ಬೆಂಗಳೂರು: ಸ್ಯಾಂಡಲ್ವುಡ್ ನಿರ್ದೇಶಕ ಗುರುಪ್ರಸಾದ್ (50) ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಮಾದನಾಯಕಹಳ್ಳಿಯ ಅಪಾರ್ಟ್ಮೆಂಟ್ನಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ ಅವರು, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ ಸೇರಿದಂತೆ ಅನೇಕ ಸಿನಿಮಾಗಳನ್ನು ಗುರುಪ್ರಸಾದ್ ನಿರ್ದೇಶಿಸಿದ್ದರು.ಗುರುಪ್ರಸಾದ್ ಅವರು ಸಾಲಗಾರರಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಶಂಕಿಸಲಾಗಿದೆ.
ಗುರುಪ್ರಸಾದ್ ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕರಲ್ಲಿ ಒಬ್ಬರು. ‘ಮಠ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಗುರುಪ್ರಸಾದ್ ಮೊದಲ ಸಿನಿಮಾಕ್ಕೆ ರಾಜ್ಯ ಪ್ರಶಸ್ತಿ ಪಡೆದಿದ್ದರು. ಅದಾದ ಬಳಿಕ ನಿರ್ದೇಶಿಸಿದ ‘ಎದ್ದೇಳು ಮಂಜುನಾಥ’ ಭಾರಿ ದೊಡ್ಡ ಹಿಟ್ ಆಯ್ತು, ಕಲ್ಟ್ ಕಾಮಿಡಿ ಸಿನಿಮಾ ಆಗಿ ಗುರುತಿಸಲಾಗುತ್ತಿದೆ. ಅದಾದ ಬಳಿಕ ‘ಡೈರೆಕ್ಟರ್ಸ್ ಸ್ಪೆಷಲ್’ ಸಿನಿಮಾ ಮಾಡಿದರು. ಈ ಸಿನಿಮಾ ಮೂಲಕ ಡಾಲಿ ಧನಂಜಯ್ ನಾಯಕನಾಗಿ ಪರಿಚಯಗೊಂಡರು. ಅದಾದ ಬಳಿಕ 2017 ರಲ್ಲಿ ‘ಎರಡನೇ ಸಲ’ ನಿರ್ದೇಶಿಸಿದರು. ಆ ಸಿನಿಮಾ ಸಾಧಾರಣ ಯಶಸ್ಸನ್ನಷ್ಟೆ ಕಂಡಿತು.
‘ಎರಡನೇ ಸಲ’ ಸಿನಿಮಾ ಆದಮೇಲೆ ದೊಡ್ಡ ಬ್ರೇಕ್ ತೆಗೆದುಕೊಂಡಿದ್ದ ಗುರುಪ್ರಸಾದ್ ಇದೇ ವರ್ಷದಲ್ಲಿ ಜಗ್ಗೇಶ್ ಅವರೊಟ್ಟಿಗೆ ‘ರಂಗನಾಯಕ’ ಸಿನಿಮಾ ಮಾಡಿದರು. ಸಿನಿಮಾ ಚಿತ್ರಮಂದಿರದಲ್ಲಿ ಅಟ್ಟರ್ ಫ್ಲಾಪ್ ಆಯ್ತು. ‘ರಂಗನಾಯಕ’ ಸಿನಿಮಾದ ಸೋಲಿನಿಂದ ವಿಚಲಿತರಾಗಿದ್ದ ಗುರುಪ್ರಸಾದ್ ಸಾಕಷ್ಟು ಸಾಲಗಳಿಗೆ ಸಿಲುಕಿಕೊಂಡಿದ್ದರು. ಕೊನೆಗೆ ಈಗ ನಿಧನ ಹೊಂದಿದ್ದಾರೆ. ಕೌಟುಂಬಿಕ ಕಲಹಗಳ ಕಾರಣದಿಂದಾಗಿ ಗುರುಪ್ರಸಾದ್ ಅವರ ಮೊದಲ ಮದುವೆ ಮುರಿದು ಬಿದ್ದಿತ್ತು, ಕೆಲ ತಿಂಗಳ ಹಿಂದಷ್ಟೆ ಅವರು ಎರಡನೇ ಮದುವೆ ಆಗಿದ್ದರು.































































































