

ಕಾರ್ಕಳ,ಸೆ.12: ಜನ ಸಾಮಾನ್ಯರು ತಮ್ಮ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಪದೇಪದೇ ಅಲೆಯುವುದನ್ನು ತಪ್ಪಿಸಿ, ಸರ್ಕಾರದ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಇಂತಹ ಪ್ರಜಾಸೇವೆ ಆಂದೋಲನ ಸಭೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಶಾಸಕ ವಿ. ಸುನಿಲ್ ಕುಮಾರ್ ಹೇಳಿದರು.
ಅವರು ಸೆ.12 ರಂದು ಶನಿವಾರ ಅಜೆಕಾರು ಜ್ಯೋತಿ ಪ್ರೌಢಶಾಲೆಯಲ್ಲಿ ಕಾರ್ಕಳ ತಾಲೂಕು ಆಡಳಿತದ ವತಿಯಿಂದ ಆಯೋಜಿಸಲಾದ ಹೊಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜನರು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಯಾವುದೇ ಪ್ರಭಾವಿ ವ್ಯಕ್ತಿಗಳ ಒತ್ತಡಕ್ಕೆ ಮಣಿಯದೆ, ನಿಯಮಾನುಸಾರ ನೇರವಾಗಿ ಕೆಲಸ ಮಾಡಬೇಕು. ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುವಾಗ ಸಾಧಕ-ಬಾಧಕಗಳನ್ನು ಗಮನದಲ್ಲಿಟ್ಟುಕೊಂಡು ಪರಿಹಾರ ಕಂಡುಕೊಳ್ಳಬೇಕು. ಆದರೆ ಕೆಲವು ಸಂದರ್ಭಗಳಲ್ಲಿ ಸರ್ಕಾರದ ಸುತ್ತೋಲೆಗಳೇ ಜನರು ಸರ್ಕಾರಿ ಸೇವೆಯಿಂದ ವಂಚಿತರಾಗುತ್ತಿದ್ದಾರೆ ಆದ್ದರಿಂದ ಸರ್ಕಾರಿ ಸುತ್ತೋಲೆಗಳನ್ನು ಸರಳೀಕರಿಸುವ ಅಗತ್ಯವಿದೆ ಎಂದರು.
ಅಕ್ರಮ-ಸಕ್ರಮ ಅರ್ಜಿಗಳನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆನ್’ಲೈನ್ ಮೂಲಕ ವಿಲೇವಾರಿ ಮಾಡಲಾಗುತ್ತಿದೆ. ಇದರ ಪರಿಣಾಮವಾಗಿ ಕಾರ್ಕಳ ತಾಲೂಕಿನಲ್ಲಿ ಕೃಷಿ ಮಾಡಿಕೊಂಡಿರುವ ಸುಮಾರು 7,773 ಕೃಷಿಕರ ಅರ್ಜಿಗಳು ರದ್ದಾಗಿವೆ. ಅಧಿಕಾರಿಗಳು ಶಾಸಕರ ಗಮನಕ್ಕೆ ತಾರದೇ ಅರ್ಹರ ಅರ್ಜಿಗಳನ್ನು ತಿರಸ್ಕರಿಸಬಾರದು. ಆದ್ದರಿಂದ ಸುತ್ತೋಲೆಗಳಲ್ಲಿ ಬದಲಾವಣೆ ತರಬೇಕಿದೆ ಎಂದರು. ಇದಲ್ಲದೇ ಸರ್ಕಾರದ ಹೊಸ ಸುತ್ತೋಲೆಯಿಂದ ತಾಲೂಕಿನಲ್ಲಿ 8554 ಫಲಾನುಭವಿಗಳ ವೃದ್ಧಾಪ್ಯ ವೇತನ ಹಾಗೂ ಇತರ ಪಿಂಚಣಿಗಳ ಯೋಜನೆಗಳು ವಿವಿಧ ಕಾರಣಕ್ಕಾಗಿ ರದ್ದಾಗುತ್ತಿದ್ದು ಪಿಂಚಣಿ ಕಳೆದುಕೊಳ್ಳುವ ಭೀತಿ ಎದುರಾಗಿದೆ.
ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿ ಕುಳಿತವರಿಗೆ ತೆರಿಗೆ ಕಟ್ಟುವಂತಿಲ್ಲ ಎನ್ನುವ ಸರ್ಕಾರದ ಹೊಸ ಸುತ್ತೋಲೆಯಿಂದ ಜನರು ಬ್ಯಾಂಕ್ ಸಾಲ, ಆಧಾರ್ ಕಾಡ,ರೇಷನ್ ಕಾರ್ಡ್ ಪಡೆಯಲು ತೊಂದರೆಯಾಗುತ್ತದೆ ಆದ್ದರಿಂದ ಸರ್ಕಾರ ಸುತ್ತೋಲೆಗಳನ್ನು ಸರಳೀಕರಣಗೊಳಿಸಬೆಕು ಹಾಗೂ ಪ್ರಮುಖವಾಗಿ 9/11 ಹಾಗೂ ಪ್ರಾಧಿಕಾರಕ್ಕೆ ಸಂಬAಧಿಸಿದ ಸಮಸ್ಯೆಗಳಿಗೂ ಶಾಶ್ವತ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದು ಸುನಿಲ್ ಕುಮಾರ್ ಹೇಳಿದರು.
ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮಾತನಾಡಿ, ಅಧಿಕಾರಿಗಳು ಹಾಗೂ ಸಾರ್ವಜನಿಕರು ಒಟ್ಟಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ತೆರಿಗೆ ಪಾವತಿಸುವ ಸಾಮಾನ್ಯ ಜನರೇ ಸರ್ಕಾರದ ನಿಜವಾದ ಪ್ರಭುಗಳು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ತಲುಪಬೇಕು. ಕಸ್ತೂರಿ ರಂಗನ್, 9/11 ಹಾಗೂ ಸರ್ವರ್ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಅಧಿಕಾರಿಗಳು ಸ್ಪಂದನಶೀಲರಾಗಬೇಕು. ಬಡವರು, ಶ್ರೀಮಂತರು ಎನ್ನದೆ ಎಲ್ಲರಿಗೂ ಸಮಾನವಾಗಿ ಸೇವೆ ದೊರೆಯಬೇಕು. ಅಭಿವೃದ್ಧಿಯಲ್ಲಿ ಯಾವುದೇ ರಾಜಕೀಯ ಮಾಡಬಾರದು ಎಂದರು.
ಈ ಸಂದರ್ಭದಲ್ಲಿ ಎಎಸ್ಪಿ ಕು.ಇಷಿತಾ ಗುಪ್ತಾ,ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಸಾಂತ್ ಪಿ. ರಾವ್, ಕಾರ್ಕಳ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮುಂತಾದವರು ಉಪಸ್ಥಿತರಿದ್ದರು.
ಕುಂದಾಪುರ ಸಹಾಯಕ ಆಯುಕ್ತೆ ರಶ್ಮಿ ಆರ್. ಪ್ರಸ್ತಾವಿಕವಾಗಿ ಮಾತನಾಡಿ, ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ, ಸ್ಥಳೀಯ ಮಟ್ಟದಲ್ಲೇ ಪರಿಹರಿಸುವ ಪ್ರಯತ್ನವೇ ಪ್ರಜಾಸೇವೆ ಆಂದೋಲನದ ಉದ್ದೇಶವಾಗಿದೆ. ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶನಿವಾರ ಆಂದೋಲನ ನಡೆಯಲಿದ್ದು, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹರಿಸಲಾಗುವುದು. ಸರ್ಕಾರದ ಸೇವೆಗಳನ್ನು ಪಡೆಯುವುದು ಪ್ರತಿಯೊಬ್ಬ ನಾಗರಿಕನ ಹಕ್ಕಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಕಾರ್ಕಳ ತಹಶೀಲ್ದಾರ್ ಪ್ರದೀಪ್ ಆರ್. ಸ್ವಾಗತಿಸಿದರು.





.
.
.
.
.
.
.
.
.
.
.
.
.
.
.
.
.
.
.
.
