ಉಡುಪಿ:ದೇಶದ ಕಾನೂನು ಎಲ್ಲರಿಗೂ ಒಂದೇ, ಕಾನೂನಿನ ಮುಂದೆ ಎಲ್ಲರೂ ಸಮಾನರು, ರಾಷ್ಟ್ರಪತಿಯಾಗಲಿ, ಸ್ಟಾರ್ ಆಗಲಿ, ಕೂಲಿ ಕಾರ್ಮಿಕನೇ ಆಗಲಿ. ಸರಕಾರ ಯಾರ ಒತ್ತಡಕ್ಕೂ ಮಣಿಯುವುದಿಲ್ಲ, ಆರೋಪಿ ನಟ ದರ್ಶನ್ ತೂಗುದೀಪ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಅವರು, ಉಡುಪಿ ಜಿಲ್ಲಾ ಪಂಚಾಯತ್ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ರೇಣುಕಾಸ್ವಾಮಿ ಕೊಲೆ ಪ್ರಕರಣದ ಕುರಿತು ಪ್ರತಿಕ್ರಿಯಿಸಿ, ಕಾನೂನಿನಲ್ಲಿ ಎಲ್ಲರೂ ಒಂದೇ,ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ. ರಾಜ್ಯ ಸರ್ಕಾರ ಕೂಡ ಯಾರ ಪರ ನಿಲ್ಲುವುದಿಲ್ಲ ಎಂದರು.
ಕಡಲ ಕೊರೆತ ತಡೆಗೆ 3 ಜಿಲ್ಲೆಗಳಿಗೆ ತಲಾ 5 ಕೋಟಿ ಬಿಡುಗಡೆ
ಕಡಲ ಕೊರೆತ ತಡೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ತಲಾ 5 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಕಡಲ ಕೊರೆತದ ಶಾಶ್ವತ ಪರಿಹಾರಕ್ಕಾಗಿ ಡಿಪಿಆರ್ ಸಿದ್ಧಪಡಿಸಲಾಗಿದ್ದು, ಇದಕ್ಕೆ ರಾಜ್ಯ ಸರ್ಕಾರದಿಂದ ಮಾತ್ರ ಪರಿಹಾರ ನೀಡಲು ಸಾಧ್ಯವಿಲ್ಲ.ಕೇಂದ್ರ ಮತ್ತು ರಾಜ್ಯ ಸರ್ಕಾರ ಸಮನ್ವಯತೆಯೊಂದಿಗೆ ಕೆಲಸ ಮಾಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.