Share this news

ಮಂಗಳೂರು: ಅತ್ತಾವರ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದಂಪತಿಗೆ ಜೀವಾವಧಿ ಮತ್ತು ಈ ದಂಪತಿಗೆ ಸಹಕರಿಸಿದ ಇನ್ನೋರ್ವ ಆರೋಪಿಗೆ ಆರುವರೆ ತಿಂಗಳು ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಮಂಗಳವಾರ ತೀರ್ಪು ನೀಡಿದ್ದಾರೆ.

ನಗರದ ವೆಲೆನ್ಸಿಯಾ ಸಮೀಪದ ಸೂಟರ್‌ಪೇಟೆಯ ನಿವಾಸಿಗಳಾಗಿದ್ದ ಜೋನಸ್ ಸ್ಯಾಮ್ಸನ್ ಆಲಿಯಾಸ್ ಜಾನ್ಸ್ ಜೌಲಿನ್ ಸ್ಯಾಮ್ಸನ್ (40) ಆತನ ಪತ್ನಿ ವಿಕ್ಟೋರಿಯಾ ಮಥಾಯಿಸ್ (47) ಜೀವಾವಧಿ ಶಿಕ್ಷೆಗೊಳಗಾದ ಆರೋಪಿಗಳು. ಈ ದಂಪತಿಗೆ ಸಹಕರಿಸಿದ್ದ ಮರಕಡದ ತಾರಿಪಾಡಿ ಗುಡ್ಡೆಯ ರಾಜು (34) ಎಂಬಾತನಿಗೆ ಆರುವರೆ ತಿಂಗಳ ಶಿಕ್ಷೆ ವಿಧಿಸಲಾಗಿದೆ.

2019ರ ಮೇ 11ರಂದು ಫಂಡ್‌ನ (ಕುರಿಫಂಡ್) ಹಣದ ವಿಚಾರವಾಗಿ ಈ ಕೊಲೆ ನಡೆದಿತ್ತು. ಆರೋಪಿ ದಂಪತಿಯು ತನ್ನ ಮನೆಯಲ್ಲಿಯೇ ಅತ್ತಾವರದ ಶ್ರೀಮತಿ ಶೆಟ್ಟಿ ಅವರನ್ನು ಕೊಂದು ಮೃತದೇಹವನ್ನು 29 ತಂಡುಗಳನ್ನಾಗಿ ಮಾಡಿ ನಗರದ ಹಲವು ಕಡೆಗಳಲ್ಲಿ ಎಸೆದಿದ್ದ ಬಗ್ಗೆ ಕದ್ರಿ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಕೊಲೆ ಪ್ರಕರಣ ಇಡೀ ನಗರವನ್ನೇ ತಲ್ಲಣಗೊಳಿಸಿತ್ತು. ಶ್ರೀಮತಿ ಶೆಟ್ಟಿ (42) ಅವರು ಅತ್ತಾವರದಲ್ಲೇ ಶ್ರೀ ಪೊಳಲಿ ಇಲೆಕ್ಟ್ರಾನಿಕ್ಸ್ ಅಂಗಡಿಯನ್ನು ಇಟ್ಟುಕೊಂಡಿದ್ದರು. ಅಲ್ಲದೆ ಕುರಿ ಚಿಟ್ ಫಂಡ್ ವ್ಯವಹಾರವನ್ನೂ ನಡೆಸುತ್ತಿದ್ದರು. ಈ ಕುರಿಫಂಡ್‌ನಲ್ಲಿ ಜೋನಸ್ 2 ಸದಸ್ಯತ್ವವನ್ನು ಹೊಂದಿದ್ದು, ಮಾಸಿಕ ಕಂತು ಪಾವತಿಸಲು ವಿಫಲನಾಗಿದ್ದ. ಮಾಸಿಕ ಕಂತುಗಳ ಹಣ ಪಾವತಿಸುವಂತೆ ಶ್ರೀಮತಿ ಶೆಟ್ಟಿ ಒತ್ತಾಯಿಸುತ್ತಿದ್ದರು ಎನ್ನಲಾಗಿದೆ.

