

ಕಾರ್ಕಳ,ಆ.24: ಕಸ್ತೂರಿರಂಗನ್ ವರದಿ ಹಾಗೂ ಪರಿಸರ ಸೂಕ್ಷ್ಮ ವಲಯ ಘೋಷಣೆಯಿಂದ ಉಂಟಾಗಿರುವ ಗೊಂದಲಗಳನ್ನು ಸರ್ಕಾರ ಕೂಡಲೇ ಸರಿಪಡಿಸಬೇಕು.ಯಾವುದೇ ಕಾರಣಕ್ಕೂ ಅರಣ್ಯ ಪ್ರದೇಶದಲ್ಲಿನ ಜನವಸತಿಗೆ ತೊಂದರೆಯಾಗಬಾರದು. ಒಂದು ವೇಳೆ ಜನಾಭಿಪ್ರಾಯ ಪಡೆಯದೇ ವರದಿ ಜಾರಿಗೆ ಮುಂದಾದರೆ ಉಗ್ರ ಹೋರಾಟ ನಡೆಸುವುದಾಗಿ ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಮುಟ್ಲುಪಾಡಿ ಸತೀಶ್ ಶೆಟ್ಟಿ ಎಚ್ಚರಿಸಿದರು.
ಕಾರ್ಕಳ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2014ರಿಂದ ಕಸ್ತೂರಿರಂಗನ್ ವರದಿ ವಿರೋಧಿಸಿ 25ಕ್ಕೂ ಅಧಿಕ ಹೋರಾಟಗಳನ್ನು ನಡೆಸಲಾಗಿದೆ. ಅಂದಿನ ಸಂದರ್ಭದಲ್ಲಿ ಅರಣ್ಯ ಇಲಾಖೆಯಿಂದ ನೋಟಿಸ್ಗಳನ್ನೂ ನೀಡಲಾಗಿತ್ತು. ಇದೀಗ ಮತ್ತೆ ಹೋರಾಟಗಳು ಆರಂಭವಾಗಿದ್ದು, ಸರ್ಕಾರಗಳು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದರು.
ಮಾಧವ ಗಾಡ್ಗಿಳ್ ವರದಿ, ಹುಲಿ ಯೋಜನೆ ಹಾಗೂ ಕುದುರೆಮುಖ ವನ್ಯಜೀವಿ ವಿಭಾಗದ ಯೋಜನೆಗಳಿಂದಲೂ ರೈತರು ಆತಂಕಕ್ಕೊಳಗಾಗಿದ್ದರು. ಪರಿಸರ ಸಂರಕ್ಷಣೆ ಅಗತ್ಯವಾದರೂ, ಜನವಸತಿ ಪ್ರದೇಶ, ಕೃಷಿ ಪ್ರದೇಶ ಹಾಗೂ ಅರಣ್ಯ ಪ್ರದೇಶಗಳನ್ನು ಸ್ಪಷ್ಟವಾಗಿ ಗುರುತಿಸಿ ಗೊಂದಲ ನಿವಾರಿಸಬೇಕು ಎಂದು ಹೇಳಿದರು.
ಪ್ರಸ್ತುತ ರಾಜ್ಯದಲ್ಲಿ 1,446 ಗ್ರಾಮಗಳನ್ನು ಅಧಿಸೂಚನೆಯಲ್ಲಿ ಗುರುತಿಸಲಾಗಿದ್ದು, ಈಗ ಹಲವು ಗ್ರಾಮಗಳನ್ನು ಕೈಬಿಡಲಾಗಿದ್ದು, ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸ್ಪಷ್ಟತೆ ನೀಡಬೇಕು. ಜಿಲ್ಲಾಡಳಿತವು ಕಾಡು ಪ್ರದೇಶ, ಗ್ರಾಮ ಪ್ರದೇಶ ಮತ್ತು ಜನವಸತಿ ಪ್ರದೇಶಗಳನ್ನು ಗುರುತಿಸಿ ಸಮರ್ಪಕವಾಗಿ ಸರ್ವೆ ನಡೆಸಬೇಕು. ವೈಮಾನಿಕ ಸರ್ವೆಯನ್ನು ಒಪ್ಪುವುದಿಲ್ಲ. ಕಸ್ತೂರಿರಂಗನ್ ವರದಿಯ ಆಧಾರದ ಮೇಲಿನ ಗೊಂದಲಗಳನ್ನು ಸರಿಯಾಗಿ ಪರಿಶೀಲಿಸಿ ಅಗತ್ಯವಿದ್ದಲ್ಲಿ ವರದಿಯನ್ನು ಸಾರಾಸಗಟಾಗಿ ತಿರಸ್ಕರಿಸಬೇಕು ಎಂದು ಒತ್ತಾಯಿಸಿದರು.
ಕಾಡುಪ್ರಾಣಿಗಳ ಹಾವಳಿಯಿಂದ ಕೃಷಿ ನಾಶವಾಗುತ್ತಿದ್ದರೂ ಸಮರ್ಪಕ ಪರಿಹಾರ ದೊರೆಯುತ್ತಿಲ್ಲ. ವನ್ಯಜೀವಿಗಳ ಹಾವಳಿ ತಡೆಯಲು ಅರಣ್ಯ ಇಲಾಖೆ ತಡೆಗೋಡೆ ನಿರ್ಮಿಸಬೇಕು. ಏಳನೇ ಅಧಿಸೂಚನೆಯಲ್ಲಿರುವ ಗೊಂದಲಗಳನ್ನು ನಿವಾರಿಸಿ, ಮತ್ತೊಂದು ಅಧಿಸೂಚನೆ ಹೊರಡಿಸುವ ಮುನ್ನ ಸರ್ಕಾರ ಸ್ಪಷ್ಟವಾದ ಹಾಗೂ ಕ್ರಮಬದ್ಧ ಉತ್ತರ ನೀಡಬೇಕು ಎಂದರು.
ಕಾರ್ಕಳ ತಾಲೂಕಿನ 13 ಗ್ರಾಮಗಳ ವಿಚಾರದಲ್ಲೂ ಸ್ಪಷ್ಟತೆ ಅಗತ್ಯವಿದೆ. ಜನವಿರೋಧದ ಹಿನ್ನೆಲೆಯಲ್ಲಿ ಹುಲಿ ಯೋಜನೆಯನ್ನು ತಡೆಹಿಡಿಯಲಾಗಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಗೊಂದಲ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಹೋರಾಟ ಮುಂದುವರಿಯಲಿದೆ ಎಂದು ಸತೀಶ್ ಶೆಟ್ಟಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಕಾರ್ಯದರ್ಶಿ ಹರಿಶ್ಚಂದ್ರ ತೆಂಡುಲ್ಕರ್, ಸಾಮಾಜಿಕ ಕಾರ್ಯಕರ್ತ ಜಗದೀಶ್ ಶೆಟ್ಟಿ ಅಜೆಕಾರು, ಪ್ರಗತಿಪರ ನಾಗರಿಕ ಹೋರಾಟ ಸಮಿತಿ ಕೆರೆಬೆಟ್ಟು ಸಂಜೀವ ಶೆಟ್ಟಿ, ಪ್ರಗತಿಪರ ಕೃಷಿಕ ಸೋಜನ್ ಜೇಮ್ಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
.





.
.
.
.
.
.
.
.
.
.
.
.
.
.
.
.
.
.
.
.
