ಶಿವಮೊಗ್ಗ : ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳಲ್ಲಿಯೂ ಮಹತ್ತರ ಬದಲಾವಣೆಯಾಗಲಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ರಾಜೀನಾಮೆ ನೀಡಿದರೆ, ಇನ್ನೊಂದಡೆ ಕಡಿಮೆ ಸ್ಥಾನ ಗಳಿಸಿದ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ರಾಜೀನಾಮೆ ಕೊಡಬೇಕಾಗಬಹುದು ಎಂದರು. ಬಿಜೆಪಿ ಮೇಲೆ ಯಡಿಯೂರಪ್ಪ ಕುಟುಂಬದ ಹಿಡಿತ ತಪ್ಪಿಸಲೆಂದೇ ನನ್ನ ಸ್ಪರ್ಧೆ ಎಂದ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ರಾಘವೇಂದ್ರ ಸೋಲುತ್ತಾರೆ. ಅಲ್ಲಿಗೆ ಪಕ್ಷದ ಮೇಲಿನ ಯಡಿಯೂರಪ್ಪ ಕುಟುಂಬದ ಹಿಡಿತ ಶೇ.30 ಕಡಿಮೆಯಾಗುತ್ತದೆ. ವಿಜಯೇಂದ್ರ ಅಧ್ಯಕ್ಷ ಸ್ಥಾನದಿಂದ ಇಳಿದರೆ ಶೇ.60 ಹಿಡಿತ ಕಡಿಮೆಯಾಗಲಿದೆ ಎಂದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಗೀತಾಗೆ ಟಿಕೆಟ್ ಸಿಗಲು ಯಡಿಯೂರಪ್ಪ-ಸಿದ್ದರಾಮಯ್ಯನವರ ಹೊಂದಾಣಿಕೆ ರಾಜಕಾರಣ ಕಾರಣ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸುತ್ತಿದ್ದಾರೆ. ಬಿ.ವೈ.ರಾಘವೇಂದ್ರ ಸುಲಭವಾಗಿ ಗೆಲ್ಲಬೇಕೆಂಬ ಕಾರಣಕ್ಕೆ ದುರ್ಬಲ ಅಭ್ಯರ್ಥಿಯಾಗಿ ಗೀತಾರನ್ನು ಕಣಕ್ಕೆ ಇಳಿಸಲಾಗಿದೆ. ಗೀತಾ ಡಮ್ಮಿ ಕ್ಯಾಂಡಿಡೇಟ್ ಎಂದು ಕಾಂಗ್ರೆಸ್ ಕಾರ್ಯಕರ್ತರು ಹೇಳುತ್ತಿದ್ದಾರೆ.
ನನ್ನ ಜೊತೆಗೆ ಶಿವಮೊಗ್ಗ ನಗರದ ನಗರಪಾಲಿಕೆ ಮಾಜಿ ಸದಸ್ಯರು, ಮಾಜಿ ಮೇಯರ್ಗಳು, ಮುಖಂಡರು ಇದ್ದಾರೆ. ಕೆಲವರಿಗೆ ಅನಿವಾರ್ಯವಾಗಿ ಇಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದರೆ ಅವರು ಅದೃಶ್ಯ ನಾಯಕರಾಗಿ ನನ್ನ ಜೊತೆಗಿರುತ್ತಾರೆ ಎಂದರು. ಈಗಲೂ ನಾನು ಬಿಜೆಪಿಯಲ್ಲಿಯೇ ಇದ್ದೇನೆ. ಮುಂದೆಯೂ ಇರುತ್ತೇನೆ. ಬಿಜೆಪಿ ನನ್ನ ತಾಯಿ. ಕೆಲವರು ತಾಯಿಯಿಂದ ನನ್ನ ಬೇರ್ಪಡಿಸಲು ಯತ್ನಿಸುತ್ತಿದ್ದಾರೆ. ಆದರೆ ಅದು ಸಾಧ್ಯವಿಲ್ಲ ಎಂದರು.



