ಅಜೆಕಾರು: ಡೆಂಗ್ಯೂ ವಿರೋಧಿ ಮಾಸಾಚರಣೆ ಮತ್ತು ಜನಸಂಖ್ಯಾ ದಿನಾಚರಣೆ ಕುರಿತು ಮಾಹಿತಿ ಕಾರ್ಯಕ್ರಮ ಮರ್ಣೆ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷೆ ಪ್ರಭಾವತಿ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು.
ತಾಲೂಕು ಆರೋಗ್ಯಾಧಿಕಾರಿ ಡಾ. ಸಂದೀಪ್ ಕುಡ್ವ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಸ್ತುತ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತಿದ್ದು ಇದರ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕು ಎಂದರು.
ಅಜೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅನುಷಾ ಶೆಟ್ಟಿ ಮಾತನಾಡಿ, ರೋಗ ಲಕ್ಷಣ, ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದರು. ಜನಸಂಖ್ಯಾ ನಿಯಂತ್ರಣ ಕುಟುಂಬ ಕಲ್ಯಾಣ ಯೋಜನೆ ಕುರಿತು ಮಾಹಿತಿ ನೀಡಿದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಸಂತ್ ಶೆಟ್ಟಿ ಸೊಳ್ಳೆಗಳಿಂದ ಹರಡುವ ರೋಗಗಳು ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಿಲಕ್ ರಾಜ್ ವಿಲೇಜ್ ಟಾಸ್ಕ್ ಫೋರ್ಸ್ (village task force) ಬಗ್ಗೆ ಮಾಹಿತಿ ನೀಡುತ್ತಾ ಪ್ರತೀ ತಿಂಗಳು ಎಲ್ಲಾ ಇಲಾಖೆ ಯವರೂ ಸೇರಿ ಸಮಿತಿ ಸಭೆ ನಡೆಸಿ ಸಮಸ್ಯೆ ಇರುವಪ್ರದೇಶಗಳಿಗೆ ಭೇಟಿ ನೀಡುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ PHCO ಅಶ್ವಿನಿ , ಪ್ರತಿಮಾ, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಪಂಚಾಯತ್ ಉಪಾಧ್ಯಕ್ಷರು , ಸದಸ್ಯರು ಭಾಗಹಿಸಿದ್ದರು. ಆರೋಗ್ಯ ನಿರೀಕ್ಷಣಾಧಿಕಾರಿ ಆಶೀಕ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು.














