ಬೆಂಗಳೂರು: ಶಾಸಕರಾದ ಶಿವರಾಮ್ ಹೆಬ್ಬಾರ್ ಹಾಗೂ ಎಸ್ಟಿ ಸೋಮಶೇಖರ್ ಅವರನ್ನು ಬಿಜೆಪಿ ಹೈಕಮಾಂಡ್ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ. ಇವರು ಬಿಜೆಪಿಯಲ್ಲಿ ಇದ್ದುಕೊಂಡು ಕಾಂಗ್ರೆಸ್ ಜೊತೆ ಹೆಚ್ಚು ಗುರುತಿಸಿಕೊಂಡಿದ್ದರು. ಹೀಗಾಗಿ, ಅವರನ್ನು ಉಚ್ಚಾಟನೆ ಮಾಡುವ ನಿರ್ಧಾರವನ್ನು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ತೆಗೆದುಕೊಂಡಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರವನ್ನು ಶಿವರಾಮ್ ಹೆಬ್ಬಾರ್ ಪ್ರತಿನಿಧಿಸುತ್ತಿದ್ದಾರೆ. ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಎಸ್.ಟಿ.ಸೋಮಶೇಖರ್ ಮೂರನೇ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಈ ಮೊದಲು ಇಬ್ಬರೂ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿದ್ದರು. ಈ ಹಿಂದೆ ಇಬ್ಬರೂ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿವರಾಮ್ ಹೆಬ್ಬಾರ್ ಅವರು ಕಾರ್ಮಿಕ ಸಚಿವರಾದರೆ, ಸೋಮಶೇಖರ್ ಅವರು ಸಹಕಾರ ಸಚಿವರಾಗಿದ್ದರು.
2023ರಲ್ಲಿ ಇಬ್ಬರೂ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಬಂದರು. ಆದರೆ, ಈಗ ಶಿವರಾಮ್ ಹೆಬ್ಬಾರ್ ಹಾಗೂ ಸೋಮಶೇಖರ್ ಕಾಂಗ್ರೆಸ್ ಪಕ್ಷದ ಜೊತೆ ಹೆಚ್ಚು ಗುರುತಿಸಿಕೊಳ್ಳುತ್ತಿದ್ದರು. ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಕ್ಕಾಗಿ ಇಬ್ಬರೂ ಉಚ್ಚಾಟನೆ ಮಾಡಿ ಹೈ ಕಮಾಂಡ್ ಆದೇಶ ಹೊರಡಿಸಿದೆ.