Share this news

ಉಡುಪಿ : ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರನ್ನು ಕಾರ್ಕಳ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ಆ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಈಗಾಗಲೇ ವಶಕ್ಕೆ ಪಡೆದುಕೊಂಡ ಇಬ್ಬರು ಆರೋಪಿಗಳನ್ನು ಅಜ್ಞಾತ ಸ್ಥಳದಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗಿದ್ದು,‌ಬಂಧನದ ಕುರಿತ ಮಾಹಿತಿಯನ್ನು ಪೊಲೀಸರು ಅಲ್ಲಗಳೆದಿದ್ದಾರೆ. ಆದರೆ ಬಲ್ಲ ಮೂಲಗಳ ಪ್ರಕಾರ ಇಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆದು ಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಬಂಧಿತ ಆರೋಪಿಗಳ ಪೈಕಿ ಅಭಯ್‌ನನ್ನು ಪೊಲೀಸರು ಈಗಾಗಲೇ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದರು. ಉಳಿದ ಇಬ್ಬರು ಆರೋಪಿಗಳಾದ ಅಲ್ತಾಫ್ ಹಾಗೂ ರಿಚರ್ಡ್ ಕ್ಸೇವಿಯರ್‌ನ ನಾಲ್ಕು ದಿನಗಳ ಪೊಲೀಸ್ ಕಸ್ಟಡಿ ಅವಧಿ ಆ.27ಕ್ಕೆ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಕಾರ್ಕಳ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು.

ಇವರಿಬ್ಬರನ್ನು ಹೆಚ್ಚಿನ ತನಿಖೆ ಒಳಪಡಿಸಬೇಕಾಗಿರುವುದರಿಂದ ಮತ್ತೆ ಪೊಲೀಸ್ ವಶಕ್ಕೆ ನೀಡುವಂತೆ ಪೊಲೀಸರು ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅದರಂತೆ ಕೋರ್ಟ್ ಈ ಇಬ್ಬರು ಆರೋಪಿಗಳನ್ನು ಮತ್ತೆ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ.

ಪ್ರಕರಣದ ಸಂತ್ರಸ್ತೆಯನ್ನು ಕಾರ್ಕಳ ನ್ಯಾಯಾಲಯದ ಮುಂದೆ ಬುಧವಾರ ಪೊಲೀಸರು ಹಾಜರುಪಡಿಸಿದ್ದು, ಆಕೆ ನ್ಯಾಯಾದೀಶರ ಮುಂದೆ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಮುಚ್ಚಿದ ಲಕೋಟೆಯಲ್ಲಿ ಸೀಲ್ ಮಾಡಲಾಗಿದ್ದು, ಇದೀಗ ಆ ಹೇಳಿಕೆ ಪೊಲೀಸರ ಕೈಸೇರಿದೆ ಎಂದು ತಿಳಿದು ಬಂದಿದೆ. ಜಾರ್ಜ್‌ಶೀಟ್ ಸಲ್ಲಿಕೆ ಸಮಯದಲ್ಲಿ ಈ ಲಕೋಟೆ ಸೀಲ್‌ನ್ನು ತನಿಖಾಧಿಕಾರಿಗಳು ತೆರೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

                        

                          

                        

                          

 

`

Leave a Reply

Your email address will not be published. Required fields are marked *