ಶ್ರೀಮತಿ ಶೆಟ್ಟಿ ಹಣ ಕೇಳುವುದಕ್ಕಾಗಿ ಆರೋಪಿ ಜೋನಸ್‌ನ ಮನೆಗೆ 2019ರ ಮೇ 11ರಂದು ತೆರಳಿದ್ದರು. ಅಲ್ಲಿ ಮಾತಿಗೆ ಮಾತು ಬೆಳೆದು ಜೋನಸ್ ಮರದ ತುಂಡಿನಿಂದ ಶ್ರೀಮತಿ ಶೆಟ್ಟಿಯ ತಲೆಗೆ ಹೊಡೆದಿದ್ದ. ಪ್ರಜ್ಞಾಹೀನರಾಗಿದ್ದ ಶ್ರೀಮತಿ ಶೆಟ್ಟಿಯನ್ನು ಜೋನಸ್ ಮತ್ತಾತನ ಪತ್ನಿ ವಿಕ್ಟೋರಿಯಾ ಬಚ್ಚಲು ಕೋಣೆಗೆ ಎಳೆದುಕೊಂಡು ಹೋಗಿ ಹರಿತವಾದ ಕತ್ತಿಯಿಂದ ಕುತ್ತಿಗೆಯನ್ನು ಕೊಯ್ದು ಮೈಮೇಲಿದ್ದ ಚಿನ್ನಾಭರಣಗಳನ್ನು ಸುಲಿಗೆ ಮಾಡಿ ರುಂಡ, ಕೈ, ಕಾಲು ಹಾಗೂ ಇತರ ಭಾಗಗಳನ್ನು 29 ತುಂಡುಗಳನ್ನು ಮಾಡಿ ಪ್ಲಾಸ್ಟಿಕ್ ಗೋಣಿ ಚೀಲದಲ್ಲಿ ತುಂಬಿಸಿ ನಗರದ ಹಲವೆಡೆ ಇಟ್ಟಿದ್ದರು. ಶ್ರೀಮತಿ ಶೆಟ್ಟಿಯ ವ್ಯಾನಿಟಿ ಬ್ಯಾಂಗ್ ಮತ್ತು ಚಪ್ಪಲಿಯನ್ನು ಆರೋಪಿಗಳು ಮನೆಯ ಒಲೆಯಲ್ಲಿ ಸುಟ್ಟು ಹಾಕಿದ್ದರು.

ಕೃತ್ಯ ನಡೆದ ಮೂರು ದಿನದ ಬಳಿಕ ನಗರದ ಕದ್ರಿ ಬಳಿಯ ಅಂಗಡಿಯೊಂದರ ಬಳಿ ರುಂಡ ಪತ್ತೆಯಾದ ನಂತರ ಈ ಕೊಲೆ ಪ್ರಕರಣವು ಬೆಳಕಿಗೆ ಬಂದಿತ್ತು. ನಂತರ ನಂದಿಗುಡ್ಡೆಯಲ್ಲಿ ದೇಹದ ತುಂಡುಗಳು ಪತ್ತೆಯಾಗಿದ್ದವು.

