ಬೆಂಗಳೂರು:ವೇತನ ಹಿಂಬಾಕಿ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯದ ಎಲ್ಲಾ ಸಾರಿಗೆ ನಿಗಮಗಳ ನೌಕರರು ಅಕ್ಟೋಬರ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಕೆ.ಎಸ್.ಆರ್.ಟಿ.ಸಿ. ನಿಗಮಗಳ ಒಕ್ಕೂಟದ(CITU) ಅಧ್ಯಕ್ಷ ಹೆಚ್.ಡಿ ರೇವಪ್ಪ ಈ ಕುರಿತು ಮಾಧ್ಯಮ ಹೇಳಿಕೆ ನೀಡಿದ್ದು, 2020ರ ಜನವರಿ 1ರ ನಂತರ ವೇತನವನ್ನು ಶೇಕಡ 15 ರಷ್ಟು ಹೆಚ್ಚಳ ಮಾಡಲಾಗಿದ್ದು ಪರಿಷ್ಕೃತ ಹಿಂಬಾಕಿಯನ್ನು ಪಾವತಿಸಬೇಕು. ಎಲೆಕ್ಟ್ರಿಕ್ ಬಸ್ ಗಳಿಗೆ ಸಂಸ್ಥೆಯ ನೌಕರರೇ ಚಾಲಕರಾಗಬೇಕು. ಈ ಹಿಂದೆ ಪ್ರತಿಭಟನೆ ನಡೆಸಿದಾಗ ವಜಾಗೊಳಿಸಿದ್ದ ಎಲ್ಲಾ ನೌಕರರನ್ನು ವಾಪಸ್ ಸೇವೆಗೆ ತೆಗೆದುಕೊಳ್ಳಬೇಕು ಮುಂತಾದ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ನಾಲ್ಕು ನಿಗಮಗಳ ಎಲ್ಲಾ ನೌಕರರು ಅಕ್ಟೋಬರ್ 5ರಂದು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಸರ್ಕಾರ ಸಾರಿಗೆ ನೌಕರರ ಬೇಡಿಕೆಗಳಿಗೆ ಸ್ಪಂದಿಸಿ ಪರಿಹಾರ ಕಂಡುಕೊಳ್ಳದಿದ್ದಲ್ಲಿ ಅ. 5 ರಂದು ಸಾರ್ವಜನಿಕ ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.























