Share this news

ಬೆಂಗಳೂರು: 14ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯನವರ 14 ನೇ ಬಜೆಟ್‌ನಲ್ಲಿ ಶಿಕ್ಷಣ ಇಲಾಖೆ 37,000 ಕೋಟಿ ಅನುದಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 24,000 ಕೋಟಿ, ಇಂಧನ ಇಲಾಖೆ 22,000 ಕೋಟಿ, ನೀರಾವರಿ ಇಲಾಖೆ 19,000 ಕೋಟಿ, ಗ್ರಾಮೀಣಾಭಿವೃದ್ಧಿ & ಪಂಚಾಯತ್‌ರಾಜ್ ಇಲಾಖೆ 18,000 ಕೋಟಿ, ಒಳಾಡಳಿತ & ಸಾರಿಗೆ ಇಲಾಖೆ 16,000 ಕೋಟಿ, ಕಂದಾಯ ಇಲಾಖೆ 16,000 ಕೋಟಿ, ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ 14,000 ಕೋಟಿ, ಸಮಾಜ ಕಲ್ಯಾಣ ಇಲಾಖೆ 11,000 ಕೋಟಿ ಮೀಸಲು, ಲೋಕೋಪಯೋಗಿ ಇಲಾಖೆ 10,000 ಕೋಟಿ, ಕೃಷಿ & ತೋಟಗಾರಿಕೆ ಇಲಾಖೆ 5,800 ಕೋಟಿ ಸೇರಿ ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ 3,024 ಕೋಟಿ ಮೀಸಲಿಡಲಾಗಿದೆ.

ರೈತರಿಗೆ ಶೂನ್ಯ ಬಡಿದರದ ಸಾಲ ಮಿತಿಯನ್ನ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಜೊತೆಗೆ ಮಧ್ಯಮಾವಧಿ, ದೀರ್ಘಾವಧಿ ಸಾಲ ಮಿತಿಯನ್ನ 10 ಲಕ್ಷದಿಂದ 15 ಲಕ್ಷಕ್ಕೆ ಏರಿಸಲಾಗಿದ್ದು, ಗುಡ್ಡಗಾಡು ಪ್ರದೇಶದ ರೈತರಗೆ ಪಿಕ್ ವ್ಯಾನ್ ಖರೀದಿಗೆ 7 ಲಕ್ಷದವರೆಗೆ ಸಾಲ ನೀಡಲಾಗುವುದು ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

ತೆಂಗು, ಅಡಕೆ, ದ್ರಾಕ್ಷಿ, ದಾಳಿಂಬೆ ಬೆಳೆ ಸಂಸ್ಕರಣೆಗೆ 10 ಕೋಟಿ ವೆಚ್ಚದಲ್ಲಿ ಯೋಜನೆ ಜಾರಿ, ಚಿಕ್ಕಮಗಳೂರು ಕಾಫಿ, ಪ್ರವಾಸೋದ್ಯಮ ಉತ್ತೇಜನಕ್ಕೆ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಶಿಡ್ಲಘಟ್ಟದಲ್ಲಿ 75 ಕೋಟಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ ಸ್ಥಾಪನೆ. ಅನುಗ್ರಹ ಯೋಜನೆ ಮರು ಜಾರಿ ಮಾಡಿ ಕುರಿ ಮೇಕೆ ಮೃತಪಟ್ಟರೆ 5 ಸಾವಿರ ರೂ. ಪರಿಹಾರ ನೀಡಲಾಗುವುದು.

ಆರೋಗ್ಯ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ ನೀಡಲಾಗಿದ್ದು, ಕೊಪ್ಪಳ, ಕಾರವಾರ ಕೊಡುಗು ಜಿಲ್ಲಾಸ್ಪತ್ರೆಯ ಉನ್ನತಿಕರಣಕ್ಕೆ ನಿರ್ಧಾರ ಮಾಡಲಾಗಿದೆ. ಕನಕಪುರ ತಾಲೂಕಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ, ಮೈಸೂರು, ಕಲಬುರಗಿ, ಬೆಳಗಾವಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಸೇರಿದಂತೆ ದೇಶದಲ್ಲೇ ಮೊದಲ ಅಂಗಾಗ ಜೋಡಣೆ ಆಸ್ಪತ್ರೆ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ಮೈಸೂರು ಮತ್ತು ಕಲಬುರ್ಗಿಯಲ್ಲಿ 30 ಕೋಟಿ ವೆಚ್ಚದಲ್ಲಿ ಟ್ರಾಮಾ ಕೇರ್ಸ ಸೆಂಟರ್ ತೆರೆಯಲಾಗುವುದು.

ಕುಡಿಯುವ ನೀರು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸರ್ಕಾರ ಮುಂದಾಗಿದ್ದು, 172 ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರ ನಿರ್ಧರಿಸಿದೆ. 19 ಕೆರೆಗಳಿಗೆ ನೀರು ತುಂಬಿಸಲು 770 ಕೋಟಿ ಹಣ ಮೀಸಲು ಇಡಲಾಗಿದೆ. ಬೆಳಗಾವಿ, ದಾವಣಗೆರೆ, ಬಳ್ಳಾರಿ, ಹಾವೇರಿ, ಗದಗ, ಬೀದರ್, ಉತ್ತರ ಕನ್ನಡ, ವಿಜಯನಗರ, ಕೊಪ್ಪಳ, ಕಲಬುರಗಿ ಹಾಗೂ ಯಾದಗಿರಿ ಸೇರಿ ಒಟ್ಟು 823,99 ಕೆರೆಗಳನ್ನು ತುಂಬಿಸಲು ನಿರ್ಧಾರ ಮಾಡಲಾಗಿದೆ.

