ಬೆಂಗಳೂರು: ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಅವರನ್ನು ಪಟ್ಟಿಯಿಂದ ಹಂತ ಹಂತವಾಗಿ ತೆಗೆದುಹಾಕಬೇಕು. ಆದರೆ, ಒಬ್ಬನೇ ಒಬ್ಬ ಅರ್ಹನ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ಗುರುವಾರ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿದ ಅವರು ಅಧಿಕಾರಿಗಳಿಗೆ ಹಲವು ಆದೇಶಗಳನ್ನು ನೀಡಿದ್ದಾರೆ.
ಅನರ್ಹ ಬಿಪಿಎಲ್ ಕಾರ್ಡುದಾರರು ಸ್ವಯಂ ಪ್ರೇರಿತವಾಗಿ ತಮ್ಮ ಕಾರ್ಡ್ಗಳನ್ನು ಹಿಂತಿರುಗಿಸಲು ಕಾಲಾವಕಾಶ ನೀಡಬೇಕು. ಅದಾದ ನಂತರ ಅಂಥವರಿಗೆ ನೊಟೀಸ್ ನೀಡಿ ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಈಗಾಗಲೇ 4 ಸಾವಿರ ಸರಕಾರಿ ನೌಕರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಯಡಿ 4692 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಅಕ್ಟೋಬರ್ ಅಂತ್ಯದವರೆಗೆ 3253 ಕೋಟಿ ರೂ. ವೆಚ್ಚ ಮಾಡಲಾಗಿದೆ. 4,44,48,294 ಫಲಾನುಭವಿಗಳು ಇದರ ಲಾಭ ಪಡೆಯುತ್ತಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಸಭೆಯಲ್ಲಿ ಮಾಹಿತಿ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಪಡಿತರ ಹಾಗೂ ಆಹಾರ ಧಾನ್ಯ ವಿತರಣಾ ವ್ಯವಸ್ಥೆಯನ್ನು ತಳಹಂತದಲ್ಲಿ ಬಲಪಡಿಸುವ ಮೂಲಕ ಜಾಗೃತಿ ಸಮಿತಿಗಳಲ್ಲಿ ಜನರ ಸಹಭಾಗಿತ್ವವನ್ನು ಹೆಚ್ಚಿಸಬೇಕು.
ಕನಿಷ್ಠ ಬೆಂಬಲ ಬೆಲೆ ಅಡಿ ಆಹಾರ ಧಾನ್ಯ ಸಂಗ್ರಹಿಸಲು ಎಲ್ಲ ವ್ಯವಸ್ಥೆ ಮಾಡಬೇಕು. ರೈತರಿಗೆ ಸಮಸ್ಯೆಯಾಗದಂತೆ ತ್ವರಿತವಾಗಿ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದರು.
ಕರ್ನಾಟಕದಲ್ಲಿ 1,53,69,945 ಪಡಿತರ ಚೀಟಿಗಳಿದ್ದು, 5,30,88,636 ಸದಸ್ಯರು ಫಲಾನುಭವಿಗಳಾಗಿದ್ದಾರೆ. ಇಲಾಖೆಯಲ್ಲಿ ಒಟ್ಟು 709 ಹುದ್ದೆಗಳು ಖಾಲಿಯಿವೆ. ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆಯಡಿ ಕರ್ನಾಟಕದಲ್ಲಿ ಬೇರೆ ರಾಜ್ಯಗಳ 13,383 ಫಲಾನುಭವಿಗಳು ಪಡಿತರ ಸೌಲಭ್ಯ ಪಡೆಯುತ್ತಿದ್ದಾರೆ. ಕುಟುಂಬದಲ್ಲಿ ಒಬ್ಬರೇ ಇರುವ, 80 ವರ್ಷ ದಾಟಿದವರಿಗೆ ಮನೆ ಬಾಗಿಲಿಗೆ ಆಹಾರ ಧಾನ್ಯ ಒದಗಿಸುವ ಅನ್ನ-ಸುವಿಧಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. 8,500 ಪಡಿತರ ಚೀಟಿದಾರರು ಯೋಜನೆಯಡಿ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಮುನಿಯಪ್ಪ ಹೇಳಿದರು.