

ಕಾರ್ಕಳ, ಸೆ.1: ಪರಶುರಾಮನ ನಕಲಿ ಪ್ರತಿಮೆ ನಿರ್ಮಾಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ವಿಚಾರದಲ್ಲಿ ನೈತಿಕ ಹೊಣೆ ಹೊತ್ತು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರು ರಾಜೀನಾಮೆ ನೀಡಬೇಕು ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಆಗ್ರಹಿಸಿದ್ದಾರೆ.
ಕಾರ್ಕಳದ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಹಗರಣಗಳ ಆರೋಪ ಎದುರಿಸಿದ ರಾಜಕೀಯ ಮುಖಂಡರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದಾರೆ. ಸಚಿವ ನಾಗೇಂದ್ರ ಅವರು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ಆರೋಪದಲ್ಲಿ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಗೆ ಒತ್ತಾಯಿಸಿದ್ದ ಕಾರ್ಕಳ ಶಾಸಕರ ರಾಜೀನಾಮೆ ಯಾವಾಗ ಎಂದು ಕಾರ್ಕಳದ ಜನತೆಯ ಪರವಾಗಿ ಪ್ರಶ್ನಿಸುತ್ತೇವೆ ಎಂದರು.
ಕಾರ್ಕಳದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಮಾಡುವ ಉದ್ದೇಶದಿಂದ ಜನರ ತೆರಿಗೆ ಹಣ ಬಳಸಿ ಪರಶುರಾಮನ ಕಂಚಿನ ಪ್ರತಿಮೆ ಸ್ಥಾಪಿಸಲಾಗಿದೆ ಎಂದು ಹೇಳಿ, ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಪ್ರತಿಮೆಯನ್ನು ಉದ್ಘಾಟಿಸಲಾಗಿತ್ತು. ಬಳಿಕ ಪ್ರತಿಮೆ ನಕಲಿ ಎಂಬ ಆರೋಪಗಳು ವ್ಯಾಪಕವಾಗಿ ಚರ್ಚೆಗೆ ಬಂದಿವೆ. ಇಂತಹ ಪ್ರಕರಣದಲ್ಲಿ ನೈತಿಕ ಹೊಣೆ ಹೊತ್ತು ಶಾಸಕ ಸುನಿಲ್ ಕುಮಾರ್ ರಾಜೀನಾಮೆ ನೀಡಬೇಕಲ್ಲವೇ ಎಂದು ಶುಭದರಾವ್ ಪ್ರಶ್ನಿಸಿದರು.
ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ವಂಚನೆ, ನಂಬಿಕೆ ದ್ರೋಹ, ಸಾಕ್ಷ್ಯನಾಶ ಹಾಗೂ ಒಳಸಂಚು ಆರೋಪಗಳನ್ನು ಒಳಗೊಂಡ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.ಪ್ರತಿಮೆ ನಿರ್ಮಿಸಿದ ಶಿಲ್ಪಿ ಹಾಗೂ ಇಂಜಿನಿಯರ್ ವಿರುದ್ಧ ಗಂಭೀರ ಆರೋಪಗಳು ದಾಖಲಾಗಿದ್ದು, ಶಿಲ್ಪಿಯ ಬಂಧನವೂ ಆಗಿದೆ. ಯೋಜನೆಯ ರೂವಾರಿಯಾಗಿದ್ದ ಶಾಸಕ ಸುನಿಲ್ ಕುಮಾರ್ ಕೂಡ ನೈತಿಕ ಹೊಣೆಗಾರಿಕೆಯಿಂದ ಮುಕ್ತರಾಗಲು ಸಾಧ್ಯವೇ ಎಂದು ಅವರು ಪ್ರಶ್ನಿಸಿದರು.
ಪರಶುರಾಮ ಪ್ರತಿಮೆಯ ಕೆಲವು ಭಾಗ ಬೆಟ್ಟದ ಮೇಲಿದ್ದರೆ, ಉಳಿದ ದೇಹದ ಭಾಗ ಕಾರ್ಕಳ ಪೊಲೀಸ್ ಠಾಣೆಯಲ್ಲಿರುವುದು ಪ್ರಕರಣದಲ್ಲಿ ನಡೆದಿರುವ ಅಕ್ರಮಕ್ಕೆ ಸಾಕ್ಷಿಯಾಗಿದೆ ಎಂದು ಶುಭದರಾವ್ ಆರೋಪಿಸಿದರು. ಬಿಜೆಪಿಯ ಡೋಂಗಿ ಹಿಂದುತ್ವದ ವಿರುದ್ಧ ಹಾಗೂ ಹಿಂದೂ ಸಂಘಟನೆಗಳು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದರು.ಪರಶುರಾಮನಿಗೆ ಆಗುತ್ತಿರುವ ಅವಮಾನಕ್ಕೆ ಬಿಜೆಪಿಯೇ ಕಾರಣವಾಗುತ್ತಿದೆ ಎಂದು ಆರೋಪಿಸಿದರು.
ಸುನಿಲ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಮನೆಮನೆಗೆ ಪೋಸ್ಟರ್ ಅಭಿಯಾನ ನಡೆಯಲಿದ್ದು,ಪ್ರಥಮವಾಗಿ ಸುನಿಲ್ ಕುಮಾರ್ ಮನೆಯಿಂದಲೇ ಈ ಅಭಿಯಾನ ಆರಂಭಿಸಲಾಗುವುದೆಂದ ಅವರು ಮುಂದಿನ ದಿನಗಳಲ್ಲಿ ಹಳ್ಳಿ ಹಳ್ಳಿಗಳಲ್ಲಿ ಬೃಹತ್ ಹೋರಾಟ ನಡೆಸುವುದಾಗಿ ಹೇಳಿದರು.
ಪರಶುರಾಮ ಥೀಮ್ ಪಾರ್ಕ್ ಪ್ರಕರಣದಲ್ಲಿ ಶಾಸಕ ಸುನಿಲ್ ಕುಮಾರ್ ಅವರು ಆರೋಪಿಯಲ್ಲ,ಅಲ್ಲದೇ ಈಗಾಗಲೇ ಸಿಓಡಿ ತನಿಖೆಗೆ ನೀಡಿದ್ದರೂ ತನಿಖೆ ಯಾಕೆ ಮಾಡಿಲ್ಲ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಅವರ ವಿರುದ್ಧದ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯದ ಅನುಮತಿ ಬೇಕಿದೆ, ಹಾಗೂ ಈ ಪ್ರಕರಣ ನ್ಯಾಯಾಲಯದ ವಿಚಾರಣೆಯಲ್ಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ, ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಅನಿಲ್ ಪೂಜಾರಿ ಮಾಳ, ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜೇಂದ್ರ ದೇವಾಡಿಗ ಹಾಗೂ ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ಉಪಸ್ಥಿತರಿದ್ದರು.





.
.
.
.
.
.
.
.
.
.
.
.
.
.
.
.
.
.
.
.
