ಕಾರ್ಕಳ: ವೈದ್ಯಕೀಯ ಕ್ಷೇತ್ರದಲ್ಲಿ ಜಗದ್ವಿಖ್ಯಾತವಾಗಿರುವ ಮಣಿಪಾಲದಲ್ಲಿ ರಾಜಾರೋಷವಾಗಿ ನಡುಬೀದಿಯಲ್ಲೇ ರೌಡಿಗಳು ಗ್ಯಾಂಗ್ ವಾರ್ ನಡೆಸಿದ್ದಾರೆ. ಸಿನಿಮೀಯ ರೀತಿಯಲ್ಲಿ ಪರಸ್ಪರ ಕಾರುಗಳನ್ನು ಡಿಕ್ಕಿ ಹೊಡೆಸಿ ಕಾದಾಡಿದ್ದಾರೆ. ಕ್ರಿಮಿನಲ್ ಗಳಿಗೆ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಕಾನೂನಿನ ಭಯ ಇಲ್ಲದಂತಾಗಿದೆ ಎನ್ನುವುದಕ್ಕೆ ಉಡುಪಿಯ ಈ ಘಟನೆ ಉತ್ತಮ ಉದಾಹರಣೆಯಾಗಿದೆ.
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲದೇ ಇಡಿ ರಾಜ್ಯದಲ್ಲಿ ಈಗ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಪೊಲೀಸ್ ಠಾಣೆಗಳನ್ನು ರಾಜಕೀಯ ದ್ವೇಷ ತೀರಿಸಿಕೊಳ್ಳುವ ಅಸ್ತ್ರವಾಗಿ ಬಳಸಿಕೊಳ್ಳುವುದಕ್ಕೆ ಕಾಂಗ್ರೆಸ್ ಸರ್ಕಾರ ಅವಕಾಶ ಮಾಡಿಕೊಟ್ಟ ಪರಿಣಾಮವಾಗಿ ಇಂದು ಕ್ರಿಮಿನಲ್ ಗಳು ವಿಜೃಂಭಿಸುವಂತಾಗಿದೆ.ಇಂತಹ ಪ್ರಕರಣಗಳು ಗೃಹ ಇಲಾಖೆ ಹಾಗೂ ಗೃಹ ಸಚಿವರ ವೈಫಲ್ಯಕ್ಕೆ ಸಾಕ್ಷಿಯಾಗಿವೆ.
ಸಿದ್ದರಾಮಯ್ಯನವರೇ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿರುವ ನಿಮಗೆ ಸ್ವಾಗತ. ಆದರೆ ಇಲ್ಲಿಂದ ಹೊರಡುವುದಕ್ಕೆ ಮೊದಲು ಕೆಲವು ಪ್ರಶ್ನೆಗಳಿಗೆ ಉತ್ತರಿಸಿ ಹೋಗಿ ಎಂದು ಸುನಿಲ್ ಕುಮಾರ್ ಸವಾಲು ಹಾಕಿದ್ದಾರೆ
ಕಾನೂನು-ಸುವ್ಯವಸ್ಥೆ ಕಾಪಾಡಲಾರದ ಗೃಹ ಸಚಿವರಿಂದ ಯಾವಾಗ ರಾಜೀನಾಮೆ ಪಡೆಯುತ್ತೀರಿ ?.
ಪೊಲೀಸ್ ಠಾಣೆಯನ್ನು ಆಳುವ ಸರ್ಕಾರದ ಆಳಾಗಿಸಿಕೊಂಡಿರುವುದಕ್ಕೆ ಎಂದು ಮುಕ್ತಾಯ ಹಾಡುತ್ತೀರಿ?.
ಕ್ರಿಮಿನಲ್ ಗಳಿಗೂ ನಿಮ್ಮ ಸರ್ಕಾರಕ್ಕೂ ಒಳ ಒಪ್ಪಂದ ಏರ್ಪಟ್ಟಿದ್ದರೆ ಮಾಸಿಕ ಹಫ್ತಾ ಎಷ್ಟು ನಿಗದಿ ಮಾಡಿದ್ದೀರಿ ?-
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಪೊಲೀಸರ ಕೈ ಕಟ್ಟಿ ಹಾಕಿದ್ದೀರಾ?.ಜನರ ಶಾಂತಿ ನೆಮ್ಮದಿ ಕಾಪಾಡಲಾರದ ಸರ್ಕಾರ ಅಧಿಕಾರದಲ್ಲಿದ್ದು ಪ್ರಯೋಜನವುಂಟೇ ?
ಕ್ರಿಮಿನಲ್ ಗಳ ಅಟ್ಟಹಾಸ ನಿಲ್ಲಿಸದ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಭಯವೇಕೆ ?
ಸಿದ್ದರಾಮಯ್ಯನವರೇ ನಿಮಗೊಂದು ನೇರ ಸವಾಲು ಈ ಘಟನೆಗೆ ಕಾರಣವಾದ ಗ್ಯಾಂಗ್ ಸ್ಟಾರ್ ಗಳನ್ನು ಎಷ್ಟು ಗಂಟೆಯೊಳಗೆ ಬಲಿ ಹಾಕುತ್ತೀರಿ ?
ಸಣ್ಣ ಕಾರಣಕ್ಕೆ ಶಾಸಕರನ್ನು ಬಂಧಿಸಲು ದಂಡು ಕಳುಹಿಸುವ ನಿಮ್ಮ ಸರ್ಕಾರಕ್ಕೆ ಪುಂಡರನ್ನು ಬಂದಿಸುವ ಗಂಡೆದೆ ಇಲ್ಲವೇ? ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