Share this news

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿಯಲ್ಲಿ ರಾಜ್ಯದ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ದಾರರಿಗೆ ಉಚಿತವಾಗಿ 10 ಕೆಜಿ ಅಕ್ಕಿ ವಿತರಣೆಯ ಘೋಷಣೆಯನ್ನು ಮಾಡಿತ್ತು. ಇದಕ್ಕೆ ಬೇಕಿದ್ದ ಅಕ್ಕಿಯನ್ನು ಕೊಡುತ್ತೇವೆ ಎಂಬುದಾಗಿ ಎಫ್ ಸಿಐ ಕೂಡ ಒಪ್ಪಿಗೆ ಸೂಚಿಸಿತ್ತು. ಆ ನಂತರ ಕೇಂದ್ರ ಸರ್ಕಾರದ ಮಧ್ಯಪ್ರವೇಶದ ಬಳಿಕ ರಾಜ್ಯ ಸರ್ಕಾರ ಇಟ್ಟಿದ್ದ ಬೇಡಿಕೆಯಷ್ಟು ಅಕ್ಕಿ ವಿತರಣೆಗೆ ನಿರಾಕರಿಸಿತ್ತು. ಕೇಂದ್ರ ಸರ್ಕಾರದ ಈ ನಡೆಯನ್ನು ಖಂಡಿಸಿ ಜೂನ್.20ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಈ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ವಿತರಿಸಲಾಗುತ್ತಿದ್ದ ಅಕ್ಕಿಯನ್ನು 10 ಕೆಜಿಗೆ ಏರಿಕೆ ಮಾಡಲಾಗಿತ್ತು. ಜುಲೈ ತಿಂಗಳಿನಿAದ ಉಚಿತವಾಗಿ ನೀಡುವುದಾಗಿಯೂ ಘೋಷಣೆ ಮಾಡಲಾಗಿತ್ತು. ನಮಗೆ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಬೇಕಿದ್ದ ಅಕ್ಕಿಯನ್ನು ನೀಡುವಂತೆ ಎಫ್ ಸಿ ಐಗೆ ಪತ್ರವನ್ನು ಬರೆಯಲಾಗಿತ್ತು. ಸರ್ಕಾರದ ಪತ್ರಕ್ಕೆ ಸ್ಪಂದಿಸಿದ್ದ ಎಫ್ ಸಿಐ ನಮಗೆ ಬೇಕಿರುವಂತ ಅಕ್ಕಿ ಸರಬರಾಜಿಗೂ ಒಪ್ಪಿಗೆ ಸೂಚಿಸಿತ್ತು. ಆದರೆ ಆ ಬಳಿಕ ಕೇಂದ್ರ ಸರ್ಕಾರ ರಾಜಕೀಯ ಮಾಡಿ, ಅಕ್ಕಿ ನೀಡದಂತೆ ಹೇಳಿ ಬಡವರ ಹೊಟ್ಟೆಯ ಮೇಲೆ ಹೊಡೆಯುವ ಕೆಲಸವನ್ನು ಮಾಡಿದೆ ಎಂದು ಗುಡುಗಿದರು.

ಕೇಂದ್ರ ಸರ್ಕಾರದ ದ್ವೇಷ ರಾಜಕಾರಣಕ್ಕೆ ಇದೊಂದು ಉದಾಹರಣೆಯಾಗಿದೆ. ಭಾರತೀಯ ಜನತಾ ಪಕ್ಷ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ. ಬಿಜೆಪಿ ಬಡವರಿಗೆ ದ್ರೋಹ ಮಾಡುವ ಪಾರ್ಟಿಯಾಗಿದೆ. ಬಿಜೆಪಿ ಪಕ್ಷದ ನಿರ್ಧಾರಕ್ಕೆ ನಾವು ಧಿಕ್ಕಾರ ಹೇಳುತ್ತೇವೆ. ಕೇಂದ್ರ ಸರ್ಕಾರ, ಬಿಜೆಪಿಯ ವಿರುದ್ಧ ಜೂನ್.20ರಂದು ರಾಜ್ಯಾಧ್ಯಂತ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಹೇಳಿದರು.

Leave a Reply

Your email address will not be published. Required fields are marked *