಖ್ಯೆ 1902ಕ್ಕೆ ಕರೆ ಮಾಡಬಹುದು. ಅಲ್ಲದೇ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಪ್ರಕ್ರಿಯೆ ವರ್ಷ ಪೂರ್ತಿ ನಿರಂತರವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು.
ನಾಳೆ ಶಕ್ತಿ ಭವನದಲ್ಲಿ ಸಿದ್ದರಾಮಯ್ಯನವರಿಂದ ಸೇವಾ ಸಿಂಧು ವೆಬ್ ಲಾಂಚ್ ಆಗಲಿದ್ದು, ನಾಳೆ ಮಧ್ಯಾಹ್ನ 1.30ರಿಂದ ಅರ್ಜಿ ಸಲ್ಲಿಸಬಹುದು. ಗೃಹಲಕ್ಷ್ಮೀ ಯೋಜನೆಗೆ ವಾರ್ಷಿಕ ಅಂದಾಜು 30 ಸಾವಿರ ಕೋಟಿ ವೆಚ್ಚ ನಿರೀಕ್ಷೆ ಇದ್ದು, ಆಗಸ್ಟ್ 18ರಂದು ಬೆಳಗಾವಿ ಅಥವಾ ಹುಬ್ಬಳ್ಳಿಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆಗೆ ಸಿಎಂ ಸಿದ್ದರಾಮಯ್ಯನವರ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಯೋಜನೆಗೆ ತೆರಿಗೆ ಕಟ್ಟುವವರು ಅರ್ಜಿ ಸಲ್ಲಿಸಿದರೆ ಅದು ರಿಜೆಕ್ಟ್ ಆಗಲಿದೆ. ಇ ಗವರ್ನೆನ್ಸ್ ಮೂಲಕ ಅರ್ಜಿ ಹಾಕುವ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಅರ್ಜಿದಾರರ ಪತಿ ಟ್ಯಾಕ್ಸ್ ಪೇಯರ್ಸ್ ಆಗಿದ್ದರೆ ಅರ್ಜಿ ಸ್ವೀಕಾರ ಆಗವುದಿಲ್ಲ. ಆದ್ದರಿಂದ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