ಈ ಪ್ರಕರಣದಲ್ಲಿ ಮರಕಡದ ತಾರಿಪಾಡಿ ಗುಡ್ಡೆಯ ರಾಜು ಎಂಬಾತನೂ ಸಹಕರಿಸಿದ್ದ. ಮೂವರನ್ನೂ ಬಂಧಿಸಿದ್ದ ಕದ್ರಿ ಠಾಣೆಯ ನಿರೀಕ್ಷಕ ಮಹೇಶ್ ಎಂ. ತನಿಖೆ ಕೈಗೊಂಡಿದ್ದರು. ಇನ್ಸ್‌ಪೆಕ್ಟರ್ ಶಾಂತಾರಾಂ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪೊರೆನ್ಸಿಕ್ ವಿಭಾಗದ ವೈದ್ಯಾಧಿಕಾರಿ ಡಾ. ಜಗದೀಶ್ ರಾವ್ ಶವಪರೀಕ್ಷೆ ನಡೆಸಿ ವರದಿ ನೀಡಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್. ಎಸ್. 48 ಸಾಕ್ಷಿದಾರರನ್ನು ವಿಚಾರಣೆಗೊಳಪಡಿಸಿದ್ದರು. 141 ದಾಖಲೆಗಳನ್ನು ಗುರುತಿಸಲಾಗಿತ್ತು. ಜೋನಸ್ ಮತ್ತು ವಿಕ್ಟೋರಿಯಾ ವಿರುದ್ಧ ಕೊಲೆ, ಸುಲಿಗೆ ಮತ್ತು ಸಾಕ್ಷ್ಯನಾಶ ಹಾಗೂ ರಾಜು ವಿರುದ್ಧ ಕೊಲೆಗೆ ಸಹಾಯ, ಕಳವು ಮಾಡಿರುವ ಸೊತ್ತುಗಳನ್ನು ಇಟ್ಟುಕೊಂಡಿರುವ ಆರೋಪಗಳು ಸಾಬೀತಾಗಿದೆ ಎಂದು ನ್ಯಾಯಾಧೀಶರು ಸೆ.13ರಂದು ತೀರ್ಪು ನೀಡಿದ್ದಾರೆ.

ಶಿಕ್ಷೆಯ ಪ್ರಮಾಣವನ್ನು ಸೆ.23ರಂದು ಪ್ರಕಟಿಸಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ವಾದ ಮಂಡಿಸಿದ್ದರು.

ದಂಪತಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 25 ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡ ತೆರಲು ತಪ್ಪಿದಲ್ಲಿ 1 ವರ್ಷ ಸಾದಾ ಸಜೆ, ಐಪಿಸಿ 201ರಡಿ (ಸಾಕ್ಷ್ಯ ನಾಶ) 7 ವರ್ಷಗಳ ಸಾದಾ ಸಜೆ ಮತ್ತು ತಲಾ 5 ಸಾವಿರ ರೂ. ದಂಡ ವಿಧಿಸಿದ್ದಾರೆ. ಈ ದಂಡ ತೆರಲು ವಿಫಲವಾದಲ್ಲಿ ಮತ್ತೆ 3 ತಿಂಗಳ ಸಾದಾ ಸಜೆ, ಐಪಿಸಿ 392 ಜತೆಗೆ 34ರಡಿ (ಸುಲಿಗೆ)ಯಲ್ಲಿ 5 ವರ್ಷ ಸಾದಾ ಶಿಕ್ಷೆ ಹಾಗೂ ತಲಾ 5 ಸಾವಿರ ರೂ. ದಂಡ, ದಂಡ ಪಾವತಿಸುವಲ್ಲಿ ವಿಫಲನಾದರೆ 6 ತಿಂಗಳ ಸಾದಾ ಸಜೆ ವಿಧಿಸಿದ್ದಾರೆ.

3ನೇ ಆರೋಪಿಗೆ ಐಪಿಸಿ 414ರಡಿ (ಆಶ್ರಯ)ಯಲ್ಲಿ ಆರೂವರೆ ತಿಂಗಳು ಸಾದಾ ಸಜೆ ಮತ್ತು 5 ಸಾವಿರ ರೂ. ದಂಡ ವಿಧಿಸಿದೆ. ದಂಡದ ಮೊತ್ತದಲ್ಲಿ ಶ್ರೀಮತಿ ಶೆಟ್ಟಿಯ ತಾಯಿಗೆ 75 ಸಾವಿರ ರೂ. ಪರಿಹಾರ ನೀಡಬೇಕು ಹಾಗೂ ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ಸಂತ್ರಸ್ತರ ಪರಿಹಾರ ಯೋಜನೆಯಡಿ ಪರಿಹಾರ ನೀಡಬೇಕೆಂದು ತೀರ್ಪಿನಲ್ಲಿ ನಿರ್ದೇಶನ ನೀಡಲಾಗಿದೆ.

