ಬೆಂಗಳೂರು: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸಲು ಇಂದು (ಅಕ್ಟೋಬರ್ 28) ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದ್ದು, ನಿವೃತ್ತ ಹೈ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ದತ್ತಾಂಶ ಸ್ವೀಕರಿಸಿ ಮುಂದಿನ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದೆ. ಅಲ್ಲದೇ ಮೂರು ತಿಂಗಳಲ್ಲಿ ವರದಿ ಸಲ್ಲಿಕೆ ಮಾಡಲು ಆಯೋಗಕ್ಕೆ ಸೂಚನೆ ನೀಡಲಾಗಿದೆ.
ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ನೀಡಲು ಸುಪ್ರಿಂಕೋರ್ಟ್ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಸಂಪುಟದಲ್ಲಿ ಚರ್ಚೆ ನಡೆದಿದ್ದು, ಒಳ ಮೀಸಲಾತಿ ಕಲ್ಪಿಸಲು ಕ್ಯಾಬಿನೆಟ್ ನಿರ್ಣಯ ಮಾಡಿದೆ. ನಿವೃತ್ತ ಹೈಕೋರ್ಟ್, ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ದತ್ತಾಂಶ ಸ್ವೀಕರಿಸಿ ಮುಂದಿನ ನಿರ್ಣಯ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ನೀಡಲಾಗಿರುವ ಮೀಸಲಾತಿ ಒಳಗಡೆಯೇ ಮೀಸಲಾತಿ ನೀಡಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿತ್ತು. ಒಳ ಮೀಸಲಾತಿ ಕಾನೂನು ಬದ್ಧ ಎಂದು ಮುಖ್ಯ ನ್ಯಾಯಮೂತ್ರಿ ಚಂದ್ರಚೂಡ್ ನೇತೃತ್ವದ ನ್ಯಾ. ಬಿಆರ್ ಗವಾಯಿ, ವಿಕ್ರಮ್ ನಾಥ್, ಬೇಲಾ ಎಂ ತ್ರಿವೇದಿ, ಪಂಕಜ್ ಮಿಥಾಲ್, ಮನೋಜ್ ಮಿಶ್ರಾ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಸಂವಿಧಾನ ಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿತ್ತು. ಆದರೆ ಸರ್ಕಾರಿ ಉದ್ಯೋಗಗಳಲ್ಲಿ ಯಾವ ಜಾತಿ, ಪಂಗಡಗಳಿಗೆ ಒಳ ಮೀಸಲಾತಿ ನೀಡಬೇಕೆಂಬ ಅಧಿಕಾರವನ್ನು ಕೋರ್ಟ್ ರಾಜ್ಯಗಳ ವಿವೇಚನೆಗೆ ನೀಡಿದೆ.
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ನೀಡುವ ಮೂಲಕ ಅಸ್ಪೃಶ್ಯ ಜಾತಿಗಳಿಗೆ ಸೇರಿದವರಿಗೆ ನ್ಯಾಯ ಒದಗಿಸಬೇಕೆಂದು ಮೂರು ದಶಕಗಳಿಂದ ಹೋರಾಟ ನಡೆಯುತ್ತಲೇ ಇತ್ತು. ಎಸ್ ಎಂ ಕೃಷ್ಣ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಒಳಮೀಸಲಾತಿ ಬಗ್ಗೆ ಬೇಡಿಕೆ ತೀವ್ರಗೊಂಡಿತ್ತು. ಈ ಹಿನ್ನೆಲೆಯಲ್ಲಿ ಪ್ರತ್ಯೇಕ ಆಯೋಗ ರಚಿಸುವ ಪ್ರಸ್ತಾವ ಸರ್ಕಾರದ ಮುಂದೆ ಇತ್ತು. ಬಳಿಕ ಅಸ್ತಿತ್ವಕ್ಕೆ ಬಂದ ಧರ್ಮಸಿಂಗ್ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ, 2005ರಲ್ಲಿ ಅಧ್ಯಯನ ನಡೆಸಿ ಶಿಫಾರಸು ಮಾಡಲು ಎ.ಜಿ ಸದಾಶಿವ ನೇತೃತ್ವದಲ್ಲಿ ಆಯೋಗವನ್ನು ರಚಿಸಲಾಗಿತ್ತು. ಆಗ ಪರಿಶಿಷ್ಟ ಜಾತಿಗಳಿಗೆ ಇದ್ದ ಶೆ.15ರ ಮೀಸಲಾತಿಯನ್ನು ಎಡಗೈಗೆ ಶೆ.6, ಬಲಗೈಗೆ ಶೆ.5.5, ಅಸ್ಪೃಶ್ಯ ಉಪಜಾತಿಗಳಿಗೆ ಶೇ 3 ಹಾಗೂ ಈ ಮೂರು ಗುಂಪುಗಳಿಗೆ ಸೇರದ ಜಾತಿಗಳವರಿಗೆ ಶೇ 1ರಷ್ಟು ಮೀಸಲಾತಿ ನೀಡಬಹುದು ಎಂದು ಸದಾಶಿವ ಆಯೋಗವು 2012ರಲ್ಲೇ ಅಂದಿನ ಮುಖ್ಯಂತ್ರಿ ಡಿವಿ ಸದಾನಂದಗೌಡ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಸಲ್ಲಿಸಿದ್ದ ಶಿಫಾರಸು ಮಾಡಿತ್ತು.