ಬೆಂಗಳೂರು: ಡಿಸೆಂಬರ್ 31 ರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಶಕ್ತಿ ಯೋಜನೆಯ ಬಾಕಿ ಹಣ ಬಿಡುಗಡೆ ಮತ್ತು ಇತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ಬಸ್ ಸಂಚಾರ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ. ಈ ಬಗ್ಗೆ ಸಾರಿಗೆ ಸಂಘಟನೆಗಳ ಮುಖಂಡರು, ಪ್ರಯಾಣಿಕರು ಮತ್ತು ನೌಕರರಿಗೆ ಕರಪತ್ರ ವಿತರಿಸಿದ್ದಾರೆ. ಈ ಹಿನ್ನಲೆಯಲ್ಲಿ ಡಿಸೆಂಬರ್ 31 ರಿಂದ ರಾಜ್ಯದಲ್ಲಿ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.
“ಜನವರಿ ಒಂದರಿAದ ಬಸ್ ಸಂಚಾರ ಇರುವುದಿಲ್ಲ, ಸಹಕರಿಸಿ” ಎಂದು ಪ್ರಯಾಣಿಕರಿಗೆ ಮತ್ತು ಸಾರಿಗೆ ನೌಕರರಿಗೆ ಬುಧವಾರ ಕರಪತ್ರ ಹಂಚಿಕೆ ಮಾಡಲಾಗಿದ್ದು, ಶಕ್ತಿ ಯೋಜನೆಯ ಬಾಕಿ ಹಣವೇ ಎರಡು ಸಾವಿರ ಕೋಟಿ ರೂಪಾಯಿಯಷ್ಟು ಇದೆ ಅದನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಶಕ್ತಿ ಯೋಜನೆಯಡಿ ಕೆಎಸ್ಆರ್ಟಿಸಿ ಗೆ 714.39 ಕೋಟಿ ರೂ., ಬಿಎಂಟಿಸಿ ಗೆ290.97 ಕೋಟಿ ರೂ., ಎನ್ಡಬ್ಲ್ಯುಕೆಆರ್ಟಿಸಿ ಗೆ 408.42 ಕೋಟಿ ರೂ., ಕೆಕೆಆರ್ಟಿಸಿ ಗೆ 347.86 ಕೋಟಿ ರೂ. ಒಟ್ಟು 1761.64 ಕೋಟಿ ರೂ. ಬಿಡುಗಡೆಯಾಗಬೇಕಿದೆ. ಮುಷ್ಕರ ನಡೆಸುವ ಬಗ್ಗೆ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಡಿಸೆಂಬರ್ 9 ರಂದು ಬೆಳಗಾವಿ ಅಧಿವೇಶನದಲ್ಲಿ ಸರ್ಕಾರಕ್ಕೆ ನೋಟಿಸ್ ನೀಡಿದೆ. ಕಾರ್ಮಿಕ ಇಲಾಖೆಯ ನಿಯಮಗಳ ಪ್ರಕಾರ, ಮುಷ್ಕರ ಮಾಡುವ ಮನ್ನ 21 ದಿನಗಳ ಕಾಲ ಮುಂಚಿತವಾಗಿ ನೋಟಿಸ್ ನೀಡಬೇಕು. ಆ ಹಿನ್ನೆಲೆಯಲ್ಲಿ ಈಗಾಗಲೇ ಸರ್ಕಾರಕ್ಕೆ ನೋಟಿಸ್ ನೀಡಿದೆ .ಆರು ಸಾರಿಗೆ ನೌಕರರ ಸಂಘಟನೆಗಳು ಸೇರಿ ಮುಷ್ಕರಕ್ಕೆ ಕರೆ ನೀಡಿದೆ.
ಒಟ್ಟಿನಲ್ಲಿ, ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ಸಾರಿಗೆ ನೌಕರರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸಾರಿಗೆ ಮುಷ್ಕರ ಘೋಷಣೆ ಮಾಡಿದೆ. ಆದರೆ ಇಲ್ಲಿಯವರೆಗೆ ಸಿಎಂ ಸಿದ್ದರಾಮಯ್ಯ ಜಂಟಿ ಕ್ರಿಯಾ ಸಮಿತಿ ಜೊತೆಗೆ ಮಾತುಕತೆಗೆ ಮುಂದಾಗಿಲ್ಲ.
