ಬೆಂಗಳೂರು : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿರುವ ಡಿ.ವಿ ಸದಾನಂದ ಗೌಡ ಅವರು ಪಕ್ಷದ ವರಿಷ್ಟರ ನಿಧಾರದಿಂದ ತೀವೃ ಅಸಮಾಧಾನಗೊಂಡಿದ್ದರು. ಈ ಬೆಳವಣಿಗೆಯ ನ ಡುವೆ ಡಿವಿ ಸದಾನಂದಗೌಡ ಅವರು ಬಿಜೆಪಿಯನ್ನು ತೊರೆಯುವ ಸಾಧ್ಯತೆಯಿದೆ ಎನ್ನಲಾಗಿದೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿ ಮೈಸೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲ್ಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಕಾಂಗ್ರೆಸ್ ನಾಯಕರು ನನ್ನನ್ನು ಸಂಪರ್ಕಿಸಿದ್ದಾರೆ ಎಂದು ಡಿವಿಎಸ್ ಹೇಳಿರುವುದು ಕುತೂಹಲ ಮೂಡಿಸಿದೆ.
ಸೋಮವಾರ 72ನೇ ವರ್ಷಕ್ಕೆ ಕಾಲಿಡುತ್ತಿರುವ ಡಿವಿ ಸದಾನಂದಗೌಡ ಅವರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾಗಿದ್ದಾರೆ. ಆದರೆ, ಈ ಬಾರಿ ಅವರಿಗೆ ಟಿಕೆಟ್ ನಿರಾಕರಿಸಿರುವ ಬಿಜೆಪಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರು ಉತ್ತರದಿಂದ ಟಿಕೆಟ್ ನೀಡಿದೆ. ಇದರಿಂದ ಅಸಮಾಧಾನಗೊಂಡಿರುವ ಡಿವಿಎಸ್ ಬಿಜೆಪಿಯಿಂದ ಒಂದು ಕಾಲು ಹೊರಗಿಟ್ಟಿದ್ದಾರೆ ಎನ್ನಲಾಗಿದ್ದು, ಅಚ್ಚರಿಯ ಬೆಳವಣಿಗೆಯಲ್ಲಿ ಡಿವಿಎಸ್ ಅವರು ಮೈಸೂರಿನಲ್ಲಿ ಯದುವೀರ ಒಡೆಯರ್ ವಿರುದ್ಧ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದಲ್ಲದೇ ಡಿವಿ ಸದಾನಂದಗೌಡ ಅವರಿಗೆ ಕಾಂಗ್ರೆಸ್ ನಾಲ್ಕು ಕ್ಷೇತ್ರಗಳನ್ನು ಆಫರ್ ಮಾಡಿದೆ ಎನ್ನಲಾಗಿದೆ. ಅದರಲ್ಲಿ ಬೆಂಗಳೂರು ಉತ್ತರ, ಮೈಸೂರು – ಕೊಡಗು, ದಕ್ಷಿಣ ಕನ್ನಡ ಹಾಗೂ ಉಡುಪಿ – ಚಿಕ್ಕಮಗಳೂರು ಕ್ಷೇತ್ರಗಳು ಇವೆ ಎನ್ನಲಾಗಿದೆ. ಡಿವಿ ಸದಾನಂದಗೌಡರ ಪತ್ನಿ ಕೊಡಗಿನವರಾಗಿದ್ದು, ಈ ಹಿನ್ನಲೆಯಲ್ಲಿ ಕಾರಣ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಸದಾನಂದಗೌಡರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ.
ಕಾಂಗ್ರೆಸ್ ನಾಯಕರು ಡಿವಿ ಸದಾನಂದಗೌಡ ಜೊತೆ ಮಾತುಕತೆ ನಡೆಸುತ್ತಿದ್ದು, ಒಂದೆರಡು ದಿನದಲ್ಲಿ ಡಿವಿ ಸದಾನಂದಗೌಡರು ತಮ್ಮ ನಿರ್ಧಾರವನ್ನು ಅಧಿಕೃತವಾಗಿ ಘೋಷಣೆ ಮಾಡುವ ನಿರೀಕ್ಷೆ ಇದೆ. ಈ ಕುರಿತು ಡಿವಿ ಸದಾನಂದ ಗೌಡ ಪ್ರತಿಕ್ರಿಯಿಸಿದ್ದು ಕಾಂಗ್ರೆಸ್ ನಾಯಕರು ನನ್ನನ್ನು ಸಂಪರ್ಕಿಸಿದ್ದಾರೆ. ಕುಟುಂಬದವರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ, ಸ್ವಾರ್ಥಕ್ಕಾಗಿ ಟಿಕೆಟ್ ತಪ್ಪಿಸಿದರೆ ಯೋಚನೆ ಮಾಡಬೇಕಾಗುತ್ತದೆ ಎಂದಿದ್ದಾರೆ. ಈ ಮೂಲಕ ಬಿಜೆಪಿ ತೊರೆಯುವ ಬಗ್ಗೆ ಪರೋಕ್ಷ ಮಾತುಗಳನ್ನಾಡಿದ್ದಾರೆ. ಸದಾನಂದಗೌಡ ಒಕ್ಕಲಿಗ ಸಮುದಾಯದ ಪ್ರಮುಖ ನಾಯಕರಾಗಿದ್ದು, ಈ ಹಿಂದೆ ಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಜೊತೆಗೆ ಎನ್ಡಿಎ ಅವಧಿಯಲ್ಲಿ ರೈಲ್ವೇ, ಕಾನೂನು ಮತ್ತು ಸಂಸದೀಯ ಇಲಾಖೆ, ಸಾಂಖ್ಯಿಕ ಮತ್ತು ಯೋಜನೆ ಜಾರಿ ಇಲಾಖೆಯ ಕೇಂದ್ರ ಸಚಿವರಾಗಿಯೂ ಡಿವಿ ಸದಾನಂದಗೌಡ ಕಾರ್ಯನಿರ್ವಹಿಸಿದ್ದಾರೆ. ಅದಲ್ಲದೇ ಪಕ್ಷದಲ್ಲಿ ಶಿಸ್ತು ಉಳಿದಿಲ್ಲ ಎಂದು ಬಹಿರಂಗವಾಗಿಯೇ ಟೀಕಿಸಿದ್ದರು.

ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.






