ಬೆಂಗಳೂರು: ಆಶ್ರಮ ಶಾಲೆಯ ಮಕ್ಕಳು, ಆರ್ಥಿಕ ಹಿಂದುಳಿದವರು, ದಲಿತ ಮಕ್ಕಳ ಶಿಕ್ಷಣಕ್ಕಾಗಿ ಕೆಲಸ ಮಾಡದ ಅಧಿಕಾರಿಗಳು ಸೇವೆಯಲ್ಲಿರಲು ಅನರ್ಹರು ಎಂದು ಅಧಿಕಾರಿಗಳ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯೊಂದಿಗೆ ಮಂಗಳವಾರ ಪರಿಶೀಲನಾ ಸಭೆ ನಡೆಸಿದ ಸಿಎಂ, ಆಶ್ರಮ ಶಾಲೆಯ ಮಕ್ಕಳು, ಬಡವರು, ದಲಿತ ಮಕ್ಕಳ ಶಿಕ್ಷಣದ ಬಗ್ಗೆ ನಿರ್ಲಕ್ಷ್ಯ ವಹಿಸಿ ಆಶ್ರಮ ಶಾಲೆಗಳಿಗೆ ರಾತ್ರಿ ವೇಳೆ ಭೇಟಿ ನೀಡಿ ವ್ಯವಸ್ಥೆ ಗಮನಿಸದಿರುವುದಕ್ಕೆ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.ನಿಯಮಿತವಾಗಿ ಹಾಸ್ಟೆಲ್ ಗಳಿಗೆ, ಆಶ್ರಮ ಶಾಲೆಗಳಿಗೆ ಭೇಟಿ ನೀಡಬೇಕು. ನಿರಂತರವಾಗಿ ಗುಣಮಟ್ಟ ಹೆಚ್ಚಿಸಲು ಶ್ರಮಿಸಬೇಕು ಎಂದು ಖಡಕ್ ಸೂಚನೆ ನೀಡಿದರು.
ಇಲಾಖೆಯ ಒಟ್ಟಾರೆ ಆಯವ್ಯಯದಲ್ಲಿ ಬಿಡುಗಡೆಯಾದ ಮೊತ್ತ 1884.01 ಕೋಟಿ ರೂ. ನಲ್ಲಿ 1879.35 ಕೋಟಿ ವೆಚ್ಚವಾಗಿದ್ದು, ಶೇ,99.75ರಷ್ಟು ಸಾಧನೆಯಾಗಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ 389 ವಿದ್ಯಾರ್ಥಿ ನಿಲಯಗಳು, ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳು – 39,541 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಒದಗಿಸಿದ್ದು, 194.71 ಕೋಟಿ ರೂ. ಒದಗಿಸಲಾಗಿದೆ. ಎಸ್ಎಸ್ಎಲ್ಸಿ ಯಲ್ಲಿ ಶೇ. 77 ರಷ್ಟು ಫಲಿತಾಂಶ ಬಂದಿದ್ದು, ಫಲಿತಾಂಶ ಉತ್ತಮ ಪಡಿಸಲು ಸೂಚನೆ ನೀಡಿದರು.
2,90,546 ವಿದ್ಯಾರ್ಥಿಗಳಿಗೆ 50.47 ಕೋಟಿ ರೂ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಪಾವತಿ ಮಾಡಲಾಗಿದೆ. 2,48,887 ವಿದ್ಯಾರ್ಥಿಗಳಿಗೆ 302.64 ಕೋಟಿ ರೂ. ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಪಾವತಿ ಮಾಡಲಾಗಿದೆ ಎಂದು ತಿಳಿಸಿದರು.ಹಾಸ್ಟೆಲ್ಗಳಿಗೆ ಸಂಜೆ ವೇಳೆಗೆ ಭೇಟಿ ನೀಡಿ, ಶುಚಿ ಕಿಟ್ಗಳು, ಆಹಾರ ಪದಾರ್ಥ ವಿತರಣೆ ಸಮರ್ಪಕವಾಗಿ ಆಗುತ್ತಿದೆಯೇ ಎಂದು ಪರಿಶೀಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅನುದಾನ ಲಭ್ಯವಿದೆ ಎಂಬ ಕಾರಣಕ್ಕೆ ಬೇಡಿಕೆ ಇಲ್ಲದೆ ಇದ್ದರೂ, ಹಾಸಿಗೆ, ಬೆಡ್ಶೀಟ್ ಮತ್ತಿತರ ವಸ್ತುಗಳನ್ನು ಅನಗತ್ಯವಾಗಿ ಖರೀದಿಸಿ ಗುಡ್ಡೆಹಾಕಿಕೊಳ್ಳುವುದನ್ನು ಸಹಿಸಲಾಗದು. ಅನಗತ್ಯವಾಗಿ 4 ಜಿ ವಿನಾಯಿತಿ ಪಡೆಯುವ ಬದಲು ನೇರವಾಗಿ ಟೆಂಡರ್ ಕರೆದು ಖರೀದಿ, ಸೇವೆಗಳನ್ನು ಪಡೆಯಬೇಕೆಂದು ಸೂಚನೆ ನೀಡಿದರು.
ಸಭೆಯಲ್ಲಿ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ನಿರ್ದೇಶಕ ಕಲ್ಲೇಶ್ ಸೇರಿ ಇತರೆ ಅಧಿಕಾರಿಗಳು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್ ಉಪಸ್ಥಿತರಿದ್ದರು.