ಜೀವಾವಧಿ ಶಿಕ್ಷೆಗೊಳಗಾಗಿದ್ದ ಆರೋಪಿ ಜೋನಸ್ ಹಂದಿ ಮಾಂಸದ ಕೆಲಸ ಮಾಡುತ್ತಿದ್ದ. ಅಲ್ಲದೆ ಸಂಬಂಧಿಕರ ಹತ್ಯೆಯ ಪ್ರಕರಣದ ಆರೋಪಿಯೂ ಆಗಿದ್ದ. ಫಾಸ್ಟ್‌ಫುಡ್ ಅಂಗಡಿಯೊಂದನ್ನು ಕೂಡ ನಡೆಸುತ್ತಿದ್ದ. ಮನೆಯಲ್ಲಿ ಜೋನಸ್ ಮತ್ತು ವಿಕ್ಟೋರಿಯಾ ಮಾತ್ರ ನೆಲೆಸುತ್ತಿದ್ದರು. ಇನ್ನೋರ್ವ ಆರೋಪಿ ರಾಜು ಎಂಬಾತ ಜೋನಸ್‌ನ ಗೆಳೆಯನಾಗಿದ್ದು, ಆತನಿಗೆ ಕೊಲೆಯ ವಿಚಾರ ತಿಳಿಸಿ ಶ್ರೀಮತಿ ಶೆಟ್ಟಿಯ ಕೆಲವು ಆಭರಣಗಳನ್ನು ಕೂಡಾ ಆತನಿಗೂ ನೀಡಿದ್ದ.

ಇದಕ್ಕೆ ಪ್ರತಿಯಾಗಿ ರಾಜು ಇಬ್ಬರು ಆರೋಪಿಗಳು ಒಂದು ದಿನ ತನ್ನ ಮನೆಯಲ್ಲಿ ಉಳಿದುಕೊಳ್ಳಲು ಆಶ್ರಯ ನೀಡಿದ್ದ. ಹೆಲ್ಮೆಟ್‌ನೊಳಗೆ ರುಂಡವನ್ನಿಟ್ಟು ಕೆಪಿಟಿ ಬಳಿಯ ಅಂಗಡಿಯಲ್ಲಿ ಹೋಗುವ ದೃಶ್ಯವನ್ನು ಸಿಸಿ ಕ್ಯಾಮರಾದಲ್ಲಿ ಸೆರೆಯಾದುದರ ಆಧಾರದ ಮೇಲೆ ತನಿಖೆ ನಡೆಸಿದ್ದ ಕದ್ರಿ ಪೊಲೀಸರು ಶ್ರೀಮತಿ ಶೆಟ್ಟಿಯೊಂದಿಗೆ ಹಣಕಾಸು ವ್ಯವಹಾರ ನಡೆಸುತ್ತಿದ್ದವರ ವಿಚಾರಣೆಗೊಳಪಡಿಸಿದರು. ಆವಾಗ ಜೋನಸ್ ಕೂಡ ಈಕೆಯೊಂದಿಗೆ ಹಣಕಾಸು ವ್ಯವಹಾರ ನಡೆಸುತ್ತಿದ್ದುದು ಬೆಳಕಿಗೆ ಬಂದಿತ್ತು. ಅದರಂತೆ ಆತನ ಮನೆಗೆ ಪೊಲೀಸರು ದಾಳಿ ಮಾಡಿದಾಗ ಜೋನಸ್ ಕತ್ತು ಕುಯ್ದು ಆತ್ಮಹತ್ಯೆಗೆ ಯತ್ನಿಸಿದ್ದ. ತಕ್ಷಣ ಪೊಲೀಸರು ಆರೋಪಿಯನ್ನು ಅಪಾಯದಿಂದ ಪಾರು ಮಾಡಿ ಆಸ್ಪತ್ರೆಯಲ್ಲಿ ಪೊಲೀಸ್ ಬೆಂಗಾವಲಿನಲ್ಲಿ ಚಿಕಿತ್ಸೆ ಕೊಡಿಸಿದ್ದರು.

                       in 

Leave a Reply

Your email address will not be published. Required fields are marked *