Share this news

ಬೆಂಗಳೂರು: ಬಿಜೆಪಿಯ 18 ಶಾಸಕರನ್ನು ವಿಧಾನಸಭೆಯ ಕಲಾಪದಿಂದ 6 ತಿಂಗಳು ಅಮಾನತು ಮಾಡಿದ್ದ ಆದೇಶವನ್ನು ಸ್ಪೀಕರ್ ಯು.ಟಿ ಖಾದರ್ ಅವರು ಹಿಂಪಡೆದಿದ್ದಾರೆ.

ಇಂದು ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಈ‌ ಕುರಿತು ಅಮಾನತು ಆದೇಶವನ್ನು ಅಧಿಕೃತ ಹಿಂಪಡೆದು ಆದೇಶ ಹೊರಡಿಸಿದ್ದು, ಕಳೆದ ಅಧಿವೇಶನದ ಅವಧಿಯಲ್ಲಿ ಮಾರ್ಚ್ 21ರಂದು ಸದನದಲ್ಲಿ ಸಭಾಧ್ಯಕ್ಷರ ಪೀಠದ ಆದೇಶವನ್ನು ಲೆಕ್ಕಿಸದೇ ಸದನದ ಕಾರ್ಯಕಲಾಪಗಳಿಗೆ ಅಡ್ಡಿಯುಂಟು ಮಾಡಿ ಅಶಿಸ್ತಿನಿಂದ ಹಾಗೂ ಅಗೌರವದಿಂದ ನಡೆದುಕೊಂಡಿದ್ದರಿಂದ ವಿಧಾನಸಭಾ ಸದಸ್ಯರುಗಳಾದ ದೊಡ್ಡನಗೌಡ ಹೆಚ್. ಪಾಟೀಲ್, (ವಿರೋಧ ಪಕ್ಷದ ಮುಖ್ಯ ಸಚೇತಕರು), ಡಾ: ಅಶ್ವಥ್‌ನಾರಾಯಣ್ ಸಿ.ಎನ್.. ಎಸ್.ಆರ್. ವಿಶ್ವನಾಥ್, ಬಿ.ಎ. ಬಸವರಾಜ, ಎಂ.ಆರ್. ಪಾಟೀಲ್, ಚನ್ನಬಸಪ್ಪ (ಚೆನ್ನಿ), ಬಿ. ಸುರೇಶ್‌ಗೌಡ, ಉಮಾನಾಥ್ ಎ. ಕೋಟ್ಯಾನ್, ಶರಣು ಸಲಗರ, ಡಾ: ಶೈಲೇಂದ್ರ ಬೆಲ್ದಾಳೆ, ಸಿ.ಕೆ. ರಾಮಮೂರ್ತಿ, ಯಶಪಾಲ್ ಎ. ಸುವರ್ಣ, ಬಿ.ಪಿ. ಹರೀಶ್, ಡಾ: ಭರತ್‌ಶೆಟ್ಟಿ ವೈ., ಮುನಿರತ್ನ, ಬಸವರಾಜ್ ಮತ್ತಿಮೂಡ್, ಧೀರಜ್ ಮುನಿರಾಜು ಮತ್ತು ಡಾ: ಚಂದ್ರು ಲಮಾಣಿ ಅವರುಗಳನ್ನು ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳ ನಿಯಮ 348ರ ಮೇರೆಗೆ ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮಂಡಿಸಿದ ಹಾಗೂ ಸದನವು ಅಂಗೀಕರಿಸಿದ ಪ್ರಸ್ತಾವದಂತೆ ತಕ್ಷಣದಿಂದ ಜಾರಿಗೆ ಬರುವಂತೆ 6 ತಿಂಗಳುಗಳ ಕಾಲ ಸದನಕ್ಕೆ ಬಾರದಂತೆ ತಡೆಹಿಡಿದು ಅಮಾನತ್ತುಗೊಳಿಸಲಾಗಿತ್ತು.
ಬಳಿಕ ಈ ನಿರ್ಣಯವನ್ನು ಹಿಂತೆಗೆದುಕೊಳ್ಳುವಂತೆ ವಿರೋಧ ಪಕ್ಷದ ನಾಯಕರು ಹಾಗೂ ಅಮಾನತುಗೊಂಡ ಸದಸ್ಯರು ಅಮಾನತು ಆದೇಶ ಹಿಂಪಡೆಯುವಂತೆ ಮನವಿ ಮಾಡಿದ್ದರು.
ಭಾನುವಾರ ಸ್ಪೀಕರ್ ಖಾದರ್ ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕಾನೂನು ಮತ್ತು ಸಂಸದೀಯ ಸಚಿವರು ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಸಭೆ ನಡೆಸಿದರು.
ಈ ಸಭೆಯಲ್ಲಿ, ಅಮಾನತ್ತಿನ ಅವಧಿಯಲ್ಲಿ ಶಾಸಕರು ಈಗಾಗಲೇ 2 ತಿಂಗಳು ಕಳೆದಿದ್ದು, ಸದರಿ ಅವಧಿಯಲ್ಲಿ ಅಮಾನತು ಗೊಂಡಿರುವ ಸದಸ್ಯರುಗಳು ತಮ್ಮ ನಡೆಯ ಬಗ್ಗೆ ಈಗಾಗಲೇ ವಿಷಾದ ವ್ಯಕ್ತಪಡಿಸಿದ್ದು ಹಾಗೂ ಇನ್ನುಮುಂದೆ ಸಂವಿಧಾನಾತ್ಮಕವಾಗಿ ಸದನದ ಕಾರ್ಯಕಲಾಪಗಳಲ್ಲಿ ಸಂಯಮದಿಂದ ನಡೆದುಕೊಳ್ಳುವುದಾಗಿ ತಿಳಿಸಿರುವುದನ್ನು ಪರಿಗಣಿಸಿ ಆಡಳಿತ ಪಕ್ಷದ ಶಾಸಕಾಂಗ ನಾಯಕರಾದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರು, ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಒಮ್ಮತ ಸೂಚಿಸಿದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಸದಸ್ಯರುಗಳು ಸಂವಿಧಾನತ್ಮಕವಾಗಿ ಮೂಲಭೂತ ಕರ್ತವ್ಯಗಳನ್ನು ನಿರ್ವಹಿಸಲು ಅನುವು ಮಾಡಿಕೊಡುವ ಉದ್ದೇಶದಿಂದ ಅಮಾನತಾಗಿರುವ ಸದಸ್ಯರ ಅಮಾನತು ಆದೇಶವನ್ನು ಹಿಂಪಡೆಯುವುದಾಗಿ ಪ್ರಕಟಿಸಿದರು.

 

 

 

Leave a Reply

Your email address will not be published. Required fields are marked *