ಮಂಡ್ಯ: ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶ ಕಾರ್ಯಕ್ರಮ ಮುಗಿಸಿ ವಾಪಸ್ ಬೆಂಗಳೂರಿಗೆ ಬರುತ್ತಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬೆಂಗಾವಲು ವಾಹನ ಪಲ್ಟಿಯಾಗಿದೆ. ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವ್ಯಾಪ್ತಿಯ ಗೌಡಹಳ್ಳಿ ಟಿಎಂ ಹೊಸೂರು ಬಳಿಯ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಘಟನೆ ನಡೆದಿದೆ. ಬೆಂಗಾವಲು ವಾಹನ ಡಿವೈಡರ್ ಡಿಕ್ಕಿಯಾಗಿ ಪಲ್ಟಿಯಾಗಿದೆ. ಬೆಂಗಾವಲು ವಾಹನದಲ್ಲಿದ್ದ ಇಬ್ಬರನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಸ್ಕಾರ್ಟ್ ವಾಹನ ಡಿಸಿಎಂ ಡಿಕೆ ಶಿವಕುಮಾರ್ ಅವರು ಕುಳಿತಿದ್ದ ಕಾರನ್ನು ಹಿಂಬಾಲಿಸುತ್ತಿತ್ತು. ಪಲ್ಟಿಯಾದ ವಾಹನ ಹಿಂದೆಯಿದ್ದ ಕಾರಣ ಅದೃಷ್ಟವಶಾತ್ ಡಿಕೆಶಿ ಕಾರಿಗೆ ಏನು ಆಗಿಲ್ಲ. ಘಟನೆ ಬಳಿಕ ಡಿಕೆ ಶಿವಕುಮಾರ್ ಅವರು ಬೆಂಗಳೂರಿಗೆ ಪ್ರಯಾಣ ಮುಂದುವರೆಸಿದ್ದಾರೆ.