ವಾಣಿಜ್ಯ ತೆರಿಗೆ ಇಲಾಖೆಯಿಂದ 1,01,000 ಲಕ್ಷ ಕೋಟಿ, ಅಬಕಾರಿ ಇಲಾಖೆಯಿಂದ 36,000 ಕೋಟಿ, ನೋಂದಣಿ & ಮುದ್ರಾಂಕ ಇಲಾಖೆಯಿಂದ 25,000 ಕೋಟಿ ಸೇರಿ ಒಟ್ಟು 1,62,000 ಕೋಟಿ ತೆರಿಗೆ ಸಂಗ್ರಹದ ಗುರಿಯನ್ನ ಸರ್ಕಾರ ಹೊಂದಿದೆ. ಗ್ಯಾರಂಟಿಗಳ ಜಾರಿಗೆ ಶೇ. 26ರಷ್ಟು ಸಾಲ ಪಡೆಯಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಕೇಂದ್ರ ಸರ್ಕಾರದಿಂದ ಶೇಕಡಾ 4ರಷ್ಟು ಅನುದಾನದ ನಿರೀಕ್ಷೆಯಿದ್ದು, ಶೇಕಡ.50ರಷ್ಟು ತೆರಿಗೆ ಆದಾಯದಿಂದ ಹಣ ಹೊಂದಿಸಲು ನಿರ್ಧಾರ ಮಾಡಲಾಗಿದೆ ಎಂದರು.

ಎಲ್ಲಾ ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ನಿರ್ಮಾಣ ಮಾಡಲು ನಿರ್ಧಾರ ಮಾಡಲಾಗಿದೆ.ಪುನೀತ್ ರಾಜಕುಮಾರ್ ಸ್ಮರಣಾರ್ಥ ಆರೋಗ್ಯ ವ್ಯವಸ್ಥೆ ಕಲ್ಪಿಸಲು ಸರ್ಕಾರ 6 ಕೋಟಿ ರೂಪಾಯಿ ಮೀಸಲಿಟ್ಟಿದೆ. ಹಠಾತ್ ಹೃದಯಾಘಾತ ತಪ್ಪಿಸಲು ಆಸ್ಪತ್ರೆಗಳಲ್ಲಿ ಎಇಡಿ ವ್ಯವಸ್ಥೆ ಮಾಡಲಾಗಿದೆ.

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ನೀಡುವ ಊಟದಲ್ಲಿ ಪರಿಷ್ಕರಣೆ ಮಾಡಲಾಗಿದ್ದು, ವಾರದಲ್ಲಿ 2 ಬಾರಿ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ ಮಾಡಲು ನಿರ್ಧಾರ ಮಾಡಲಾಗಿದೆ. ಈ ಮೂಲಕ ಬಿಸಿಯೂಟ ಯೋಜನೆಗೆ 280 ಕೋಟಿ ನೀಡಲು ನಿರ್ಧರಿಸಲಾಗಿದ್ದು, ಈ ಯೋಜನೆ ಇದೀಗ 9 ಮತ್ತು 10ನೇ ತರಗತಿಗೂ ವಿಸ್ತರಣೆಯಾಗಲಿದೆ.

ಮಕ್ಕಳಲ್ಲಿನ ಕಲಿಕಾ ದೋಷಗಳ ನಿವಾರಣೆಗೆ ಸರ್ಕಾರ ಕ್ರಮ ಕೈಗೊಂಡಿದ್ದು, 80 ಕೋಟಿ ರೂ. ವೆಚ್ಚದಲ್ಲಿ ಕಲಿಕಾ ಕಾರ್ಯಕ್ರಮ ರೂಪಿಸಲು ನಿರ್ಧಾರ ಮಾಡಲಾಗಿದೆ. ಮರುಸಿಂಚನ ಯೋಜನೆಯಡಿ ಪ್ರೌಢಹಂತದ ಪರೀಕ್ಷೆಗೆ ಸಜ್ಜುಗೊಳಿಸಲು ಮಕ್ಕಳಿಗೆ ವಿಶೇಷ ತರಬೇತಿ ಜೊತೆಗೆ ಮಾಧ್ಯಮಿಕ, ಪದವಿ ಪೂರ್ವ ಕಾಲೇಜುಗಳಲ್ಲಿ ಲ್ಯಾಬ್​ ಆರಂಭ ಮಾಡಲಾಗುವುದು. ಇನ್ನು 2 ಕೋಟಿ ರೂ. ವೆಚ್ಚದಲ್ಲಿ ಪ್ರಯೋಗಾಲಯಗಳ ಸ್ಥಾಪನೆ ಮತ್ತು ರಾಜ್ಯದ ಪ್ರತಿ ಕಂದಾಯ ವಿಭಾಗದಲ್ಲಿ 4 ಲ್ಯಾಬ್​ಗಳ ಸ್ಥಾಪನೆ ಮಾಡಲಾಗುವುದು.  ಕೆಪೆಕ್ ಸಂಸ್ಥೆಯ ಮೂಲಕ ರೈತ ಉತ್ಪಾದಕ ಸಂಸ್ಥೆಗಳು, ಸ್ಟಾರ್ಟಪ್, ಕಿರು ಆಹಾರ ಸಂಸ್ಕರಣಾ ಉದ್ದಿಮೆದಾರರಿಗೆ ಬೆಂಬಲ ನೀಡಲು ಬಜೆಟ್​ನಲ್ಲಿ 5 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.

Leave a Reply

Your email address will not be published. Required fields are marked *