ಉಡುಪಿ: ದೇಶದೆಲ್ಲೆಡೆ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ.ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಮಾತ್ರ ಜನ್ಮಾಷ್ಟಮಿ ಆಚರಣೆ ನಡೆಯುತ್ತಿಲ್ಲ. ಅದಕ್ಕಾಗಿ ಭಕ್ತರು ಇನ್ನು ಒಂದು ತಿಂಗಳು ಕಾಯಬೇಕಾಗಿದೆ.
ನಾಡಿನಲ್ಲೆಡೆ ಚಾಂದ್ರಮಾನ ಪದ್ಧತಿಯಂತೆ ಅಷ್ಟಮಿ ಹಬ್ಬವನ್ನು ಆಚರಿಸಿದರೆ, ಉಡುಪಿಯಲ್ಲಿ ಸೌರಮಾನ ಪದ್ಧತಿಯನ್ನು ಅನುಸರಿಸಲಾಗುತ್ತದೆ. ಹುಣ್ಣಿಮೆ- ಅಮಾವಾಸ್ಯೆಯ ಗಣನೆಯಲ್ಲಿ ಇತರ ಭಾಗದಲ್ಲಿ ಆಚರಣೆ ನಡೆದರೆ, ತುಳುನಾಡ ಕರಾವಳಿಯಲ್ಲಿ ಸಂಕ್ರಮಣ ವಿಶೇಷ. ಹಾಗಾಗಿ ಈ ಬಾರಿ ಅಷ್ಟಮಿ ತಿಥಿಯ ಜೊತೆ ರೋಹಿಣಿ ನಕ್ಷತ್ರ ಸನ್ನಿಹಿತವಾಗಿರುವ, ಸೆಪ್ಟೆಂಬರ್ 14ರಂದು ಅಷ್ಟಮಿ ಆಚರಿಸಲಾಗುತ್ತಿದೆ. ಹಾಗಾಗಿ ಈ ಬಾರಿ ಉಡುಪಿಯಲ್ಲಿ ಪ್ರತ್ಯೇಕವಾಗಿ ಅಷ್ಟಮಿ ಆಚರಣೆ ನಡೆಯಲಿದೆ. ಆ ಮೂಲಕ ಇದೊಂದು ಅಪರೂಪದ ಸಂಪ್ರದಾಯವಾಗಿದೆ.
ಆದಾಗ್ಯೂ ಇಂದು ಚಂದ್ರಮಾನ ಪದ್ಧತಿಯಂತೆ ಹಬ್ಬ ಆಚರಿಸುವವರಿಗೂ ಕೃಷ್ಣ ಮಠ ಅವಕಾಶ ಕಲ್ಪಿಸಿದೆ. ಸಾಂಕೇತಿಕವಾಗಿ ಅರ್ಗ್ಯ ಪ್ರಧಾನ ಮಾಡಲು ಅವಕಾಶ ಇದೆ. ಆದರೆ ಅಷ್ಟಮಿ ವೈಭವ ಮಾತ್ರ ಇಲ್ಲ. ಮೊಸರು ಕುಡಿಕೆ ಸಂಭ್ರಮ, ಕೃಷ್ಣ ಉತ್ಸವ ಎಲ್ಲವೂ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಯುತ್ತೆ.