ಉಡುಪಿ: ಈ ಬಾರಿಯ ಶೈಕ್ಷಣಿಕ ವರ್ಷದ ಆರಂಭಕ್ಕೆ ಶಾಲೆಗಳು ಸಜ್ಹಾಗಿದ್ದು, ಈ ಬಾರಿ ತರಗತಿಗಳು ಆರಂಭದ ಜತೆಗೆ ಪಠ್ಯ ಪುಸ್ತಕ, ಯೂನಿಫಾರಂ ಪೂರೈಕೆಯಾಗಲಿದ್ದು, ಮೇ. 27ರಿಂದ ನಲಿಕಲಿ ಕಾರ್ಯಕ್ರಮ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಅವರು ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೆಪಿಎಸ್ ಶಾಲೆಗಳಿಗೆ ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂದಿನ ವರ್ಷ 500 ಕೆಪಿಎಸ್ ಶಾಲೆಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ 3,000 ಸರ್ಕಾರಿ ಶಾಲೆಗಳನ್ನು ತೆರೆಯಲಾಗುವುದು. ಕಾರ್ಪೊರೇಟ್ ಸಂಸ್ಥೆಗಳ ಸಿಎಸ್ಆರ್ ನಿಧಿ ಬಳಸಿಕೊಂಡು ಪ್ರಸಕ್ತ ವರ್ಷ 500 ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ 3 ರಿಂದ ಗರಿಷ್ಠ 6 ಶಾಲೆಗಳನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ಕೆಲವು ಖಾಸಗಿ ಶಾಲೆಗಳು ಬೇಸಿಗೆ ರಜೆ ಅವಧಿ ಕಡಿತಗೊಳಿಸಿ ಶಾಲೆ ಆರಂಭಿಸಿರುವ ಕ್ರಮಕ್ಕೆ ಶಿಕ್ಷಣ ಇಲಾಖೆ ಆಕ್ಷೇಪಿಸಿದ್ದು, ಪ್ರಸಕ್ತ ಶೈಕ್ಷಣಿಕ ಸಾಲಿನ ಶಾಲೆಗಳನ್ನು ನಿಗದಿಯಂತೆಯೇ ಮೇ 29 ರಿಂದ ಆರಂಭಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.










