ಬೆಂಗಳೂರು: ಗಾಲಿ ಜನಾರ್ದನ ರೆಡ್ಡಿ ಅವರು ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಅವರ ಶಾಸಕತ್ವವನ್ನು ಅನರ್ಹಗೊಳಿಸಿ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ವಿಧಾನಸಭಾ ಸಚಿವಾಲಯ ವಾಪಸ್ ಪಡೆದಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ಕೋರ್ಟ್ನಿಂದ ಜೈಲು ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ತೆಲಂಗಾಣ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. 7 ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತು ಮಾಡಿದ್ದಲ್ಲದೇ, ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಅವರು ಜೈಲಿಗೆ ಹೋದ ಸಂದರ್ಭದಲ್ಲಿ ಅವರ ಶಾಸಕತ್ವವನ್ನು ಅನರ್ಹಗೊಳಿಸಿ ಕರ್ನಾಟಕ ವಿಧಾನಸಭಾ ಸಚಿವಾಲಯ ಆದೇಶ ಹೊರಡಿಸಿತ್ತು. ಆದರೆ ಇದೀಗ ಅವರು ಬಿಡುಗಡೆಯಾಗುತ್ತಿದ್ದಂತೆ ಶಾಸಕತ್ವವನ್ನು ಅನರ್ಹಗೊಳಿಸಿ ಹೊರಡಿಸಿದ ಆದೇಶವನ್ನು ವಾಪಸ್ ಪಡೆಯಲಾಗಿದೆ.
ಹೈದ್ರಾಬಾದ್ ಸಿಬಿಐ ಕೋರ್ಟ್ ಗಾಲಿ ಜನಾರ್ದನ ರೆಡ್ಡಿ ಅವರ ವಿರುದ್ಧ ನೀಡಿದ್ದ ತೀರ್ಪಿಗೆ ತೆಲಂಗಾಣ ಹೈಕೋರ್ಟ್ ಜೂ.11 ರಂದು ತಾತ್ಕಾಲಿಕ ತಡೆ ನೀಡಿ ಜಾಮೀನು ನೀಡಿದ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನಸಭಾ ಸಚಿವಾಲಯದ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಮೇ.06 ರಂದು ತಾವು ಹೊರಡಿಸಿದ್ದ ಅನರ್ಹ ಆದೇಶ ನ್ಯಾಯಾಲಯದ ಮುಂದಿನ ಆದೇಶದ ವರೆಗೆ ವಾಪಸ್ ಪಡೆದು ಸುತ್ತೋಲೆ ಹೊರಡಿಸಿದ್ದಾರೆ.