ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ (ಕೆಪಿಸಿಸಿ) ಹೊಸ ಅಧ್ಯಕ್ಷರ ನೇಮಕವಾಗಬೇಕು ಎಂದು ಬುಧವಾರ ಬೆಳಗ್ಗೆ ಆಗ್ರಹಿಸಿದ್ದ ಸಚಿವ ಸತೀಶ್ ಜಾರಕಿಹೊಳಿ, ಹೈಕಮಾಂಡ್ ನಿಂದ ಖಡಕ್ ಸಂದೇಶ ಬರುತ್ತಿದ್ದಂತೆಯೇ ಯೂಟರ್ನ್ ತೆಗೆದುಕೊಂಡಿದ್ದಾರೆ. ಬುಧವಾರ ರಾತ್ರಿ ಸಾಮಾಜಿಕ ಮಾಧ್ಯಮ ಫೇಸ್ಬುಕ್ ಮೂಲಕ ಸ್ಪಷ್ಟೀಕರಣ ನೀಡಿದ ಅವರು, ತಮ್ಮ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ. ಡಿಕೆ ಶಿವಕುಮಾರ್ ಬದಲಾವಣೆಗೆ ಆಗ್ರಹಿಸಿಲ್ಲ ಎಂದು ಹೇಳಿದ್ದಾರೆ.
ನಾನು ಹೇಳಿದ್ದರಲ್ಲಿ ಕೆಲವು ಸತ್ಯಾಂಶಗಳಿವೆ. ಕೆಲವು ಇಲ್ಲದ ವಿಚಾರಗಳನ್ನು ವೈಭವೀಕರಿಸಲಾಗಿದೆ. ಡಿಕೆ ಶಿವಕುಮಾರ್ ಬದಲಾವಣೆ ಮಾಡಿ ಎಂದು ನಾನು ಹೇಳಿಲ್ಲ. ಪಕ್ಷದಲ್ಲಿ ಮುಂದಿನ ಸಂಘಟನೆಯ ದೃಷ್ಟಿಯಿಂದ ಕೆಲವೊಂದು ಬದಲಾವಣೆಗಳನ್ನು ಮಾಡಬೇಕೆಂದು ಸಲಹೆ ನೀಡಿದ್ದೇನಷ್ಟೆ. ಹಾಗೆಂದು ಡಿಕೆ ಶಿವಕುಮಾರ್ ಅವರನ್ನು ಬದಲಾವಣೆ ಮಾಡಿ ಎಂದು ಹೇಳಿಲ್ಲ, ಇಂದೂ ಹೇಳುತ್ತಿಲ್ಲ, ಮುಂದೆಯೂ ಹೇಳುವುದಿಲ್ಲ. ಆದರೆ, ಇವತ್ತಿನ ವೇಗದ ಸ್ಥಿತಿಯಲ್ಲಿ ನಾ ಹೇಳಿರುವುದನ್ನು ಜನ ತಪ್ಪಾಗಿ ಅರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಹೈಕಮಾಂಡ್ ಮನೊವೊಲಿಸಲು ನಾನು ಮುಂದಿನ ವಾರ ದೆಹಲಿಗೆ ಹೋಗುತ್ತೇನೆ ಎಂದಿರುವುದಾಗಿ ವರದಿಯಾಗಿದೆ. ಆದರೆ ನಾನು ಹೇಳಿದ್ದು ಹಾಗಲ್ಲ. ಕರ್ನಾಟಕ ಭವನದ ಹೊಸ ಕಟ್ಟಡ ಉದ್ಘಾಟನೆ ಕಾರ್ಯಕ್ರಮಕ್ಕೆ, ವೀಕ್ಷಣೆಗೆ ಹೋಗುತ್ತೇನೆ ಎಂದಿದ್ದೆ. ಅದು ತಪ್ಪಾಗಿ ವರದಿಯಾಗಿದೆ. ಇದು ಜನರಲ್ಲಿ ಗೊಂದಲಕ್ಕೆ ಕಾರಣವಾಗಿದೆ. ಪಕ್ಷದಲ್ಲಿಯೂ ಸಹಜವಾಗಿಯೇ ಕೆಲವು ಗೊಂದಲಗಳಿಗೆ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ.
ಬುಧವಾರ ಬೆಳಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ್ದ ಸತೀಶ್ ಜಾರಕಿಹೊಳಿ ಆದಷ್ಟು ಬೇಗ ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕ ಆಗಬೇಕು. ನಮಗೆ ಪೂರ್ಣಪ್ರಮಾಣದ ಅಧ್ಯಕ್ಷರು ಬೇಕು. ವೋಟು ತರುವವರನ್ನು ಅಧ್ಯಕ್ಷ ಮಾಡಿ ಎಂದು ಹೇಳಿದ್ದೇನೆ. ಪಾಪ್ಯುಲರ್ ಇರುವವರನ್ನು ಅಧ್ಯಕ್ಷ ಮಾಡಿ ಎಂದು ಹೇಳಿದ್ದೇನೆ ಎಂದು ತಿಳಿಸಿದ್ದರು. ಈ ವಿಚಾರ ಕಾಂಗ್ರೆಸ್ ಆಂತರಿಕ ಬೇಗುದಿಯ ಬೆಂಕಿಗೆ ತುಪ್ಪ ಸುರಿದಿತ್ತು. ಇದರ ಬೆನ್ನಲ್ಲೇ ಅವರು ಸ್ಪಷ್ಟನೆ ನೀಡಿದ್ದಾರೆ.