ಬೆಂಗಳೂರು: ಕಾಂಗ್ರೆಸ್ ಚುನಾವಣಾಪೂರ್ವ ಗ್ಯಾರಂಟಿಗಳಲ್ಲಿ ಒಂದಾದ ಉಚಿತ ಅಕ್ಕಿ ವಿತರಣೆಗೆ ತೊಡಕಾಗಿರುವುದರಿಂದ ಐದು ಕೆಜಿ ಅಕ್ಕಿ ಬದಲಿಗೆ ಹಣ ನೀಡಲು ಕರ್ನಾಟಕ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಈ ಕುರಿತು ಆಹಾರ ಸಚಿವ ಮುನಿಯಪ್ಪ ಮಾಹಿತಿ ನೀಡಿದರು.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರಾದ ಎಚ್ಕೆ ಪಾಟೀಲ್ ಹಾಗೂ ಕೆಎಚ್ ಮುನಿಯಪ್ಪ ಸಂಪುಟ ಸಭೆಯ ನಿರ್ಧಾರಗಳನ್ನು ಪ್ರಕಟಿಸಿದರು. ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ದಾರರಿಗೆ 5 ಕೆಜಿ ಅಕ್ಕಿ ಹಾಗೂ ಇನ್ನುಳಿದ 5ಕೆಜಿ ಅಕ್ಕಿಯ ಬದಲು ಹಣ ದೊರೆಯಲಿದೆ. ಅಕ್ಕಿ ಬದಲು ಜನರಿಗೆ ಹಣ ನೀಡಲು ಸಂಪುಟ ಸಭೆ ತೀರ್ಮಾನಿಸಿದೆ. 5 ಕೆಜಿ ಅಕ್ಕಿ ಬದಲು ಜನರಿಗೆ ಹಣ ನೀಡಲು ನಿರ್ಧರಿಸಲಾಗಿದೆ. ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಬಿಪಿಎಲ್ ಪಡಿತರ ಕಾರ್ಡ್ದಾರರಿಗೆ ಮಾಸಿಕ ತಲಾ 170 ರೂ. ನೀಡುತ್ತೇವೆ. ಜುಲೈ ತಿಂಗಳಿAದಲೇ ಪಡಿತರದಾರರ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಮುನಿಯಪ್ಪ ತಿಳಿಸಿದರು.

ಅಕ್ಕಿ ಸಿಗುವವರೆಗೆ ಮಾತ್ರ ಪರ್ಯಾಯ ವ್ಯವಸ್ಥೆಯಾಗಿ ಹಣ ನೀಡುತ್ತಿದ್ದೇವೆ. ಅಕ್ಕಿ ಸಿಕ್ಕ ನಂತರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನೇ ನೀಡುತ್ತೇವೆ ಎಂದು ಮುನಿಯಪ್ಪ ತಿಳಿಸಿದ್ದಾರೆ. ಈ ಮಧ್ಯೆ, ಒಟ್ಟು 15 ವಿಷಯಗಳ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ನಿರ್ಣಯ ಕೈಗೊಂಡಿದ್ದೇವೆ. ಈ ಪೈಕಿ ನಾಲ್ಕು ವಿಷಯಗಳು ಲೋಕಾಯುಕ್ತಕ್ಕೆ ಸಂಬAಧಪಟ್ಟಿದ್ದು. ಕರ್ನಾಟಕ ಲೋಕಾಯುಕ್ತದ ಉಪನಿರ್ದೇಶಕರು, ಲೆಕ್ಕಪತ್ರ ಅಪರ ನಿಬಂಧಕರು ಗುತ್ತಿಗೆ ಮೇಲೆ ನೇಮಕ ಆಗಿದ್ದರು. ಇವರ ಸೇವೆಯನ್ನು ಒಂದು ವರ್ಷ ಗುತ್ತಿಗೆ ಆಧಾರದ ಮೇಲೆ ಮುಂದುವರಿಸಲು ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ ಹೆಚ್ಕೆ ಪಾಟೀಲ್ ತಿಳಿಸಿದರು.


