ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಐದು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮಂಗಳೂರು, ಉಳ್ಳಾಲ, ಮುಲ್ಕಿ, ಬಂಟ್ವಾಳ ಹಾಗೂ ಮೂಡಬಿದಿರೆ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಸಧ್ಯಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕಿನಲ್ಲಿ ಮಾತ್ರ ಸದ್ಯಕ್ಕೆ ರಜೆ ನೀಡಲಾಗಿದ್ದು, ಉಳಿದ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ವಿವೇಚನೆಯ ಅಧಿಕಾರವನ್ನು ತಹಶೀಲ್ದಾರ್ ಗಳಿಗೆ ನೀಡಲಾಗಿದೆ.
ಹವಾಮಾನ ಇಲಾಖೆಯು ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಹವಮಾನ ಇಲಾಖೆಯ ವರದಿ ಆಧರಿಸಿ ಭಾರೀ ಮಳೆಯಾಗುವ ತಾಲೂಕುಗಳಲ್ಲಿನ ಶಾಲಾ-ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ.
ಇನ್ನು ಮಳೆ ಪರಿಸ್ಥಿತಿ ನೋಡಿಕೊಂಡು ಆಯಾ ತಾಲೂಕು ತಹಶೀಲ್ದಾರ್ಗಳು ರಜೆ ಘೋಷಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ನೀಡಿದ್ದಾರೆ.
ಕರಾವಳಿ ಕರ್ನಾಟಕದಲ್ಲಿಇಂದಿನಿಂದ ಶನಿವಾರದರೆಗೆ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ. ಈ ಪ್ರದೇಶದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ. ಜುಲೈ 3 ರಿಂದ ಜುಲೈ 7 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಕರ್ನಾಟಕದ ಕರಾವಳಿಯಲ್ಲಿ 40 ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