ಬೆಂಗಳೂರು:ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಲವಾದ ಇಚ್ಚೆ ಹೊಂದಿದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕೊನೆಗೂ ಸ್ಪರ್ಧಾ ಕಣದಿಂದ ಹಿಂದೆ ಸರಿದು ಬಿಜೆಪಿ ಸೇರ್ಪಡೆಯ ಇಂಗಿತ ವ್ಯಕ್ತಪಡಿಸಿದ್ದರು. ಇದೀಗ ಬಿಜೆಪಿ ಪಕ್ಷ ಸೇರ್ಪಡೆಗೆ ಮುಹೂರ್ತ ನಿಗದಿಯಾಗಿದ್ದು ನಾಳೆಯೇ (ಶುಕ್ರವಾರ) ಬೆಂಗಳೂರಿನ ಬಿಜೆಪಿ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ.
ಸುಮಲತಾ ಅವರು ಸ್ಪರ್ಧೆಯಿಂದ ಹಿಂದೆ ಸರಿದು ಮೈತ್ರಿ ಪಕ್ಷದ ಅಭ್ಯರ್ಥಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಬೆಂಬಲ ಘೋಷಿಸಿದ್ದಾರೆ.
ಈ ಕುರಿತು ಸುಮಲತಾ ತಮ್ಮ ಫೇಸ್ ಬುಕ್ ಪುಟದಲ್ಲಿ ಪೋಸ್ಟ್ ಮಾಡಿದ್ದು, ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದಾರೆ.
ಈ ಮೂಲಕ ಬಿಜೆಪಿಗೆ ಅತ್ಯಂತ ಕಗ್ಗಂಟಿನ ಕ್ಷೇತ್ರವಾಗಿದ್ದ ಮಂಡ್ಯದ ಸುಮಲತಾ ಅವರ ಅಸಮಾಧಾನ ಶಮನಗೊಳಿಸಲು ಮೈತ್ರಿಕೂಟದ ನಾಯಕರು ಯಶಸ್ವಿಯಾಗಿದ್ದು ಈ ಮೂಲಕ ಬಿಜೆಪಿಗೆ ಭಾರಿ ಬಲ ಬಂದಂತಾಗಿದೆ.




