ಬೆಂಗಳೂರು: ಯಾದಗಿರಿ ಪಿಎಸ್ಐ ಪರಶುರಾಮ ಸಾವು ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೋರ್ವ ಪೊಲೀಸ್ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿ ಬಳಿ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಿಮ್ಮೇಗೌಡ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,ಇವರು ಬೆಂಗಳೂರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.
1998ರ ರೂರಲ್ ಬ್ಯಾಚ್ ಇನ್ಸ್ಪೆಕ್ಟರ್ ತಿಮ್ಮೇಗೌಡ ಅವರು ಚನ್ನಪಟ್ಟಣದ ಹಳ್ಳಿಯೊಂದರ ನಿವಾಸಿ. ಗ್ರಾಮೀಣ ಕೃಪಾಂಕದಲ್ಲಿ ಆಯ್ಕೆಯಾಗಿದ್ದ ತಿಮ್ಮೇಗೌಡ ವಿಧಾನಸಭೆ ಚುನಾವಣೆ ವೇಳೆಗೆ ಬಿಡದಿಯಿಂದ ಅತ್ತಿಬೆಲೆಗೆ ವರ್ಗಾವಣೆಯಾಗಿದ್ದರು. 2023ರ ಸೆಪ್ಟೆಂಬರ್ನಲ್ಲಿ ಅತ್ತಿಬೆಲೆಯಲ್ಲಿ ಪಟಾಕಿ ದುರಂತ ನಡೆದ ಬಳಿಕ ಆ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದರು. ನಂತರ ಕುಂಬಳಗೋಡು ಠಾಣೆಗೆ ವರ್ಗಾವಣೆಯಾಗಿದ್ದು, ಇತ್ತೀಚೆಗೆ ಸಿಸಿಬಿಗೆ ವರ್ಗಾವಣೆಯಾಗಿತ್ತು. ತಿಮ್ಮೇಗೌಡ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬಿಡದಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
`