ಬೆಂಗಳೂರು: ಕರ್ನಾಟಕದಾದ್ಯಂತ ಸುಮಾರು 6 ಕಡೆಗಳಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ದೂರುಗಳು ಬಂದ ಹಿನ್ನೆಲೆ ದಾಳಿ ಮಾಡಿರುವ ಲೋಕಾಯುಕ್ತ ಪೊಲೀಸರು, ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಬೆಂಗಳೂರಿನ 12 ಕಡೆ ಸೇರಿ ರಾಜ್ಯದ 6 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡುವ ಮೂಲಕ ಭ್ರಷ್ಟರಿಗೆ ಬಿಸಿಮುಟ್ಟಿಸಲಾಗಿದೆ.
ಲೋಕಾಯುಕ್ತ ಪೊಲೀಸರು ಬೆಂಗಳೂರಿನ 12, ತುಮಕೂರಿನ 7, ಬೆಂಗಳೂರು ಗ್ರಾಮಾಂತರದ 8, ಯಾದಗಿರಿ 5, ಮಂಗಳೂರಿನ 4, ಮತ್ತು ವಿಜಯಪುರದ 4 ಕಡೆ ಲೋಕಾಯುಕ್ತ ದಾಳಿ ಮಾಡಿದೆ.
ತುಮಕೂರು ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರಾಜಶೇಖರ್, ಮಂಗಳೂರು : ಸರ್ವೆ ಸೂಪರ್ವೈಸರ್ ಮಂಜುನಾಥ್, ವಿಜಯಪುರ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿ ರೇಣುಕಾ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯದ ಹೆಚ್ಚುವರಿ ನಿರ್ದೇಶಕ ಮುರಳಿ ಟಿವಿ,ಬೆಂಗಳೂರು ಕಾನೂನು ಮಾಪನಶಾಸ್ತ ಇಲಾಖೆಯ ನಿರೀಕ್ಷಕ ಹೆಚ್ಆರ್ ನಟರಾಜ್, ಹೊಸಕೋಟೆ ತಾಲೂಕು ಕಛೇರಿಯ ದ್ವಿತೀಯ ದರ್ಜೆ ಸಹಾಯಕ ಅನಂತ್ ಕುಮಾರ್,ಯಾದಗಿರಿ ಶಹಾಪುರ ತಾಲೂಕು ಕಚೇರಿಯ ಉಮಾಕಾಂತ್,
ಇದಲ್ಲದೇ ತುಮಕೂರಿನಲ್ಲಿ ಒಟ್ಟು ಏಳು ಕಡೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ನಿರ್ಮಿತಿ ಕೇಂದ್ರದ ಎಂಡಿ ರಾಜಶೇಖರ ಮತ್ತು ಅವರ ಸಹೋದರನ ಮನೆ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ.
ವಿಜಯಪುರ ನಗರದ ಸೆಂಟ್ ಜೋಸೆಫ್ ಶಾಲೆಯ ಹಿಂಭಾಗದಲ್ಲಿರುವ ಡಾ. ಬಿಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ ಸಾತಾರ್ಲೆ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ಎಸ್ಪಿ ಟಿ. ಮಲ್ಲೇಶ್ ಹಾಗೂ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಸೊಲ್ಲಾಪುರ ನಗರದ ಕೆಹೆಚ್ಬಿ ಪ್ರದೇಶದಲ್ಲಿರುವ ನಿವಾಸದ ಮೇಲೂ ಡಿವೈಎಸ್ಪಿ ಸುರೇಶ ರೆಡ್ಡಿ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ಮನೆಯಲ್ಲಿರುವ ದಾಖಲೆಗಳನ್ನು ಪರಿಶೀಲನೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಬೋದನಹೊಸಹಳ್ಳಿಯಲ್ಲಿರುವ ದ್ವಿತೀಯ ದರ್ಜೆ ಸಹಾಯಕ ಅನಂತ್ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ದೇವನಹಳ್ಳಿ ಹಾಗೂ ಹೊಸಕೋಟೆಯಲ್ಲಿ ಭೂ ಮಂಜೂರಾತಿ ವಿಭಾಗದಲ್ಲಿ ಕೆಲಸ ಮಾಡಿದ್ದ ಅನಂತ್, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಲೋಕಾ ದಾಳಿ ಮಾಡಿದೆ.
ದ.ಕನ್ನಡದಲ್ಲಿಯೂ ಲೋಕಾಯುಕ್ತ ದಾಳಿ ನಡೆದಿದ್ದು, ಲೋಕಾಯುಕ್ತ ಎಸ್ಪಿ ಕುಮಾರಚಂದ್ರ ನೇತೃತ್ವದಲ್ಲಿ ಮಂಗಳೂರಿನ ಬಿಜೈನಲ್ಲಿರುವ ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಲಾಗಿದೆ.